Advertisement

ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಎಸ್.ಆರ್. ಪಾಟೀಲ

05:22 PM Jul 06, 2021 | Team Udayavani |

ಹಾವೇರಿ: ಕೋವಿಡ್ ಮಹಾಮಾರಿ ನಿಯಂತ್ರಿಸುವ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದ್ದು,  ಸಾವಿರಾರು ಜನರ ಸಾವಿಗೆ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ದೂರಿದರು.

Advertisement

ನಗರದ ಪ್ರತಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಇಂದು ಕೋವಿಡ್ ಲಸಿಕೆಯ ಕೊರತೆ ಎದ್ದು ಕಾಣುತ್ತಿದೆ. ಸುಮಾರು ೫ ಕೋಟಿ ಜನರಿಗೆ ಇನ್ನು ಎರಡನೇ ಹಂತದ ಲಸಿಕಾ ಕಾರ್ಯವನ್ನು ಪೂರ್ಣಗೊಳಿಸುವ ಅಗತ್ಯತೆ ಇದ್ದರೂ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿರುವುದು ಖಂಡನೀಯ. ಜಿಲ್ಲೆಯಲ್ಲಿ ೧೨ ಲಕ್ಷ ಜನರು ಕೋವಿಡ್ ಲಸಿಕೆ ಪಡೆಯಲು ಅರ್ಹರಿದ್ದಾರೆ. ಆದರೆ ಇದುವರೆಗೆ ೫೩ ಸಾವಿರ ಜನರಿಗೆ ಲಸಿಕೆ ನೀಡಲಾಗಿದ್ದು, ಕೇವಲ ಶೇ.೪.೩೭ರಷ್ಟು ಪ್ರಗತಿ ಸಾಧಿಸಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದರು.

ಕೋವಿಡ್ ಎರಡನೇ ಅಲೆ ರಾಜ್ಯದಲ್ಲಿ ಹರಡುವ ವಿಚಾರವನ್ನು ತಜ್ಞರು ಮುಂಚಿತವಾಗಿಯೇ ತಿಳಿಸಿದ್ದರೂ ಸರ್ಕಾರ ಸಮರ್ಪಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಿಲ್ಲ. ಆಕ್ಸಿಜನ್, ವೆಂಟಿಲೇಟರ್, ಆಂಬ್ಯುಲೆನ್ಸ್ ಸೇರಿದಂತೆ ವೈದ್ಯಕೀಯ ಸೌಲಭ್ಯಗಳ ಕೊರತೆ ಉಲ್ಬಣಗೊಂಡು ಅನೇಕರ ಸಾವಿಗೆ ರಾಜ್ಯ ಸರ್ಕಾರವೇ ಕಾರಣವಾಗಿದೆ. ಮೇ ತಿಂಗಳದ ವೇಳೆ ರಾಜ್ಯಕ್ಕೆ ಪ್ರತಿನಿತ್ಯ ೧೮೦೦ ಕೆಎಲ್ ಆಕ್ಸಿಜನ್ ಅವಶ್ಯಕತೆ ಇತ್ತು. ಈ ವೇಳೆ ರಾಜ್ಯ ಸರ್ಕಾರ ಉದಾಸೀನತೆ ತೋರಿದ ಕಾರಣ ಹೈಕೋರ್ಟ್ ಮಧ್ಯಪ್ರವೇಶಿಸಿ ೧೨೦೦ ಕೆಎಲ್ ಆಕ್ಸಿಜನ್ ಪೂರೈಸಲು ಸೂಚನೆ ನೀಡಿತು. ಈ ಆದೇಶದ ವಿರುದ್ಧ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಸರ್ಕಾರದ ಉದಾಸೀನತೆಗೆ ಸಾಕ್ಷಿಯಾಗಿದೆ. ಸರ್ಕಾರದ ಮೇಲ್ಮನವಿಯನ್ನು ಉಚ್ಛ ನ್ಯಾಯಾಲಯ ತಿರಸ್ಕರಿಸಿರುವುದು ವಿಶೇಷವಾಗಿದ್ದು ಇಂದು ಸಾರ್ವಜನಿಕರಿಗೆ ಸರ್ಕಾರಕ್ಕಿಂತ ನ್ಯಾಯಾಲಯಗಳ ಮೇಲೆಯೇ ವಿಶ್ವಾಸ ಹೆಚ್ಚಾಗಿದೆ. ಬ್ಲ್ಯಾಕ್ ಪಂಗಸ್ ವಿಚಾರದಲ್ಲಿಯೂ ಸಹ ಇದೇ ಮಾದರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದರು.

ಕೋವಿಡ್ ಸಂಭವನೀಯ ಮೂರನೇ ಅಲೆ ಆಗಸ್ಟ್ ತಿಂಗಳಲ್ಲಿ ಹರಡಬಹುದೆಂಬ ವರದಿಯನ್ನು ತಜ್ಞರು ನೀಡಿದ್ದು, ಆ ಬಗ್ಗೆಯೂ ಸರ್ಕಾರ ಸಮರ್ಪಕವಾಗಿ ಪೂರ್ವ ಸಿದ್ಧತೆ ಕೈಗೊಂಡಿಲ್ಲ. ರಾಜ್ಯದಲ್ಲಿ ಮಕ್ಕಳ ತಜ್ಞ ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಸೇವೆಯಲ್ಲಿರುವ ವೈದ್ಯರಿಗೆ ಅಗತ್ಯ ಬಿದ್ದ ಸಂದರ್ಭದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡುವ ಕುರಿತು ಪೂರ್ವ ತರಬೇತಿ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ಸರ್ಕಾರದಲ್ಲಿ ಭ್ರಷ್ಟಾಚಾರ, ಅಧಿಕಾರದ ದೂರುಪಯೋಗ ತಾಂಡವವಾಡುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆಡಳಿತದ ಬಗ್ಗೆ ಜನರಲ್ಲಿ ಅಸಮಧಾನ ಬುಗಿಲೆದ್ದಿದೆ. ಮುಂದಿನ ದಿನಗಳಲ್ಲಿ ಜನರೇ ಇವರಿಗೆ ತಕ್ಕ ಪಾಠ ಕಲಿಸಲಿದ್ದು,  ಬೆಲೆ ಏರಿಕೆಯಿಂದ ಈಗಾಗಲೇ ಜನತೆ ಕಂಗೇಟ್ಟಿದೆ. ಪೆಟ್ರೋಲ್, ಡೀಸೆಲ್ ದರ ಗಗನಕ್ಕೆ ಏರಿದೆ. ಕಾಂಗ್ರೆಸ್ ಸರ್ಕಾರವಿದ್ದಾಗ ೩೫೦ ರೂ.,ಗೆ ದೊರಕುತ್ತಿದ್ದ ಅಡುಗೆ ಅನಿಲದ ಸಿಲಿಂಡರ್ ಬೆಲೆ ಇಂದು ಸಾವಿರದ ಗಡಿ ಸಮೀಪಿಸಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ಸರ್ಕಾರವಿದ್ದಾಗ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆಗೆ ಮುಂದಾಗುತ್ತಿದ್ದ ಬಿಜೆಪಿ ಇಂದು ನಿದ್ದೆಗೆ ಜಾರಿದೆ ಎಂದು ವ್ಯಂಗ್ಯವಾಡಿದ ಅವರು, ಈ ಎಲ್ಲ ಅಂಶಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಗ್ರಾಮಮಟ್ಟದಿಂದ ಪ್ರತಿಭಟನೆ ನಡೆಸಲಿದೆ ಎಂದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ಮನೋಹರ ತಹಶೀಲ್ದಾರ, ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕೆಪಿಸಿಸಿ ಸದಸ್ಯ ಪ್ರಕಾಶಗೌಡ ಪಾಟೀಲ, ಡಾ.ಸಂಜಯ ಡಾಂಗೆ, ಎಂ.ಎಂ.ಮೈದೂರ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next