ಅಹಮದಾಬಾದ್: ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಗುಜರಾತ್ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಗುರುವಾರ (ಜೂನ್ 02) ಗಾಂಧಿನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ:ಬೈಕ್ ಗಳ ಭೀಕರ ಅಪಘಾತ: ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಸಾವು
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಚಿಕ್ಕ ಸೈನಿಕನ ರೀತಿ ದೇಶದ ಸೇವೆ ಕೆಲಸದಲ್ಲಿ ತೊಡಗಿಕೊಳ್ಳುವುದಾಗಿ ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು.
ಭಾರತೀಯ ಜನತಾ ಪಕ್ಷ ಸೇರ್ಪಡೆ ಮೊದಲು ಹಾರ್ದಿಕ್ ಪಟೇಲ್ ಅಹಮದಾಬಾದ್ ನಲ್ಲಿರುವ ತಮ್ಮ ನಿವಾಸದಲ್ಲಿ ಪೂಜೆ ನೆರವೇರಿಸಿದ್ದರು. ಬಳಿಕ ಗಾಂಧಿನಗರದ ಪಕ್ಷದ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಥಳೀಯ ಮುಖಂಡರು ಬರಮಾಡಿಕೊಂಡಿದ್ದರು ಎಂದು ವರದಿ ಹೇಳಿದೆ.
ರಾಷ್ಟ್ರೀಯ ಹಿತಾಸಕ್ತಿ, ರಾಜ್ಯ, ಸಾರ್ವಜನಿಕರ ಹಾಗೂ ಸಾಮಾಜಿಕ ಹಿತಾಸಕ್ತಿಯ ನೆಲೆಯಲ್ಲಿ ಇಂದು ಬಿಜೆಪಿ ಸೇರ್ಪಡೆಗೊಳ್ಳುವ ಮೂಲಕ ಇಂದಿನಿಂದ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ಪಟೇಲ್ ಟ್ವೀಟ್ ನಲ್ಲಿ ತಿಳಿಸಿದ್ದರು.
ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಗಾಂಧಿನಗರದಲ್ಲಿರುವ ಪಕ್ಷದ ಕಚೇರಿಯ ಹೊರಭಾಗದಲ್ಲಿ ಹಾರ್ದಿಕ್ ಪಟೇಲ್ ಗೆ ಸ್ವಾಗತ ಕೋರುವ ಪೋಸ್ಟರ್ ಗಳನ್ನು ಹಾಕಲಾಗಿತ್ತು. 2019ರಲ್ಲಿ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಗುಜರಾತ್ ನಲ್ಲಿ ಪಕ್ಷದ ಮುಖಂಡರು ತಮ್ಮನ್ನು ಕಡೆಗಣಿಸುತ್ತಿರುವುದಾಗಿ ಆರೋಪಿಸಿ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.