Advertisement

ಹಾವೇರಿ ಸರ್ಕಾರಿ ಆಸ್ಪತ್ರೆಗಳಿಗೆ ಹೈಟೆಕ್‌ ಸ್ಪರ್ಶ

07:08 PM Aug 26, 2021 | Team Udayavani |

ಹಾವೇರಿ: ಕೋವಿಡ್‌ ಬಂದ ಒಂದೂವರೆ ವರ್ಷದಲ್ಲಿ ಸಾಕಷ್ಟು ಸಾವು-ನೋವುಗಳು ಸಂಭವಿಸಿದ್ದು ಒಂದೆಡೆಯಾದರೆ, ಇದೀಗ ಜಿಲ್ಲಾಸ್ಪತ್ರೆ ಹಾಗೂ ತಾಲೂಕಿನ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಸೇರಿದಂತೆ ರೋಗಿಗಳಿಗೆ ತುರ್ತು ಸೇವೆ ನೀಡುವಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸರ್ಕಾರಿ ಆಸ್ಪತ್ರೆಗಳು ಹೈಟೆಕ್‌ ಸ್ಪರ್ಶ ಪಡೆದುಕೊಂಡಿವೆ.

Advertisement

ಜಿಲ್ಲೆಯಲ್ಲಿ ಕೋವಿಡ್‌ ಮೊದಲು ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕಿನ ಆಸ್ಪತ್ರೆಗಳಲ್ಲಿ ಹೇಳಿಕೊಳ್ಳುವಂತಹ ಮೂಲ ಸೌಕರ್ಯಗಳು ಇರಲಿಲ್ಲ. ಆದರೆ, ಕೋವಿಡ್‌ ಮಹಾಮಾರಿ ಎದುರಾದ ಸಂದರ್ಭದಲ್ಲಿ ರೋಗಿಗಳಿಗೆ ಅಗತ್ಯ ಸೇವೆ ಒದಗಿಸುವ ದೃಷ್ಟಿಯಿಂದ ಸರ್ಕಾರ ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ತರ್ತು ಚಿಕಿತ್ಸೆಗೆ ಬೇಕಾದ ಅತ್ಯಾಧುನಿಕ ಯಂತ್ರೋಪಕರಣಗಳು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಖಾಸಗಿ ಆಸ್ಪತ್ರೆಗಳಿಗೆ ಕಮ್ಮಿ ಇಲ್ಲದಂತೆ ರೋಗಿಗಳಿಗೆ ಸೇವೆ ನೀಡಲಾಗುತ್ತಿದೆ.

ಮೂಲ ಸೌಕರ್ಯ ಹೆಚ್ಚಳ: ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ಈ ಹಿಂದೆ ಅಗತ್ಯ ಬೆಡ್‌ಗಳು ಇಲ್ಲದೇ ರೋಗಿಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದರು. ಆದರೆ, ಈಗ ಹೆಚ್ಚುವರಿಯಾಗಿ ಬೆಡ್‌ಗಳನ್ನು ಒದಗಿಸಲಾಗಿದೆ. ಈ ಹಿಂದೆ ಜಿಲ್ಲಾಸ್ಪತ್ರೆಗಳಲ್ಲಿ ಕೇವಲ 30 ಆಕ್ಸಿಜನ್‌ ಬೆಡ್‌ಗಳಿದ್ದವು. ಆದರೆ, ಈಗ ಅದರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಅಗತ್ಯವಾಗಿ ಬೇಕಾಗುವ ಆಕ್ಸಿಜನ್‌ ಪೂರೈಸಲು ಜಿಲ್ಲಾಸ್ಪತ್ರೆ ಆವರಣದಲ್ಲಿ 6 ಕೆಎಲ್‌ ಸಾಮರ್ಥ್ಯದ ಆಕ್ಸಿಜನ್‌ ಟ್ಯಾಂಕ್‌ ಅಳವಡಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಕೇವಲ 2 ವೆಂಟಿಲೇಟರ್‌ ಇದ್ದವು. ಆದರೆ, ಈಗ 40 ವೆಂಟಿಲೇಟರ್‌ ಸೌಲಭ್ಯ ಕಲ್ಪಿಸಲಾಗಿದೆ. ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಿಸಲಾಗಿದ್ದು, ಈ ಹಿಂದೆ 10 ಬೆಡ್‌ಗಳಿದ್ದವು. ಆದರೆ, ಈಗ 66 ಐಸಿಯು ಬೆಡ್‌ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ ಒಂದು ಸಾವಿರ ಲೀಟರ್‌ ಸಾಮರ್ಥ್ಯ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ತಲಾ 500 ಲೀಟರ್‌ ಸಾಮರ್ಥ್ಯದ ಆಕ್ಸಿಜನ್‌ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲೆಯ ಶಿಗ್ಗಾವಿ, ಸವಣೂರ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ 100 ವೆಂಟಿಲೇಟರ್‌ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲೆಯ ತಾಲೂಕು ಹಾಗೂ ಸಮುದಾಯ ಆಸ್ಪತ್ರೆಗಳಿಗೆ ಒಟ್ಟಾರೆ 315 ಆಮ್ಲಜನಕ ಕಾನ್ಸ್ಂಟ್ರೇಟರ್  ಗಳನ್ನು ಪೂರೈಸಲಾಗಿದೆ. ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಸಿಬ್ಬಂದಿ ಕೊರತೆ ಕಂಡು ಬರುತ್ತಿದ್ದು, ಜಿಲ್ಲಾಸ್ಪತ್ರೆಯಲ್ಲಿ ಸುಮಾರು 20-25 ಸ್ಟಾಫ್‌ ನರ್ಸ್‌ಗಳ ಅವಶ್ಯಕತೆ ಇದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿ:ಆ.28 ರಿಂದ ಸಿಇಟಿ ಪರೀಕ್ಷೆ : 530 ಕೇಂದ್ರಗಳಲ್ಲಿ ನಡೆಸಲು ಸಿದ್ಧತೆ : ಸಚಿವ ಅಶ್ವತ್ಥ ನಾರಾಯಣ

Advertisement

3ನೇ ಅಲೆ ಎದುರಿಸಲು ಸಿದ್ಧತೆ: ಸಂಭವನೀಯ ಕೋವಿಡ್‌ 3ನೇ ಅಲೆಯನ್ನು ಆರಂಭಿಕ ಹಂತದಲ್ಲಿಯೇ ನಿಯಂತ್ರಿಸಲು ಜಿಲ್ಲಾಡಳಿತ
ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಮಕ್ಕಳ ಮೇಲೆ ಸೋಂಕಿನ ಪರಿಣಾಮ ತಟೆಗಟ್ಟುವ ಹಿನ್ನೆಲೆಯಲ್ಲಿ ಸೊನ್ನೆಯಿಂದ 16 ವರ್ಷದೊಳಗಿನ
4 ಲಕ್ಷಕ್ಕೂ ಅಧಿಕ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ “ವಾತ್ಸಲ್ಯ’ ಆರೋಗ್ಯ ಕಾರ್ಡ್‌ ನೀಡಲಾಗಿದೆ. ಮಕ್ಕಳಿಗಾಗಿ ಜಿಲ್ಲಾಸ್ಪತ್ರೆಯಲ್ಲಿ
30 ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ತಲಾ 25 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗಾಗಿ 68 ವೆಂಟಿಲೇಟರ್‌, 18 ಸಿರಿಂಜ್‌ ಪಂಪ್‌ಗ್ಳು,
ಇನ್‌ಫ್ಯೂಜನ್‌ ಕಲ್ಪಿಸಲಾಗಿದೆ. 54 ಬೈಪ್ಯಾಪ್‌ ಉಪಕರಣ, 17 ಮಕ್ಕಳ ತಜ್ಞರನ್ನು ನಿಯೋಜಿಸಿ ಕೋವಿಡ್‌ ಸೋಂಕಿತ ಮಕ್ಕಳ ಚಿಕಿತ್ಸೆಗೆ ಎಲ್ಲ
ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಮೊದಲಾದ ಎಡವಟ್ಟುಗಳು: ರಾಜ್ಯದೆಲ್ಲೆಡೆ ಕೋವಿಡ್‌ ಎರಡನೇ ಅಲೆಯ ಅಬ್ಬರ ಜೋರಾಗಿದ್ದಾಗ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಕಡಿಮೆ ಇದ್ದವು. ಆಗ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದ ಪರಿಣಾಮ ಸರಿಯಾದ ಚಿಕಿತ್ಸೆ ಸಿಗದೇ ಎರಡನೇ ಅಲೆಯಲ್ಲಿಯೇ 439 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೋವಿಡ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಬ್ಬ ವೈದ್ಯರು ಮತ್ತು ಸಿಬ್ಬಂದಿಗೆ 12 ಗಂಟೆಗಳ ಕಾಲ ಕರ್ತವ್ಯಕ್ಕೆ
ಹಾಕಿದ್ದರಿಂದ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ, ಆರೈಕೆ ನೀಡುವುದು ಕಷ್ಟವಾಯಿತು. ಸೋಂಕಿತರು ಆಸ್ಪತ್ರೆಗೆ ದಾಖಲಾದ ತಕ್ಷಣ ಅವರಿಗೆ ಸೂಕ್ತ ರೀತಿಯ ಆರೋಗ್ಯ ತಪಾಸಣೆ ಕೈಗೊಳ್ಳದಿರುವುದು, ಕೋವಿಡ್‌ ಮಾರ್ಗಸೂಚಿಯಂತೆ ಐಸಿಯು ಮತ್ತು ವಾರ್ಡ್‌ಗಳಲ್ಲಿ ಸಮರ್ಪಕವಾಗಿ ಸೋಂಕಿತರ ಚಿಕಿತ್ಸೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದು, 50 ಸೋಂಕಿತರು ಆಕ್ಸಿಜನ್‌ ಸ್ಯಾಚುರೇಶನ್‌ ಶೇ.30ಕ್ಕಿಂತ ಕಡಿಮೆ ಇದ್ದಾಗ ಆಸ್ಪತ್ರೆಗೆ ದಾಖಲಾಗಿದ್ದು, ಸೋಂಕಿತರನ್ನು ತಡವಾಗಿಕೋವಿಡ್‌ ಕೇರ್‌ ಸೆಂಟರ್‌ ಮತ್ತು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಕಾರ್ಯಕರ್ತರು ಸಮರ್ಪಕವಾಗಿ ಕಾರ್ಯನಿರ್ವಹಣೆ ಮಾಡದಿರುವುದು, ಕೋವಿಡ್‌ ಸೋಂಕಿತರನ್ನು ಪತ್ತೆ ಹಚ್ಚುವಲ್ಲಿ ವಿಳಂಬ ಮಾಡಿದ್ದರಿಂದ ಜಿಲ್ಲೆಯಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿವೆ.

ಕೋವಿಡ್‌ ಎರಡೂ ಅಲೆಗಳು ಎದುರಾದ ಸಂದರ್ಭದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಅಗತ್ಯ ಆಕ್ಸಿಜನ್‌ ಪೂರೈಸಲು 6 ಕೆಎಲ್‌ ಸಾಮರ್ಥ್ಯದ ಆಕ್ಸಿಜನ್‌ ಟ್ಯಾಂಕ್‌ ಅಳವಡಿಸಲಾಗಿದೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ಒಂದು ಸಾವಿರ ಲೀಟರ್‌ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ 500 ಲೀಟರ್‌ ಸಾಮರ್ಥ್ಯದ ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪಿಸಲಾಗುತ್ತಿದೆ. ಇದಲ್ಲದೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಬೆಡ್‌, ಐಸಿಯು ಬೆಡ್‌ ಹಾಗೂ ವೆಂಟಿಲೇಟರ್‌ಗಳು ಕೊರತೆಯಾಗಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
-ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ, ಹಾವೇರಿ

ಸಂಭವನೀಯ ಕೋವಿಡ್‌ ಮೂರನೇ ಅಲೆ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಾತ್ಸಲ್ಯ ಮಕ್ಕಳ ಆರೋಗ್ಯ ತಪಾಸಣಾ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಸೊನ್ನೆಯಿಂದ 16 ವರ್ಷದೊಳಗಿನ 4 ಲಕ್ಷಕ್ಕೂ ಅಧಿ ಕ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ವಾತ್ಸಲ್ಯ ಆರೋಗ್ಯ ಕಾರ್ಡ್‌ ನೀಡಲಾಗಿದೆ. ನ್ಯೂನತೆ ಕಂಡುಬಂದ ಮಕ್ಕಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ, ಪೌಷ್ಟಿಕ ಆಹಾರ ವಿತರಣೆ ಮಾಡಲಾಗಿದೆ. ಅಲ್ಲದೇ, ಜಿಲ್ಲೆಯಲ್ಲಿ ಕೋವಿಡ್‌ ಲಸಿಕಾ ಕಾರ್ಯಕ್ರಮ ಚುರುಕುಗೊಳಿಸಲಾಗಿದೆ.
-ಮಹಮ್ಮದ್‌ ರೋಷನ್‌, ಜಿಪಂ ಸಿಇಒ, ಹಾವೇರಿ

ಕೋವಿಡ್‌ ಸೋಂಕಿನ ಮೊದಲು ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಪರದಾಡುವಂತಾಗಿತ್ತು. ಆದರೆ, ಈಗ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದರಿಂದ ತರ್ತು ಸಂದರ್ಭದಲ್ಲಿ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಸಿಗುವಂತಾಗಿದೆ. ಆದರೆ, ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕಂಡು ಬರುತ್ತಿದ್ದು, ಅಗತ್ಯ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು.
-ಸಂತೋಷ ದಶಮನಿ, ಸಾರ್ವಜನಿಕ

ಕೋವಿಡ್‌ ಮಹಾಮಾರಿ ಎದುರಾದ ಸಂದರ್ಭದಲ್ಲಿ ರೋಗಿಗಳಿಗೆ ಅಗತ್ಯ ಸೇವೆ ಒದಗಿಸುವ ದೃಷ್ಟಿಯಿಂದ ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ
ಹೆಚ್ಚುವರಿಯಾಗಿ ಆಕ್ಸಿಜನ್‌ ಬೆಡ್‌, ವೆಂಟಿಲೇಟರ್‌, ಐಸಿಯು ಬೆಡ್‌ ಸೌಲಭ್ಯ ಕಲ್ಪಿಸಿದೆ. ಜತೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ 6 ಕೆಲ್‌ ಸಾಮರ್ಥ್ಯದ
ಆಕ್ಸಿಜನ್‌ ಟ್ಯಾಂಕ್‌ ಅಳವಡಿಸಲಾಗಿದೆ.1 ಸಾವಿರ ಲೀಟರ್‌ ಸಾಮರ್ಥ್ಯದ ಆಕ್ಸಿಜನ್‌ ಉತ್ಪಾದನಾ ಘಟಕ ಸಹ ಸ್ಥಾಪಿಸಲಾಗುತ್ತಿದೆ.
-ಪಿ.ಆರ್‌.ಹಾವನೂರ, ಜಿಲ್ಲಾಶಸ್ತ್ರ ಚಿಕಿತ್ಸಕ,ಜಿಲ್ಲಾಸ್ಪತ್ರೆ ಹಾವೇರಿ

ಕೋವಿಡ್‌ 3ನೇ ಅಲೆಯ ಆತಂಕ ಎದುರಾಗುವ ಹಿನ್ನೆಲೆಯಲ್ಲಿ ಈಗಾಗಲೇ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಮಕ್ಕಳ ಚಿಕಿತ್ಸೆಗಾಗಿ ವಿಶೇಷ ವಾರ್ಡ್‌, ಹೆಚ್ಚುವರಿ ಬೆಡ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೋವಿಡ್‌ ಮೊದಲೆರಡು ಅಲೆಗಳಲ್ಲಿ ಎದುರಾದ ಸಮಸ್ಯೆಗಳು ಗಮನದಲ್ಲಿದ್ದು, ಸಂಭವನೀಯ ಮೂರನೇ ಅಲೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡಲು ಮುಂಜಾಗ್ರತೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಕೋವಿಡ್‌ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜನತೆ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು.
ಎಚ್‌.ಎಸ್‌.ರಾಘವೇಂದ್ರಸ್ವಾಮಿ,
ಡಿಎಚ್‌ಒ, ಹಾವೇರಿ

-ವೀರೇಶ ಮಡ್ಲೂರ

Advertisement

Udayavani is now on Telegram. Click here to join our channel and stay updated with the latest news.

Next