Advertisement

ಬೆಳೆಹಾನಿ ಪರಿಹಾರಕ್ಕೆ ಮಾರ್ಗಸೂಚಿ

08:43 AM Jun 09, 2020 | Suhan S |

ಧಾರವಾಡ: ಮುಸುಕಿನ ಜೋಳ ಬೆಳೆದ ಪ್ರತಿ ರೈತರಿಗೆ 5,000 ರೂ. ಆರ್ಥಿಕ ನೆರವನ್ನು 2020-21ನೇ ಸಾಲಿನ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳ ಆಯ್ಕೆಗೆ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

Advertisement

2019-20ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದ ಇ-ಆಡಳಿತ ವತಿಯಿಂದ ಕೈಗೊಳ್ಳಲಾದ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲಾಗಿರುವ ಬೆಳೆ ವಿವರಗಳ ಆಧಾರದ ಮೇರೆಗೆ ನೆರವು ಪಾವತಿಸಲಾಗುವುದು. ಬೆಳೆ ಸಮೀಕ್ಷೆಯಲ್ಲಿ ಇರುವಂತೆ ಮುಸುಕಿನ ಜೋಳ ಬೆಳೆಗಾರರ ಪಟ್ಟಿಯನ್ನು ಗ್ರಾಪಂ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಕಚೇರಿಯ ನಾಮಫಲಕದಲ್ಲಿ ಪ್ರದರ್ಶಿಸಬೇಕು. ಈ ಪಟ್ಟಿಯಲ್ಲಿ ದಾಖಲಾಗದೇ ಇರುವ ಮುಸುಕಿನ ಜೋಳ ಬೆಳೆಗಾರರಿದ್ದರೆ ಅಂತಹ ರೈತರಿಂದ ಅರ್ಜಿ ಪಡೆದು ಹೋಬಳಿ ಮಟ್ಟದಲ್ಲಿ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಿಗರನ್ನೊಳಗೊಂಡ ತಂಡ ರಚಿಸಿ, ಕೃಷಿ ಬೆಳೆಗಳ ತಾಕುಗಳನ್ನು ಪರಿಶೀಲಿಸಿ, ಸ್ಥಳೀಯವಾಗಿ ಪಂಚನಾಮೆ ಮಾಡಿಕೊಂಡು ಪರಿಹಾರ ವಿತರಿಸಲು ತಾಲೂಕು ಮಟ್ಟದ ಸಮಿತಿಗೆ ಶಿಫಾರಸು ಮಾಡಬೇಕು.

ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ ಅವರ ಅಧ್ಯಕ್ಷತೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರನ್ನು ಒಳಗೊಂಡಂತೆ ಸಮಿತಿ ರಚಿಸಿ ಹೋಬಳಿ ಮಟ್ಟದ ಶಿಫಾರಸಿನಂತೆ ಪರಿಶೀಲಿಸಿ ಆರ್ಥಿಕ ನೆರವಿಗೆ ಜಿಲ್ಲಾ ಸಮಿತಿಗೆ ಶಿಫಾರಸು ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಪಂ ಸಿಇಒ, ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಮತ್ತು ಉಪ ಕೃಷಿ ನಿರ್ದೇಶಕರನ್ನೊಳಗೊಂಡಂತೆ ರಚಿಸಿರುವ ಸಮಿತಿಯಿಂದ ಅನುಮೋದನೆ ಪಡೆಯಬೇಕು. ಆರ್ಥಿಕ ನೆರವನ್ನು ಜಿಲ್ಲಾಮಟ್ಟದ ಜಂಟಿ ಕೃಷಿ ನಿರ್ದೇಶಕರಿಗೆ ಬಿಡುಗಡೆ ಮಾಡಲಾಗುವುದು. ಜಿಲ್ಲಾ ಸಮಿತಿ ಅನುಮೋದಿಸಿದ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next