ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರದ ಛಾಯೆ ಆವರಿಸುವ ಸಾಧ್ಯತೆ ಇರುವುದರಿಂದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಆರ್ಥಿಕ ನೆರವಿಗಾಗಿ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಶನಿವಾರ ಭೇಟಿ ಮಾಡಿದ ಅವರು, ರಾಜ್ಯದಲ್ಲಿ ಮಳೆ ಪ್ರಮಾಣ, ಕೃಷಿ ಬೆಳೆಯ ಸ್ಥಿತಿಗತಿ ಬಗ್ಗೆ ಕೇಂದ್ರ ಸಚಿವರಿಗೆ ಮಾಹಿತಿ ನೀಡಿ ಒಂದೊಮ್ಮೆ ಪ್ರತಿಕೂಲ ಪರಿಸ್ಥಿತಿ ನಿರ್ಮಾಣವಾದರೆ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಸೂಕ್ತ ಪ್ರಮಾಣದ ಪರಿಹಾರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿದರು.
ನಂತರ, ಕೇಂದ್ರ ಪೆಟ್ರೋಲಿಯಂ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರನ್ನೂ ಭೇಟಿಯಾದ ಆರ್.ವಿ.ದೇಶಪಾಂಡೆ ಅವರು ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿಗೆ ಸಂಬಂಧಪಟ್ಟಂತೆ ಕೈಗೊಳ್ಳಬಹುದಾದ ಯೋಜನೆಗಳು, ಪರಿಕಲ್ಪನೆಗಳ ಬಗ್ಗೆ ಚರ್ಚಿಸಿದರು. ಕೌಶಲ್ಯಾಭಿವೃದ್ಧಿಗೆ ಸಂಬಂಧಪಟ್ಟ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡುವಂತೆ ಕೋರಿದರು.
ಏರ್ ಶೋ ಸ್ಥಳಾಂತರ – ಮರುಪರಿಶೀಲಿಸಿ: ಪ್ರತಿಷ್ಠಿತ ವೈಮಾನಿಕ ಪ್ರದರ್ಶನವನ್ನು (ಏರ್ ಶೋ) ಬೆಂಗಳೂರಿನಿಂದ ಬೇರೆಡೆಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದು ದುರದೃಷ್ಟಕರ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಭೇಟಿ ವೇಳೆ ಈ ವಿಷಯ ಪ್ರಸ್ತಾಪಿಸಿದ ಅವರು, ಕರ್ನಾಟಕವು ದೇಶದ ಬಾಹ್ಯಾಕಾಶ ತಂತ್ರಜ್ಞಾನದ ರಾಜಧಾನಿ ಎನಿಸಿದೆ. ಭಾರತೀಯ ವಿಮಾನಯಾನ ಹಾಗೂ ಬಾಹ್ಯಾಕಾಶ ಉಪಕರಣಗಳ ತಯಾರಿಕೆಗೆ ಪೂರಕ ತಾಂತ್ರಿಕ ವಾತಾವರಣ ಹೊಂದಿದೆ.
ವಿಶ್ವದರ್ಜೆಯ ಏರೋಸ್ಪೇಸ್ ಪಾರ್ಕ್ ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ. ಕಳೆದ 20 ವರ್ಷಗಳಿಂದ 10 ದ್ವೆ„ವಾರ್ಷಿಕ ಏರ್ ಶೋ ಬೆಂಗಳೂರಿನಲ್ಲೇ ಯಶಸ್ವಿಯಾಗಿ ನಡೆದಿದೆ. ಈ ಅಂಶಗಳ ಹಿನ್ನೆಲೆಯಲ್ಲಿ ಏರ್ ಶೋ ಸ್ಥಳಾಂತರ ನಿರ್ಧಾರವನ್ನು ಕೇಂದ್ರ ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.