Advertisement

ವಿಶ್ವಗುರು ಮಾಡುವ ಉಮೇದಿನಲ್ಲಿರುವ ಕೇಂದ್ರವು ಗ್ರಾಮೀಣ ವಿದ್ಯಾರ್ಥಿಗಳ ಹಿತವವನ್ನೂ ಕಾಯಲಿ:HDK

01:42 PM Dec 20, 2021 | Team Udayavani |

ಬೆಂಗಳೂರು: ವೈದ್ಯಕೀಯ ಶಿಕ್ಷಣದ ನೀಟ್ ಪರೀಕ್ಷೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ

Advertisement

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ ʼನೀಟಾಗಿʼ ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಅನುಮಾನ ಕಾಡುತ್ತಿದೆ. ಕೇಂದ್ರ ಸರಕಾರಕ್ಕೆ ʼನೀಟ್‌ʼ ವ್ಯವಸ್ಥೆಯನ್ನು ಹಾಳು ಮಾಡುವ ಬಗ್ಗೆ ಇದ್ದ ಉತ್ಸಾಹ ಸರಿ ಮಾಡಲು ಇಲ್ಲ ಎನ್ನುವುದು ವಿದ್ಯಾರ್ಥಿಗಳಿಗೆ ಮನವರಿಕೆಯಾಗಿದೆ. “ಸಮಾನ ಶಿಕ್ಷಣ, ಸಮಾನ ಅವಕಾಶ”ಗಳ ಸಂವಿಧಾನದ ಆಶಯವನ್ನು ಕೇಂದ್ರ ಸರಕಾರ ಗಾಳಿಗೆ ಬಿಟ್ಟಿದೆ. ನಾಲ್ಕು ತಿಂಗಳಿನಿಂದ ವೈದ್ಯ ಸೀಟುಗಳು ಹಂಚಿಕೆಯಾಗಿಲ್ಲ. ಪರಿಣಾಮ ಎಂಜಿನಿಯರಿಂಗ್‌ ಕೌನ್ಸೆಲಿಂಗ್‌ ಕೂಡ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಇದು” ಎಂದು ಕಿಡಿಕಾರಿದ್ದಾರೆ.

“ಉನ್ನತ ಶಿಕ್ಷಣವು ಉಳ್ಳವರಿಗೆ ಮಾತ್ರವೇ?” ಇದೇ ಸತ್ಯ ಎನ್ನುವಂತೆ ಕೇಂದ್ರ ಸರಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್‌ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ “ವಿಳಂಬ ದ್ರೋಹ”ದ ಹಿಂದೆ ಇದೆಯಾ? ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸರಕಾರಗಳು ಅಸಹಾಯತೆಯ ʼನಾಟಕʼವಾಡುತ್ತಾ ವಿದ್ಯಾರ್ಥಿ-ಪೋಷಕರನ್ನು ಯಾಮಾರಿಸುತ್ತಿವೆ. ನೀಟ್‌ ವಿಳಂಬದಿಂದ ವೈದ್ಯ, ಎಂಜಿನಿಯರಿಂಗ್‌ ಸೀಟುಗಳ “ಕಾಳಸಂತೆ ಬಿಕರಿ”ಗೆ ಸರಕಾರಗಳೇ ಅವಕಾಶ ಮಾಡಿಕೊಟ್ಟಂತೆ ಆಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ ಶಾಂತವಾಗಿದ್ದು,ಬೆಂಕಿ ಬಿದ್ದಿಲ್ಲ;ಪುಂಡರನ್ನೇ ಬಂಧಿಸಲಾಗಿದೆ: ಸರಕಾರ

ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್‌ʼಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುವುದು ಸೇರಿ, ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ʼವಿಶ್ವಗುರುʼ ಮಾಡುವ ಉಮೇದಿನಲ್ಲಿರುವ ಕೇಂದ್ರವು, ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಯಬೇಕು. ನೀಟ್‌ ಅವ್ಯವಸ್ಥೆ ಬಗ್ಗೆ ರಾಜ್ಯ ಸರಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ. ಉನ್ನತ ಶಿಕ್ಷಣ ಎಲ್ಲರ ಹಕ್ಕು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next