Advertisement

ಸಿದ್ದು ಮೌನವಾದರೆ ಸರ್ಕಾರ ಸುಸೂತ್ರ

06:00 AM Aug 31, 2018 | Team Udayavani |

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ 100 ದಿನ ಪೂರೈಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

Advertisement

ಇತ್ತೀಚಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗುವ ಕುರಿತು ನೀಡುತ್ತಿರುವ ಹೇಳಿಕೆಗಳಿಂದ ಉದ್ಭವಿಸುತ್ತಿರುವ ಗೊಂದಲ, ಕೆಲವು ಶಾಸಕರು ಸಿದ್ದರಾಮಯ್ಯ ಅವರೊಂದಿಗೆ ಗೌಪ್ಯ ಮಾತುಕತೆಗಳನ್ನು ನಡೆಸುತ್ತಿರುವುದು, ಕಾಂಗ್ರೆಸ್‌ನ ಕೆಲವು ಸ್ಥಳೀಯ ನಾಯಕರು ಮೈತ್ರಿಗೆ ಮುಜುಗರವಾಗುವಂತಹ ಹೇಳಿಕೆಗಳನ್ನು ನೀಡುತ್ತಿರುವುದು ಮುಂತಾದ ಅಂಶಗಳನ್ನು ಮುಖ್ಯಮಂತ್ರಿಗಳು ರಾಹುಲ್‌ ಗಾಂಧಿ ಅವರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ಹೇಳಿವೆ.

ಸರ್ಕಾರ ರಚನೆಯಾದಾಗಿನಿಂದಲೂ ವಿವಾದಾತ್ಮಕ ಹೇಳಿಕೆ ನೀಡಿ ಗೊಂದಲ ಮೂಡಿಸುವ ಕೆಲಸ ಕೆಲವರಿಂದ ನಿರಂತರವಾಗಿ ನಡೆಯುತ್ತಿದೆ. ಇದರಿಂದಾಗಿ ಸರ್ಕಾರ ಸುಸೂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರಿಗೆ ತಾಕೀತು ಮಾಡಿ ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಸಮನ್ವಯ ಸಮಿತಿ ಸಭೆ ನಿಗದಿ ವಿಚಾರದಲ್ಲಿಯೂ ಅನಗತ್ಯವಾಗಿ ಗೊಂದಲ ಮೂಡಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಅನಾಹುತ ಸಂಭವಿಸಿದ್ದರಿಂದ ಇಡೀ ಸರ್ಕಾರ ಅತ್ತ ಗಮನಹರಿಸಿ ಪರಿಹಾರ ಕಾರ್ಯಗಳಲ್ಲಿ ನಿರತವಾಗಿತ್ತು. ಅಂತಹ ಸಂದರ್ಭದಲ್ಲಿ ಸಮನ್ವಯ ಸಮಿತಿ ಸಭೆ ನಡೆಸಲು ಆಗಲಿಲ್ಲ. ಆದರೆ, ಅದನ್ನೇ ದೊಡ್ಡದು ಮಾಡಲಾಯಿತು. ಸಿದ್ದರಾಮಯ್ಯ ಅವರು ಹಾಸನದಲ್ಲಿ ನೀಡಿದ ಹೇಳಿಕೆ ನಂತರ ಕೆಲವು ಶಾಸಕರು ಹಾಗೂ ಸಚಿವರು ತಮ್ಮದೇ ಆದ ಧಾಟಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಇದರಿಂದಲೂ ಗೊಂದಲ ಉಂಟಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಚ್‌.ಡಿ. ಕುಮಾರಸ್ವಾಮಿ ಭೇಟಿ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸಹ ಇದ್ದು, ಎಲ್ಲ ವಿಚಾರಗಳ ಬಗ್ಗೆ ಪರಿಲಿಶೀಲಿಸುವಂತೆ ರಾಹುಲ್‌ಗಾಂಧಿ ಸೂಚಿಸಿದರು ಎಂದು ಹೇಳಲಾಗಿದೆ. ಕುಮಾರಸ್ವಾಮಿಯವರು ಹೇಳಿದ ಎಲ್ಲ ವಿಚಾರಗಳನ್ನೂ ಸಮಾಧಾನದಿಂದ ಆಲಿಸಿದ ರಾಹುಲ್‌ಗಾಂಧಿ ಈ ಕುರಿತಂತೆ ರಾಜ್ಯ ನಾಯಕರಿಗೆ ಸೂಕ್ತ ನಿರ್ದೇಶನ ನೀಡುವುದಾಗಿ ತಿಳಿಸಿದರು ಎನ್ನಲಾಗಿದೆ.

Advertisement

ಈ ಮಧ್ಯೆ, ಸರ್ಕಾರಕ್ಕೆ ಸಹಕಾರ ಕೊಟ್ಟಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಲು ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದೆ. ಈ ವೇಳೆ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ-ಮಂಡಳಿಗಳ ನೇಮಕ ಕುರಿತು ಶೀಘ್ರ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ವಿಚಾರ ಚರ್ಚಿಸಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಆದರೆ, ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ನಾಯಕರು ಮೂಡಿಸುತ್ತಿರುವ ಗೊಂದಲಗಳ ಬಗ್ಗೆ ಅವರು ರಾಹುಲ್‌ ಗಾಂಧಿ ಗಮನಕ್ಕೆ ತಂದಿದ್ದು ನಿಜ ಎಂದು ಮೂಲಗಳು ತಿಳಿಸಿವೆ.

ಸಮ್ಮಿಶ್ರ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಅವರ ಬಳಿ ಚರ್ಚೆ ಮಾಡುವಂತಹ ಗಂಭೀರ ವಿಚಾರಗಳೇನೂ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ, ಕಾಂಗ್ರೆಸ್‌ ನಾಯಕರನ್ನು ದೂರವಿಟ್ಟು ಪ್ರತ್ಯೇಕವಾಗಿ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿರುವುದರಿಂದ ಈ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ.

ಸರ್ಕಾರ 100 ದಿನ ಪೂರೈಸಿದೆ. ಅಧಿಕಾರ ನಡೆಸುವಲ್ಲಿ ಕಾಂಗ್ರೆಸ್‌ ಅಧ್ಯಕ್ಷರು ಕೊಟ್ಟಿರುವ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಲು ಭೇಟಿಯಾಗಿದ್ದೇನೆ. ಇದೊಂದು ಸೌಹಾರ್ದಯುತ ಭೇಟಿ. ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ-ಮಂಡಳಿಗಳ ನೇಮಕ ಕುರಿತು ಆದಷ್ಟು ಬೇಗ ತೀರ್ಮಾನ ಕೈಗೊಳ್ಳಿ ಎಂದು ಮನವಿ ಮಾಡಿದ್ದೇನೆ. ಉಳಿದಂತೆ ಬೇರೆ ಯಾವುದೇ ವಿಚಾರ ಚರ್ಚಿಸಿಲ್ಲ ಮತ್ತು ಚರ್ಚಿಸುವ ವಿಚಾರವೂ ಸಮ್ಮಿಶ್ರ ಸರ್ಕಾರದಲ್ಲಿ ಇಲ್ಲ.
– ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next