Advertisement

ಕಾಫಿನಾಡಲ್ಲಿ ಮಳೆ ಅಬ್ಬರ; ಅಪಾರ ಹಾನಿ- ಸಂಚಾರಕ್ಕೆ ಅಡಚಣೆ

01:22 PM May 19, 2020 | mahesh |

ಚಿಕ್ಕಮಗಳೂರು: ಜಿಲ್ಲಾದ್ಯಂತ ಮಳೆಯ ಆರ್ಭಟ ಶುರುವಾಗಿದ್ದು ಭಾನುವಾರ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೂ ಭಾರೀ ಪ್ರಮಾಣದ ಮಳೆಯಾದ ಪರಿಣಾಮ ಮಲೆನಾಡು ಭಾಗದಲ್ಲಿ ವಿದ್ಯುತ್‌ ಕಂಬ ಹಾಗೂ ಮರಗಳು ಧರೆಗುರುಳಿವೆ. ಭಾನುವಾರ ಸಂಜೆ ವೇಳೆಗೆ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು ಬಯಲುಸೀಮೆ ಭಾಗದಲ್ಲಿ ದಟ್ಟ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯರಾತ್ರಿ ಜಿಲ್ಲಾದ್ಯಂತ ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಗುಡುಗು, ಸಿಡಿಲು ಗಾಳಿ ಸಹಿತ ಮಳೆಯಾಗಿದೆ.

Advertisement

ಶೃಂಗೇರಿ, ಮೂಡಿಗೆರೆ, ಕೊಪ್ಪ, ಎನ್‌.ಆರ್‌.ಪುರ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಮಳೆಯಾಗಿದ್ದು, ನೂರಾರು ಮರಗಳು ಹಾಗೂ ವಿದ್ಯುತ್‌ ಕಂಬಗಳು ಮುರಿದು ಬಿದ್ದಿದ್ದು
ಮಲೆನಾಡಿನ ಬಹುತೇಕ ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ಮರಗಳು ರಸ್ತೆ ಮೇಲೆ ಬಿದ್ದ ಪರಿಣಾಮ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಮಳೆಗೆ ಮಲೆನಾಡಿನ ಹಳ್ಳ-ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಚಿಕ್ಕಮಗಳೂರು- ಶೃಂಗೇರಿ ಹೆದ್ದಾರಿಯಲ್ಲಿ ಮರಗಳು ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು ಕಾರ್ಯ
ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ವಿದ್ಯುತ್‌ ಕಂಬಗಳು ಧರೆಗುರುಳಿದ್ದು ರಸ್ತೆ ಮೇಲೆ ಬಿದ್ದಿದ್ದ ಕಂಬ ಹಗೂ ತಂತಿಗಳನ್ನು ಮೆಸ್ಕಾಂ ಇಲಾಖೆ ಸಿಬ್ಬಂದಿ ತೆರವುಗೊಳಿಸಿದರು.

ಬಣಕಲ್‌ ಅಬ್ಟಾಸ್‌ ಎಂಬುವರ ಮನೆಯ ಮೇಲೆ ಮರಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದೆ. ಪೊಲೀಸ್‌ ವಸತಿ ಗೃಹದ ಮೇಲ್ಛಾಚಣಿಯ ಸೀಟುಗಳು ಗಾಳಿಗೆ ಹಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಕೊಟ್ಟಿಗೆಹಾರ, ಬಾಳೂರು, ಚಕ್ಕಮಕ್ಕಿ, ಮತ್ತಿಕಟ್ಟೆ ಭಾಗದಲ್ಲಿ ವಿದ್ಯುತ್‌ ಕಂಬಗಳು ಮರಗಳು ಧರೆಗುರುಳಿವೆ.

ಮಲೆನಾಡು ಭಾಗದಲ್ಲಿ ಸೋಮವಾರ ಬೆಳಗ್ಗೆ ಮಳೆಯ ಆರ್ಭಟ ಕ್ಷೀಣಿಸಿದ್ದು ಸಂಜೆ ವೇಳೆ ಅಲ್ಲಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಬಯಲುಸೀಮೆ ತಾಲೂಕುಗಳಾದ ಕಡೂರು,
ತರೀಕೆರೆ, ಚಿಕ್ಕಮಗಳೂರು ತಾಲೂಕಿನಲ್ಲಿ ಸೋಮವಾರ ಬೆಳಗ್ಗೆ ಮಳೆಯಾಗಿದ್ದು ಈ ಭಾಗದ ರೈತರು ಸಂತಸಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next