ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಲೋಕಸಭಾ ಚುನಾವಣೆ ಸೀಟು ಹೊಂದಾಣಿಕೆ ಕಗ್ಗಂಟಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಐದು ಕ್ಷೇತ್ರಗಳ ಮುಖಂಡರ ಜತೆ ಸಮಾಲೋಚನೆ ನಡೆಸಿದರು. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಶಾಸಕರು, ಮಾಜಿ ಶಾಸಕರ ಜತೆ ಚರ್ಚಿಸಿದರು.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಶಕ್ತಿಯಿದ್ದು, ಆ ಪೈಕಿ ಎರಡು ಕ್ಷೇತ್ರಗಳನ್ನಾದರೂ ಜೆಡಿಎಸ್ ಪಡೆಯಬೇಕು ಎಂಬ ಬೇಡಿಕೆ ಸಭೆಯಲ್ಲಿವ್ಯಕ್ತವಾ ಯಿತು ಎಂದು ಹೇಳಲಾಗಿದೆ. ಕಾಂಗ್ರೆಸ್ ನಾಯಕರು ಜೆಡಿಎಸ್ಗೆ ಸೀಟು ಬಿಟ್ಟು ಕೊಡುವ ವಿಚಾರದಲ್ಲಿ ನೀಡುತ್ತಿರುವ ಹೇಳಿಕೆಗಳ ಬಗ್ಗೆಯೂ ಕೆಲವರು ಮುಖ್ಯಮಂತ್ರಿಯವರ ಬಳಿ ಅಸಮಾಧಾನ ತೋಡಿಕೊಂಡರು.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಸ್ಪರ್ಧೆ ಮಾಡುವ ಸಾಧ್ಯತೆ ಇರುವುದರಿಂದ ಎಲ್ಲರೂ ಒಟ್ಟಾಗಿ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂಬ ಸೂಚನೆಯನ್ನು ಸಹ ಸಭೆಯಲ್ಲಿ ನೀಡಲಾಯಿತು ಎಂದು ತಿಳಿದು ಬಂದಿದೆ. ಮಂಡ್ಯ ಹಾಗೂ ಹಾಸನ ಕ್ಷೇತ್ರಗಳ ವಿಚಾರದಲ್ಲಿ ನಡೆದಿ ರುವ ಜಟಾಪಟಿಯ ಬಗ್ಗೆಯೂ ಸಭೆ ಯಲ್ಲಿ ಪ್ರಸ್ತಾಪವಾಯಿತಾದರೂ, ಆ ಎರಡೂ ಕ್ಷೇತ್ರ ಗಳ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಅಲ್ಲಿ ಪಕ್ಷ ಶಕ್ತಿಯುತವಾಗಿರುವುದರಿಂದ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸಿಎಂ ಹೇಳಿದರು ಎನ್ನಲಾಗಿದೆ.
ಗೌಡರ ಜತೆ ಡಿಕೆಶಿ ಚರ್ಚೆ:ಈ ಮಧ್ಯೆ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿದ ಅವರು, ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು.
ಲೋಕಸಭೆ ಚುನಾವಣೆ ಸೀಟು ಹಂಚಿಕೆ ಕುರಿತು ಕಾಂಗ್ರೆಸ್-ಜೆಡಿಎಸ್ ನಡುವೆ ಕಗ್ಗಂಟು ಉಂಟಾಗಿ
ರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.