ಹಾಸನ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ದಾಳಿ ನಡೆಸಿದ್ದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒತ್ತಾಯಿಸಿದರು.
ಮಹಾಶಿವರಾತ್ರಿಯ ಪ್ರಯುಕ್ತ ತಮ್ಮ ಹುಟ್ಟೂರು ಹರದನಹಳ್ಳಿಯ ಈಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಮತಾ ಬ್ಯಾನರ್ಜಿ ಅವರ ಎಡಗಾಲು ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅವರ ಎದುರಾಳಿಗಳು ದಾಳಿ ನಡೆಸುವ ಮಟ್ಟಕ್ಕೆ ಹೋಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ರಾಜಕೀಯದಲ್ಲಿ ಸೋಲು, ಗೆಲುವು ಸಾಮಾನ್ಯ, ಮಹಿಳಾ ಮುಖ್ಯಮಂತ್ರಿಯೊಬ್ಬರ ಮೇಲೆ ದಾಳಿ ನಡೆಸುವ ಮಟ್ಟಕ್ಕೆ ರಾಜಕೀಯ ಪರಿಸ್ಥಿತಿ ಹೋಗಬಾರದು. ನಾನು ನಂದಿಗ್ರಾಮದಲ್ಲೇ ಸ್ಪರ್ಧಿಸುತ್ತೇನೆ ಎಂದು ಮಮತಾ ಪಣ ತೊಟ್ಟು ಹೋರಾಟಕ್ಕಿಳಿದಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ನಾನು ಪ್ರಾರ್ಥಿಸುತ್ತೇನೆ ಎಂದರು.
ಹಾಸನ ಜಿಲ್ಲೆಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದೆ. ಆದರೆ, ಈಗ ನನ್ನ ಆರೋಗ್ಯ ಪರಿಸ್ಥಿತಿ ಚೆನ್ನಾಗಿಲ್ಲ, ಆರೋಗ್ಯ ಸರಿ ಹೋದ ನಂತರ ನಾನು ಪ್ರವಾಸ ಕೈಗೊಳ್ಳುತ್ತೇನೆ ಎಂದ ಅವರು, ಯಾರ್ಯಾರು ಹೇಗೆ ನಡೆದುಕೊಂಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಮಧು ಬಂಗಾರಪ್ಪ ಅವರು ಪಕ್ಷ ಬಿಡೋ ವಿಚಾರವಾಗಿ ಪ್ರತಿಕ್ರಿಯಿಸುವುದಿಲ್ಲ. ಆ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೆ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ವಿವರಿಸಿದರು.
ಸಿದ್ದರಾಮಯ್ಯ ಹೇಳಿದ್ದಕ್ಕೆ ಈಗ ಚುನಾವಣೆ ನಡೆಯುವುದಿಲ್ಲ. ಈಗ ಚುನಾವಣೆ ನಡೆದರೆ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತದೆ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಮತ್ತು ಅವರ ಪಕ್ಷ ಎಷ್ಟು ಮತ ಪಡೆದುಕೊಂಡಿದ್ದರು ಎಂಬುದು ನಮಗೂ ಗೊತ್ತಿದೆ. ಈಗ ಚುನಾವಣೆ ನಡೆಯಲ್ಲ. ಆದ್ದರಿಂದ ಅನಾವಶ್ಯಕ ಚರ್ಚೆ ಬೇಡ ಎಂದು ದೇವೇಗೌಡರು ಹೇಳಿದರು.