Advertisement

ಭಟ್ಕಳದ ಮೇಲೆ ಹೆಚ್ಚಿನ ನಿಗಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ

09:42 AM Mar 28, 2020 | keerthan |

ಕಾರವಾರ: ಕೋವಿಡ್-19 ವೈರಸ್ ಹರಡುವಿಕೆಯನ್ನು ನಿಯಂತ್ರಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಟ್ಕಳದಲ್ಲಿ `ಹೆಲ್ತ್ ಎಮರ್ಜೆನ್ಸಿ’ (ಆರೋಗ್ಯ ತುರ್ತು ಪರಿಸ್ಥಿತಿ) ಘೋಷಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ತಿಳಿಸಿದರು.

Advertisement

ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಟ್ಕಳ ಅತೀ ಚಿಕ್ಕ ಪಟ್ಟಣವಾದರೂ ಇಲ್ಲಿ ವಿದೇಶದಿಂದ ಬಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೋವಿಡ್-19 ಸೋಂಕು ವಿದೇಶದಿಂದ ಬಂದವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಭಟ್ಕಳದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದೆ. ಈ ಸೋಂಕಿತರ ನೇರ ಸಂಪರ್ಕಕ್ಕೆ ಬಂದವರ ಗಂಟಲು ದ್ರವವನ್ನು ಪರೀಕ್ಷೇಗೆ ಕಳುಹಿಸಲಾಗಿದೆ. ಪರಿಸ್ಥಿತಿ ಕೈಮೀರದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಭಟ್ಕಳ ಪುರಸಭೆ, ಜಾಲಿ ತಾಲೂಕು ಪಂಚಾಯಿತಿ, ಶಿರಾಲಿ ಗ್ರಾಮ ಪಂಚಾಯಿತಿ, ಹೆಬ್ಳೆ ಗ್ರಾಮಪಂಚಾಯಿತಿ, ಮಾವಿನಕುರ್ವೆ ಗ್ರಾಮ ಪಂಚಾಯಿತಿ, ಮುಂಡಳ್ಳಿ ಗ್ರಾಮ ಪಂಚಾಯಿತಿ, ಯಲ್ವಾಡಿಕಾವೂರು ಗ್ರಾಮ ಪಂಚಾಯಿತಿ ಮತ್ತು ಮುತ್ತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕೂಡಲೇ ಜಾರಿ ಬರುವಂತೆ ಈ ಆರೋಗ್ಯ ತುರ್ತು ಪರಿಸ್ಥಿತಿ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಭಟ್ಕಳದಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಭಟ್ಕಳ ಉಪವಿಭಾಗಾಧಿಕಾರಿ ಸಾಜಿದ್ ಮುಲ್ಲಾಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಆರೋಗ್ಯ, ಕಾನೂನು ಸುವ್ಯವಸ್ಥೆ ಹಾಗೂ ಸಮಗ್ರ ಮೇಲುಸ್ತುವಾರಿ ಎಂದು ವಿಭಾಗಿಸಿ ಅಧಿಕಾರಿಗಳಿಗೆ ಪ್ರತ್ಯೇಕ ಜವಾಬ್ದಾರಿಗಳನ್ನು ನೀಡಲಾಗಿದೆ. ತುರ್ತು ಪರಿಸ್ಥಿಯನ್ನು ನಿರ್ವಹಿಸಲು ಹಣಕಾಸಿನ ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಠಪಡಿಸಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next