Advertisement

ಗೋ ಹತ್ಯೆ ನಿಷೇಧ ಸರಿ, ಆದರೆ ಈ ಸಮಸ್ಯೆಗಳಿಗೆ ಪರಿಹಾರವೇನು? ಕುಮಾರಸ್ವಾಮಿ

03:06 PM Dec 10, 2020 | keerthan |

ಬೆಂಗಳೂರು: ರಾಜ್ಯ ಸರ್ಕಾರದ ಗೋ ಹತ್ಯೆ ನಿಷೇಧ ಕಾಯ್ದೆಯ ಸಾಧಕ ಬಾಧಕಗಳ ಪಟ್ಟಿ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸರ್ಕಾರ ಎದುರು ಕೆಲವೊಂದು ಸಮಸ್ಯೆಗಳ ಪಟ್ಟಿ ಇರಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗೋ ಹತ್ಯೆ ನಿಷೇಧ ಕಾಯ್ದೆಯಿಂದ ರೈತಾಪಿ ವರ್ಗಗಳಿಗೆ ಆಗಬಹುದಾದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಎಚ್ ಡಿಕೆ ಟ್ವೀಟ್ ಗಳು

ಸರ್ಕಾರ ಜಾರಿಗೆ ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೈತ ದೃಷ್ಟಿಕೋನದಿಂದ ಇಲ್ಲಿ ಪರಾಮರ್ಶೆ ಮಾಡಲಾಗಿದೆ. ಪರಮಾರ್ಶೆ ವೇಳೆ ಮೂಡಿದ ಪ್ರಶ್ನೆಗಳನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ

ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್‌-ಬಿಜೆಪಿಗೆ ಮತಬ್ಯಾಂಕ್‌ನದ್ದೇ ಆದ್ಯತೆ. ಆದರೆ, ಹಾಲು ಉತ್ಪಾದನೆಯಲ್ಲಿ ತೊಡಗಿರುವ 24 ಲಕ್ಷ ರೈತ ಕುಟುಂಬಗಳಿಗೆ ಕಾಯ್ದೆ ಬಗ್ಗೆ ಇರಬಹುದಾದ ಆತಂಕಗಳನ್ನು ಜೆಡಿಎಸ್‌ ವಿಮರ್ಶಿಸಲು ಬಯಸುತ್ತದೆ. ಈ ಹಿಂದೆಯೇ ಹೇಳಿದಂತೆ ಜೆಡಿಎಸ್‌ ಒಂದು ಪಕ್ಷವಾಗಿ ಮಾತ್ರವಲ್ಲ, ರೈತ ಸಂಘವಾಗಿ ಕೆಲಸ ಮಾಡಲಿದೆ.

Advertisement

ಸರ್ಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‌ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ.

ಇದನ್ನೂ ಓದಿ:“ಎಲ್ಲಿದ್ದರು ಇವರೆಲ್ಲಾ”? ರೈತ ನಾಯಕರ ಮುಂದೆ ಸಾಲು ಸಾಲು ಪ್ರಶ್ನೆಯಿಟ್ಟ ಕುಮಾರಸ್ವಾಮಿ

ನಾವೆಲ್ಲರೂ ಹಸುಗಳನ್ನು ಪೂಜಿಸುತ್ತೇವೆ. ಆದರೆ, ರೈತ ಮಾತ್ರ ಅದನ್ನು ಪೋಷಿಸುವ ಹೊಣೆ ಹೊತ್ತಿದ್ದಾನೆ. ಮತ್ತು, ಅದರ ಮೇಲೆಯೇ ಅವನ ಜೀವನ ನಿರ್ವಹಣೆಯೂ ಅವಲಂಬಿತವಾಗಿದೆ. ಗೋವಿನ ಪೋಷಣೆ ಎಂಬುದೇ ಆರ್ಥಿಕ ಹೊರೆಗೆ ಕಾರಣವಾದರೆ, ಆತನ ನೆರವಿಗೆ ನಿಲ್ಲುವವರು ಯಾರು? ಇದು ಸಾಮಾನ್ಯ ರೈತನಿಗೆ ಇರುವ ಪ್ರಶ್ನೆ. ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು.

ರೈತ ತಾನು ಪೂಜಿಸುವ, ಪೋಷಿಸುವ, ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರ್ಕಾರ ಮರೆತಂತಿದೆ.

ರೈತರು ಈಗ ಹಾಲು ಉತ್ಪಾದನೆಗಾಗಿ ಪೋಷಿಸುತ್ತಿರುವ ಹಸುಗಳ ಗಂಡು ಕರುಗಳನ್ನು ಸಾಕುವುದು ಆರ್ಥಿಕವಾಗಿ ಹೊರೆ. ಅದು ಬೆಳೆದರೂ ಕೃಷಿ ಕಾರ್ಯಗಳಿಗೆ ಬಳಕೆಗೆ ಯೋಗ್ಯವಲ್ಲ. ಹೀಗಾದಾಗ ಹೈನುಗಾರಿಕೆಗೆ ಹೊಡೆತ ಬೀಳುತ್ತದೆ. ಕ್ರಮೇಣ ರೈತರು ಹೈನುಗಾರಿಕೆಯಿಂದಲೇ ವಿಮುಖವಾಗಬಹುದು. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗಬಹುದು ಎಂಬುದನ್ನು ಗಮನಿಸಲೇಬೇಕು.

ಸದ್ಯ ಸರ್ಕಾರ ತಂದಿರುವ ಕಾಯ್ದೆಯು ರೈತರು ಗಂಡು ಕರುಗಳನ್ನು, ವಯಸ್ಸಾದ ರಾಸುಗಳನ್ನು, ರೋಗಕ್ಕೀಡಾದ ಹಸುಗಳನ್ನು ಪೋಷಿಸಲೇಬೇಕಾದ ಷರತ್ತಿಗೆ ದೂಡುತ್ತದೆ. ಪ್ರಾಯೋಗಿಕವಲ್ಲದ ಷರತ್ತುಗಳ ಮೂಲಕ ಸರ್ಕಾರ ರೈತರ ಮೇಲೆ ಹೆಚ್ಚಿನ ಒತ್ತಡ ಹೇರಲು ಪ್ರಯತ್ನಿಸಿದರೆ, ರೈತರು ಹೈನುಗಾರಿಕೆಯಿಂದ ದೂರ ಸರಿಯಬಹುದು. ಆಗ ಹಾಲು ಉತ್ಪಾದನೆಗೆ ಹೊಡೆತ ಬೀಳಲಿದೆ.

ಜಾನುವಾರುಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಬೇಕು ಎಂದು ಹೇಳಲಾಗಿದೆ. ಚಿಕಿತ್ಸೆಗೇ ಈಗ ಪಶುವೈದ್ಯರ ಲಭ್ಯತೆ ಇಲ್ಲ. ಇನ್ನು ಪ್ರಮಾಣ ಪತ್ರಕ್ಕೆ ಲಭ್ಯರಾಗುವರೇ? ಪ್ರಮಾಣ ಪತ್ರ, ಅನುಮತಿ ಪಡೆಯುವ ಪ್ರಕ್ರಿಯೆ ದಂಧೆಯ ರೂಪ ತಾಳದೇ? ರೈತರ ಶೋಷಣೆ ನಡೆಯುವುದಿಲ್ಲವೇ?

ಪೊಲೀಸರು, ಅಧಿಕಾರಿಗಳಿಗೆ ರೈತರ ಡೈರಿ ಪರಿಶೀಲನೆಯ ಅವಕಾಶ ನೀಡಲಾಗಿದೆ. ಇದರಿಂದ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುವ ಸಾಧ್ಯತೆಗಳು ಸೃಷ್ಟಿಯಾಗುವ ಆತಂಕವಿದೆ. ರೈತರಲ್ಲಿ ಭಯದ ವಾತಾವರಣವೂ ಮೂಡುತ್ತದೆ. ಈ ನಿಯಮವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಇದು ಹಳ್ಳಿಗಳ ಸೌಹಾರ್ದ ವಾತಾವರಣವನ್ನೇ ಹಾಳುಮಾಡಬಹುದಲ್ಲವೇ?

ಜಾನುವಾರುಗಳನ್ನು ಸಾಗಿಸಲು ಪಶುಸಂಗೋಪನಾ ಇಲಾಖೆಯ ಅನುಮತಿ ಪಡೆಯಬೇಕು ಎಂದು ಹೇಳಲಾಗಿದೆ. ಇದು ಮುಂದೊಂದು ದಿನ ಲೈಸನ್ಸ್‌ ರಾಜ್‌ ಪದ್ಧತಿಗೆ ಕಾರಣವಾಗದೇ? ಅಧಿಕಾರಿಗಳು ಇದರಲ್ಲಿ ಭ್ರಷ್ಟಾಚಾರ ನಡೆಸದೇ ಇರಲಾರರು ಎಂದು ಹೇಳಲು ಸಾಧ್ಯವೇ? ಒಂದು ವೇಳೆ ಇಂಥ ಪರವಾನಗಿಗೆ ರೈತರಿಂದ ಲಂಚ ಪಡೆಯುವ ಪರಿಸ್ಥಿತಿ ಸೃಷ್ಟಿಯಾದರೆ ಅದು ರೈತರ ಶೋಷಣೆಯಾಗದೇ?

ಜಾನುವಾರಿನ ವಧೆಯಾದ ಪ್ರಕರಣದಲ್ಲಿ ಮಾರಾಟ ಮಾಡಿದ ರೈತನನ್ನೂ ಹೊಣೆಗಾರನನ್ನಾಗಿಸುವ ನಿಯಮವಿದೆ. ರೈತ ತಾನು ಮಾರಾಟ ಮಾಡಿದ ಜಾನುವಾರು ವಧಾಸ್ಥಳಕ್ಕೆ ಹೋಗುತ್ತದೆ ಎಂಬುದನ್ನು ಅಂದಾಜಿಸಲು ಹೇಗೆ ಸಾಧ್ಯ? ಈ ನಿಯಮಗಳು ರೈತ ಸರ್ಕಾರ ಕಚೇರಿಗಳಿಗೆ ಅಲೆಯುವಂತೆ ಮಾಡುವುದರಲ್ಲಿ ಅನುಮಾನವಿಲ್ಲ. ಕೊನೆಗೆ ಇದು ಹೈನುಗಾರಿಕೆಗೆ ಪೆಟ್ಟು ಕೊಡುತ್ತದೆ.

ಗೋಹತ್ಯೆ ನಿಷೇಧ ಕಾಯ್ದೆಯು ಗೋವಿನ ಹತ್ಯೆಯನ್ನು ತಡೆಯುವ ಸ್ವರೂಪದ್ದಾಗಿದೆಯಾದರೂ,ರೈತರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುವ ಸಾಕಷ್ಟು ಸನ್ನಿವೇಶಗಳನ್ನೂ ಬಲವಂತವಾಗಿ ಸೃಷ್ಟಿ ಮಾಡುತ್ತಿದೆ ಎಂಬುದನ್ನು ಎಲ್ಲರೂ ಗಮನಿಸಲೇಬೇಕು. ಇದಕ್ಕೆ ಸರ್ಕಾರ ಸೂಕ್ತ ಪರಿಹಾರ, ಮಾರ್ಗೋಪಾಯಗಳನ್ನು ಸೂಚಿಸಬೇಕು. ಇಲ್ಲವಾದರೆ, ಇದು ರೈತ ವಿರೋಧಿಯಾಗಲಿದೆ.

ಗೋವುಗಳು ಹೇಗೆ ನಮಗೆ ಪೂಜನೀಯವೋ, ರೈತನೂ ಪೂಜನೀಯವೇ. ಗೋ ಹತ್ಯೆಯನ್ನು ತಡೆಯುವ ನಮ್ಮ ಪ್ರಯತ್ನದಲ್ಲಿ ರೈತನನ್ನು ಶೋಷಿಸುವ ವ್ಯವಸ್ಥೆಗೆ ದೂಡುವುದು ಯಾವ ನ್ಯಾಯ? ಕಾಯ್ದೆಯು ರೈತನ್ನು ಸಂಕಷ್ಟಕ್ಕೆ ದೂಡಬಾರದು ಎಂಬುದಷ್ಟೇ ನನ್ನ ಆಶಯ. ಜೆಡಿಎಸ್‌ಗೆ ಈ ವಿಚಾರದಲ್ಲಿ ಯಾವ ಮತಬ್ಯಾಂಕ್‌ನ ಓಲೈಕೆಯೂ ಬೇಕಿಲ್ಲ. ರೈತನ ಹಿತ ರಕ್ಷಣೆಯಾದರೆ ಸಾಕು.

ರೈತ ತಾನು ಪೋಷಿಸಿದ ಗೋವನ್ನು ಅಥವಾ ಯಾವುದೇ ಪ್ರಾಣಿಯನ್ನು ವಧೆಗಾಗಿ ಕೊಡಲು ಮನಃಪೂರ್ವಕವಾಗಿ ಒಪ್ಪಲಾರ. ಆದರೆ, ಅದು ಅವನಿಗೆ ಅನಿವಾರ್ಯ. ಗೋಹತ್ಯೆಯನ್ನು ನಿಷೇಧಿಸಬೇಕಿದ್ದರೆ, ಆತನ ಅನಿವಾರ್ಯತೆಯನ್ನು ನಾವು ಹೋಗಲಾಡಿಸಬೇಕು. ರೈತನಿಗೆ ಹೊರೆ ಸೃಷ್ಟಿಸುವ ಜಾನುವಾರುಗಳ ರಕ್ಷಣೆಯನ್ನು ಸರ್ಕಾರವೇ ಮಾಡಲಿ. ಗೋವಿನ ಜೊತೆಗೆ ರೈತನನ್ನೂ ರಕ್ಷಿಸಲಿ

Advertisement

Udayavani is now on Telegram. Click here to join our channel and stay updated with the latest news.

Next