Advertisement

ಹರ್‌ ಘರ್‌ ತಿರಂಗಾ ಅಭಿಯಾನ; ಕೋಟಿ ಮನೆಗಳಲ್ಲಿ ರಾರಾಜಿಸಲಿದೆ ತ್ರಿವರ್ಣಧ್ವಜ

12:21 AM Aug 09, 2022 | Team Udayavani |

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ “ಹರ್‌ ಘರ್‌ ತಿರಂಗಾ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಹಿತ ವಿವಿಧ ಅಧಿಕಾರಿ ಗಳಿಗೆ ಸೂಚಿಸಿದರು.

Advertisement

ಈ ಕಾರ್ಯಕ್ರಮವನ್ನು ಕಾಟಾಚಾರಕ್ಕೆ ಮಾಡದೆ ದೇಶದ ಮೇಲಿನ ಅಭಿಮಾನ, ಪ್ರೀತಿಯಿಂದ ಆಯೋಜಿಸಬೇಕು. ಅರ್ಥಪೂರ್ಣವಾಗಿ ಆಚರಿಸ ಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸ ಬೇಕು ಎಂದು ಸೋಮವಾರ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸಿದ ಬಳಿಕ ಅವರು, ಅಧಿಕಾರಿಗಳಿಗೆ ಸಲಹೆ ನೀಡಿದರು.

ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚು ಮನೆ ಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಧ್ವಜ ವಿತರಣೆ ನಡೆಯುತ್ತಿದೆ. ಆ. 13ರಂದೇ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ವಾತಾವರಣ ನಿರ್ಮಾಣವಾಗಬೇಕು ಎಂದು ಸೂಚಿಸಿದರು.

ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಸರ ಕಾರಿ ಕಚೇರಿಗಳಲ್ಲಿ ಈ ಮೂರು ದಿನ ಬೆಳಗ್ಗೆ ಧ್ವಜಾ ರೋಹಣ ಮಾಡಿ, ಸಂಜೆ ಇಳಿಸಬೇಕು. ಮನೆಗಳಲ್ಲಿ ಆ. 13ರಂದು ಧ್ವಜಾರೋಹಣ ಮಾಡಿ, 15ರ ವರೆಗೆ ಇರಿಸಬಹುದಾಗಿದೆ ಎಂದು ತಿಳಿಸಿದರು.

ಸರಕಾರದ ಮುಖ್ಯ ಕಾರ್ಯದರ್ಶಿಗಳು ಮತ್ತೊಮ್ಮೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ನಿಗದಿತ ಗುರಿ ಸಾಧಿಸಲು ಮಾರ್ಗದರ್ಶನ ನೀಡುವಂತೆ ಸೂಚಿಸಿದರು.

Advertisement

ಇದರೊಂದಿಗೆ ಕ್ವಿಟ್‌ ಇಂಡಿಯಾ ಚಳವಳಿಯ ಸ್ಮರಣಾರ್ಥ ಆ. 9ರಿಂದ 14ರ ನಡುವೆ ಆಯಾ ಜಿಲ್ಲೆಗಳ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸಮ್ಮಾನಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಇದರಲ್ಲಿ ಭಾಗಿಯಾಗುವಂತೆ ಸೂಚಿಸಿದರು.

ಸಿಎಂ ಸೂಚನೆಯೇನು?
-ಸರಕಾರಿ ಕಚೇರಿಗಳಲ್ಲಿ ಆ. 13ರಿಂದ
15ರ ವರೆಗೆ ಪ್ರತೀ ದಿನ ಬೆಳಗ್ಗೆ ಧ್ವಜಾ ರೋಹಣ ಮಾಡಿ, ಸಂಜೆ ಇಳಿಸಬೇಕು.
-ಮನೆಗಳಲ್ಲಿ ಆಗಸ್ಟ್‌ 13ರಂದು ಧ್ವಜಾ ರೋಹಣ ಮಾಡಿ, 15ರ ವರೆಗೆ ಇರಿಸಬಹುದು.
-ಆ. 9ರಿಂದ 14ರ ವರೆಗೆ
ಆಯಾ ಜಿಲ್ಲೆಗಳ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸಮ್ಮಾನಿಸಬೇಕು.

Advertisement

Udayavani is now on Telegram. Click here to join our channel and stay updated with the latest news.

Next