Advertisement

ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಕಲ್ಪಿಸಿ

06:12 PM Nov 20, 2021 | Team Udayavani |

ಗದಗ: ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಬಿಜೆಪಿ ಸದಸ್ಯರು ತಮ್ಮ ಮತ ನೀಡುವುದರ ಜೊತೆಗೆ, ಇತರೆ ಪಕ್ಷಗಳಿಗೆ ಹೋಗಬಹುದಾದ ಒಬ್ಬಿಬ್ಬರ ಮತಗಳನ್ನೂ ಬಿಜೆಪಿಗೆ ಸೆಳೆಯುವ ಸಂಕಲ್ಪ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕರೆ ನೀಡಿದರು.

Advertisement

ನಗರದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಬಿಜೆಪಿ ಘಟಕ ಶುಕ್ರವಾರ ಆಯೋಜಿಸಿದ್ದ ಜನ ಸ್ವರಾಜ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಪಡೆದಿದ್ದರೂ, ವಿಧಾನ ಪರಿಷತ್‌ನಲ್ಲಿ ಬಹುಮತದ ಕೊರತೆಯಿಂದಾಗಿ ಜನರ ಕಲ್ಯಾಣ ಮಸೂದೆಗಳು ಅಂಗೀಕಾರವಾಗುತ್ತಿಲ್ಲ.ಈ ಬಾರಿ ವಿಧಾನ ಪರಿಷತ್‌ ಚುನಾವಣೆಯ 25 ಸ್ಥಾನಗಳ ಪೈಕಿ 20 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಬಿಜೆಪಿ ಅಭ್ಯರ್ಥಿ ಯಾರೇ ಆಗಿದ್ದರೂ, ಮೊದಲ ಪ್ರಾಶಸ್ತ್ಯದ ಮತದಿಂದ ಗೆಲ್ಲಿಸಬೇಕು.ಪಕ್ಷದ ಗೆಲುವಿಗಾಗಿ ನಾಲ್ಕು ತಂಡಗಳಲ್ಲಿ ಪ್ರಚಾರ ನಡೆಸುತ್ತಿರುವುದಾಗಿ ತಿಳಿಸಿದರು.

ಕಾಂಗ್ರೆಸ್‌ ಮುಕ್ತ ಭಾರತ: ಒಂದು ಕಾಲದಲ್ಲಿ ಸಮಾಜದಲ್ಲಿ ಜಾತಿಯ ವಿಷ ಬೀಜ ಬಿತ್ತಿ, ಹೆಂಡ, ಹಣ, ಹಾಗೂ ತೋಳ್ಬಲದಿಂದ ಅಧಿ ಕಾರಕ್ಕೆ ಬರುತ್ತಿದ್ದ ಕಾಂಗ್ರೆಸ್‌, ಹೋದಲ್ಲೆಲ್ಲ ಅಧಿ ಕಾರ ಹಿಡಿಯುತ್ತಿತ್ತು. ಲೋಕಸಭೆಯಲ್ಲಿ ಅವರದ್ದೇ ದರ್ಬಾರ್‌ ಆಗಿತ್ತು. ಆದರೆ, ಅಧಿಕಾರದ ಮದದಿಂದ ಜನಹಿತ ಮರೆತ ಪರಿಣಾಮ ಲೋಕಸಭೆಯಲ್ಲಿ ಬೆರಳೆಣಿಕೆಯಷ್ಟೇ ಸದಸ್ಯರಿದ್ದಾರೆ. ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡು, ಕರ್ನಾಟಕದಲ್ಲಿ ಕೊಂಚ ಉಸಿರಾಡುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕಾಂಗ್ರೆಸ್‌ ಮುಕ್ತ ಭಾರತವಾಗಲಿದೆ ಎಂದು ಭವಿಷ್ಯ ನುಡಿದರು.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಸಂಬಂಧಿಸಿ ರೈತರಿಗೆ ದೊಡ್ಡ ಮೊತ್ತದ ಪರಿಹಾರ ನೀಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಮಾತನಾಡಿ, ಮಳೆಗೂ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೂ ಅವಿನಾಭಾವ ಸಂಬಂಧವಿದೆ. ಅವರು ಅಧಿಕಾರ ವಹಿಸಿಕೊಂಡಾಗಲೆಲ್ಲ ಪ್ರಕೃತಿ ವಿಕೋಪ ಉಂಟಾಗಿ ಸಾಕಷ್ಟು ಹಾನಿಯಾದರೂ ರಾಜ್ಯದ ಅಭಿವೃದ್ಧಿಗೆ ಯಾವುದೇ ತೊಡಕಾಗದಂತೆ ನೋಡಿಕೊಂಡಿದ್ದಾರೆ. ಅವರ ನೇತೃತ್ವದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಮೇಲ್ಮನೆಯಲ್ಲಿ ಬಹುಮತ ಪಡೆಯಬೇಕಾಗಿದೆ. ಆದ್ದರಿಂದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ಮನವಿ ಮಾಡಿದರು.

ಸಾರಿಗೆ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಕಾಂಗ್ರೆಸ್‌ ನಾಯಕರು ಮುಂದಿನ ಮುಖ್ಯಮಂತ್ರಿ ನಾನು ನಾನು ಎಂದು ಪರಸ್ಪರ ಬಡಿದಾಡಕೊಳ್ಳುತ್ತಿದ್ದಾರೆ. ಅವರು 2023ರ ವರೆಗೂ ಕಾಯಬೇಕಿಲ್ಲ. ಇದೇ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ತಕ್ಕಪಾಠ ಕಲಿಸಲಾಗುವುದು ಎಂದು ಹೇಳಿದರು.

Advertisement

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಲ್ಲಿ 60 ವರ್ಷಗಳ ಕಾಲ ಆಡಳಿತ ನಡೆಸಿದ್ದು ಕಾಂಗ್ರೆಸ್‌. ದೀನ-ದಲಿತರು, ಅಲ್ಪಸಂಖ್ಯಾತರನ್ನು ಮತ ಬ್ಯಾಂಕ್‌ ಮಾಡಿಕೊಂಡಿರುವ ಕಾಂಗ್ರೆಸ್‌, ಅವರ ಉದ್ಧಾರಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಈಗಾಗಲೇ ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ 23 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ. ಕೇಂದ್ರದಲ್ಲಿ ಮೋದಿ ಆಡಳಿತವಿದ್ದು, 2023ರ ಒಳಗಾಗಿ ನಡೆಯಲಿರುವ 6 ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಧೂಳಿಪಟವಾಗಲಿದ್ದು, ಕಾಂಗ್ರೆಸ್‌ ಮುಕ್ತ ಭಾರತವಾಗಲಿದೆ ಎಂದು ಭವಿಷ್ಯ ನುಡಿದರು.

ಇದರಿಂದಾಗಿ ಕಾಂಗ್ರೆಸ್‌ ನಾಯಕರು ಹತಾಷರಾಗಿ, ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ದಲಿತರ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್‌ ಮುಖಂಡರು ಮತಯಾಚನೆಗೆ ಬಂದರೆ, ಛೀಮಾರಿ ಹಾಕಬೇಕು ಎಂದು ವಾಗ್ಧಾಳಿ ನಡೆಸಿದರು.

ವೇದಿಕೆ ಮೇಲೆ ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ಪಕ್ಷದ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಪ್ರಮುಖರಾದ ರಾಜೂ ಕುರಡಗಿ ಮತ್ತಿತರರು ಉಪಸ್ಥಿತರಿದ್ದರು.

ಸಂವಿಧಾನ ಶಿಲ್ಪಿ ಡಾ|ಬಿ.ಆರ್‌.ಅಂಬೇಡ್ಕರ್‌ ಅವರನ್ನು ಅತ್ಯಂತ ಅವಮಾನವೀಯ ರೀತಿಯಲ್ಲಿ ನಡೆಸಿಕೊಂಡಿರುವ ಕಾಂಗ್ರೆಸ್‌ ಪಕ್ಷಕ್ಕೆ ದೀನ, ದಲಿತರ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಬಿಜೆಪಿ ಎಂದೂ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಎಂಬ ಭೇದಭಾವ ಮಾಡಿಲ್ಲ. ಭಾಗ್ಯ ಲಕ್ಷ್ಮೀ ಬಾಂಡ್‌ ಶೇ.70 ರಷ್ಟು ಮುಸ್ಲಿಂ ಮಹಿಳೆಯರಿಗೆ ಅನುಕೂಲವಾಗಿದೆ. ಹೊಟ್ಟೆಪಾಡಿಗಾಗಿ ದಲಿತರು ಬಿಜೆಪಿ ಸೇರುತ್ತಿದ್ದಾರೆ ಎಂದು ಹೇಳಿರುವ ಸಿದ್ದರಾಮಯ್ಯ ಬಹಿರಂಗವಾಗಿ ಕ್ಷಮೆ ಕೋರಬೇಕು.
ಬಿ.ಎಸ್‌.ಯಡಿಯೂರಪ್ಪ. ಮಾಜಿ
ಮುಖ್ಯಮಂತ್ರಿ

ದೇಶದ ಹಿತಕ್ಕಾಗಿ ಹಗಲಿರುಳು ದುಡಿಯುವ ಪ್ರಧಾನಿ ಮೋದಿ ಫುಲ್‌ ಟೈಂ ದೇಶದ ಜನ ನಾಯಕರಾಗಿದ್ದಾರೆ. ಅಧಿ ಕಾರಕ್ಕಾಗಿಯೇ ಓಡಾಡುವ, ಕನಸು ಕಾಣುವ ರಾಹುಲ್‌ ಗಾಂಧಿ ಪಾರ್ಟ್‌ ಟೈಂ ರಾಜಕಾರಣಿ.ಚುನಾವಣಾ ಸಂದರ್ಭದಲ್ಲಿ ಮಾತ್ರ ಆ್ಯಕ್ಟಿವ್‌ ಆಗಿರುತ್ತಾರೆ.
ಬಿ.ಶ್ರೀರಾಮುಲು, ಸಾರಿಗೆ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next