ಬೆಂಗಳೂರು: ಜೆಡಿಎಸ್ನ “ಆತ್ಮಾವಲೋಕನ’ ಮುಂದುವರಿದಿದ್ದು, ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ , ತಾಲೂಕು ಪಂಚಾಯತ್ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಕಲ್ಪದೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಕೆಲವು ಕಠಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಾಲ್ಕನೇ ದಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆ ಗಳ ಜಿಲ್ಲಾ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಕುಮಾರಸ್ವಾಮಿ ಮಾತನಾಡಿದರು.
ಪಕ್ಷದ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಬದಲಾಯಿಸಿ ಯುವಜನರಿಗೆ ಆದ್ಯತೆ ನೀಡುತ್ತೇವೆ. ಪಕ್ಷ ಕಟ್ಟುವ ಉತ್ಸಾಹಿಗಳಿಗೆ ಹಾಗೂ ಬದ್ಧತೆಯಿಂದ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು. ಮುಂದಿನ ಚುನಾವಣೆಗಳನ್ನು ಜಿಲ್ಲಾ , ತಾಲೂಕು, ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಎಲ್ಲ ಹಂತದಲ್ಲೂ ಬದಲಾವಣೆ ಖಚಿತ ಎಂದು ಕುಮಾರಸ್ವಾಮಿ ಹೇಳಿದರು.
ಜಿಲ್ಲೆ ಗಳಲ್ಲಿ ಸಭೆ ಮಾಡಿ ಜಿಲ್ಲಾ ಘಟಕಗಳನ್ನು ಸರಿಪಡಿಸಲಾಗುವುದು. ಪಕ್ಷ ಸಂಘಟನೆ ಮಾಡದಿರುವ ಜಿಲ್ಲಾ ಧ್ಯಕ್ಷರನ್ನು ಹಾಗೂ ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡಲಾಗದವರನ್ನು ಬದಲಾಯಿಸಲಾಗುವುದು ಎಂದು ಹೇಳಿದರು.
Related Articles
ಸಭೆಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಶಾಸಕರಾದ ನೇಮಿರಾಜ್ ನಾಯಕ್, ರಾಜುಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಸಹಿತ ಆಯಾ ಜಿಲ್ಲೆ ಗಳ ಅಧ್ಯಕ್ಷರು, ಹಿರಿಯ ನಾಯಕರು, ಶಾಸಕರು, ಅಭ್ಯರ್ಥಿಗಳು ಭಾಗಿಯಾಗಿದ್ದರು.