Advertisement

ಉತ್ತಮ ಮಳೆ: ಮಂಗಳೂರಿನಲ್ಲಿ ಕೃತಕ ನೆರೆ

10:46 PM Sep 10, 2020 | mahesh |

ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆದಿದ್ದು, ಮಂಗಳೂರು ನಗರದಲ್ಲಿ ಗುರುವಾರ ಭಾರೀ ಮಳೆಯಾಗಿದೆ. ಮಂಗಳೂರಿನಲ್ಲಿ ಗುರುವಾರ ಬೆಳಗ್ಗಿನಿಂದಲೇ ಉತ್ತಮ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಮನೆಗಳಿಗೆ, ಅಂಗಡಿಗಳಿಗೆ ನೀರು ನುಗಿದೆ. ನಗರದ ಕೊಟ್ಟಾರ, ಅಳಕೆ, ಕೊಟ್ಟಾರ ಚೌಕಿ, ನಂತೂರು, ಪಂಪ್‌ವೆಲ್‌, ಪಡೀಲ್‌, ಬರ್ಕೆ ಸೇರಿದಂತೆ ಸುತ್ತಮುತ್ತ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ, ಕನ್ಯಾನ, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ವೇಣೂರು, ಮೂಡು ಬಿದಿರೆ, ಮಡಂತ್ಯಾರು, ಕಡಬ ಸೇರಿದಂತೆ ಜಿಲ್ಲೆಯ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.

Advertisement

ರೆಡ್‌ ಅಲರ್ಟ್‌: ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಡಿಸಿ ಸೂಚನೆ
ಶನಿವಾರ ಮುಂಜಾನೆಯ ವರೆಗಿನ 48 ತಾಸುಗಳ ಅವಧಿಯಲ್ಲಿ ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಕರಾವಳಿಯಲ್ಲಿ ಸೆ. 11 ಮತ್ತು 12ರಂದು ರೆಡ್‌ ಅಲರ್ಟ್‌ ಹಾಗೂ ಸೆ. 13ರಂದು ಆರೆಂಜ್‌ ಅಲರ್ಟ್‌ ಘೋಷಿಸಿದೆ. ಉಡುಪಿ ಜಿಲ್ಲೆಯಲ್ಲಿ ಸೆ. 11, 12, 13ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು/ನಿಯೋಜನೆಗೊಂಡ ನೋಡಲ್‌ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಸೇವೆಗೆ 1077, ದೂರವಾಣಿ ಸಂಖ್ಯೆ: 0820-2574802 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next