Advertisement

ಗೋವಾ : ಕಾಂಗ್ರೆಸ್ ಪಕ್ಷದ ಮತಗಳು ಒಡೆದು ಬಿಜೆಪಿಗೆ ಲಾಭ?

05:09 PM Feb 11, 2022 | Team Udayavani |

ಪಣಜಿ: ಗೋವಾ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಉಳಿದಿದೆ. ಫೆ.14 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬಿಜೆಪಿಗೆ ಅಧಿಕಾರ ಉಳಿಸಿಕೊಳ್ಳಲು ಹೆಚ್ಚಿನ ಪ್ರಯತ್ನ ನಡೆಸಿದ್ದು, ಕಾಂಗ್ರೆಸ್ ಪಕ್ಷವು ಬಿಜೆಪಿಗೆ ನೇರ ಸ್ಫರ್ಧೆಯೊಡ್ಡಿದೆ. ಕಳೆದ ಬಾರಿ ಕಾಂಗ್ರೆಸ್ ಪಕ್ಷದ 10 ಮಂದಿ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಂಡಿರುವುದೇ ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾದಂತೆ ಕಂಡುಬರುತ್ತಿದೆ.

Advertisement

ಗೋವಾದ ಎಲ್ಲ 40 ಕ್ಷೇತ್ರಗಳಲ್ಲಿಯೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆದರೆ ಕಳೆದ ಬಾರಿ ಸರ್ಕಾರ ಸ್ಥಾಪಿಸಲು ಬಿಜೆಪಿಗೆ ಬೆಂಬಲ ನೀಡಿದ್ದ ಗೋವಾ ಫಾರ್ವರ್ಡ್ ಪಕ್ಷ ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದೊಂದಿಗೆ ಕೈಜೋಡಿಸಿದ್ದರೆ, ಎಂಜಿಪಿ ಪಕ್ಷವು ಟಿಎಂಸಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇಷ್ಟೇ ಅಲ್ಲದೆಯೇ ಬಿಜೆಪಿಯಲ್ಲಿನ ಕೆಲ ಟಿಕೆಟ್ ಆಕಾಂಕ್ಷಿ ನಾಯಕರು ಪಕ್ಷೇತರರಾಗಿ ಬಿಜೆಪಿ ವಿರುದ್ಧವೇ ಸ್ಫರ್ಧಿಸಿದ್ದಾರೆ. ಇದರಿಂದಾಗಿ ಪ್ರಸಕ್ತ ಬಾರಿ ಬಿಜೆಪಿಗೆ ಪೂರ್ಣ ಬಹುಮತ ಲಭಿಸದಿದ್ದರೆ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಕಷ್ಟವಾಗಿದೆ. ಬಿಜೆಪಿ ವಿರೋಧಿ ಪಕ್ಷಗಳೆಲ್ಲವೂ ಪ್ರಸಕ್ತ ಚುನಾವಣೆಯಲ್ಲಿ ಒಟ್ಟಾಗಿರುವುದರಿಂದ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಪೂರ್ಣ ಬಹುಮತ ಪಡೆಯುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು ಗೋವಾದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ.

ಟಿಕೆಟ್ ಆಕಾಂಕ್ಷಿಗಳು ಪಕ್ಷೇತರರಾಗಿ ಸ್ಫರ್ಧೆ

ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರ್ರಿಕರ್ ಪುತ್ರ ಉತ್ಪಲ್ ಗೆ ಪಣಜಿ ಕ್ಷೇತ್ರದಲ್ಲಿ ಸ್ಫರ್ಧಿಸಲು ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಉತ್ಪಲ್ ಪರೀಕರ್ ಪಕ್ಷೇತರರಾಗಿ ಸ್ಫರ್ಧಿಸಿದ್ದಾರೆ. ಈ ವಿಷಯ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಇಷ್ಟೇ ಅಲ್ಲದೆಯೇ ಮಾಂದ್ರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೇಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪಾರ್ಸೇಕರ್ ರವರಿಗೆ ಬಿಜೆಪಿ ಟಿಕೆಟ್ ನೀಡದ ಕಾರಣ ಅವರು ಬಿಜೆಪಿ ವಿರುದ್ಧ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಬಿಜೆಪಿ ಸೇರಿದ್ದ ದಯಾನಂದ ಸೋಪ್ಟೆ ಸ್ಫರ್ಧಿಸಿದ್ದಾರೆ. ಕಲಂಗುಟ್ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿಯಿಂದ ಆಯ್ಕೆಯಾಗುತ್ತಿದ್ದ ಮೈಕಲ್ ಲೋಬೊ ಕಾಂಗ್ರೇಸ್ ಸೇರಿದ್ದಾರೆ. ಹೀಗೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಪರೀಕ್ಷೆ ಎದುರಾಗಿದೆ.

 ರಾಜಕೀಯ ಲೆಕ್ಕಾಚಾರ

Advertisement

ಪ್ರಸಕ್ತ ಬಾರಿ ಬಿಜೆಪಿ ಮನೋಹರ್ ಪರ್ರಿಕರ್ ರವರ ನೇತೃತ್ವವಿಲ್ಲದೆಯೇ ಮೊದಲ ಬಾರಿ ವಿಧಾನಸಭಾ ಚುನಾವಣೆ ಸ್ಫರ್ಧಿಸುತ್ತಿದೆ. ಬಿಜೆಪಿ ವಿರೋಧಿ ಪಕ್ಷಗಳೆಲ್ಲವೂ ಪ್ರಸಕ್ತ ಚುನಾವಣೆಯಲ್ಲಿ ಒಟ್ಟಾಗಿದ್ದು ಬಿಜೆಪಿಗೆ ಮುಳುವಾಗುವ  ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ. ಇನ್ನೊಂದು ಲೆಕ್ಕಾಚಾರದ ಪ್ರಕಾರ ಪ್ರಸಕ್ತ ಚುನಾವಣೆಯಲ್ಲಿ ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಟಿಎಂಸಿ ಪಕ್ಷಗಳು ಸ್ಪರ್ಧಿಸಿರುವುದರಿಂದ ಕಾಂಗ್ರೆಸ್ ಪಕ್ಷದ ಮತಗಳು ಒಡೆದು ಇದರ ಲಾಭ ಬಿಜೆಪಿಗೆ ಆಗುವ ಸಾಧ್ಯತೆಯಿದೆ ಎಂದೂ ಹೇಳಲಾಗುತ್ತಿದೆ. ಇದರಿಂದಾಗಿ ಮತದಾರರು ಪ್ರಸಕ್ತ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬಹುಮತ ನೀಡಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next