Advertisement

ನಾನೇನು ಕಾವಿ ತೊಟ್ಟಿಲ್ಲ; ಸಿಎಂ ಯಾರೆಂದು ಹೈಕಮಾಂಡ್ ನಿರ್ಧರಿಸುತ್ತದೆ: ಡಿಕೆ ಶಿವಕುಮಾರ್

01:31 PM Jul 19, 2022 | Team Udayavani |

ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ ಶಿವಕುಮಾರ್ ಬಣ ಎಂದೇನಿಲ್ಲ. ನಮ್ಮದು ಕಾಂಗ್ರೆಸ್ ಬಣ ಮಾತ್ರ. ಎಸ್.ಎಂ.ಕೃಷ್ಣರ ನಂತರ ಒಕ್ಕಲಿಗ ಸಮುದಾಯದಿಂದ ನನಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಹಂತ ತಲುಪಿದ್ದೇನೆ‌. ಹಾಗಾಗಿ ನನ್ನ ಕೈ ಬಲಪಡಿಸಿ ಎಂದು ಒಕ್ಕಲಿಗ ಸಮುದಾಯವನ್ನು ಮನವಿ ಮಾಡಿದ್ದೇನೆ. ಒಕ್ಕಲಿಗ ಸಮುದಾಯದ ಜೊತೆಗೆ ರಾಜ್ಯದ ಎಲ್ಲಾ ಸಮುದಾಯಗಳಿಂದಲೂ ಬೆಂಬಲ ಸಿಗುವ ವಿಶ್ವಾಸವಿದೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಈ ಮೂಲಕ ಕಾಂಗ್ರೆಸ್ ಸಿಎಂ ರೇಸ್ ನಲ್ಲಿ ತಾನೇ ಪ್ರಮುಖ ಸ್ಪರ್ಧಾಳು ಎಂಬ ಸಂದೇಶ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನು ಸನ್ಯಾಸಿಯಾ? ನಾನೇನು ಕಾವಿ ಬಟ್ಟೆ ತೊಟ್ಟಿದ್ದೇನಾ? ಮೊದಲು ಕಾಂಗ್ರೆಸ್ ಸರ್ಕಾರ ಬರಬೇಕು. ಮುಖ್ಯಮಂತ್ರಿಯನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

ಮುಂಬರುವ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಒಬ್ಬ ವ್ಯಕ್ತಿಯನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದ ಮೇಲೆ ನಂಬಿಕೆ ಇರಿಸಿದೆ ಎಂದು ಡಿಕೆಶಿ ಹೇಳಿದರು.

ಇದನ್ನೂ ಓದಿ:ಸಿದ್ದರಾಮಯ್ಯ ವಿರುದ್ಧ ಮತ್ತೆ ಸ್ಪರ್ಧೆ ಮಾಡುತ್ತೇನೆ: ಶ್ರೀರಾಮುಲು

ಸಿದ್ದರಾಮಯ್ಯನವರ ಹುಟ್ಟುಹಬ್ಬದ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, ಮನುಷ್ಯನ ಬದುಕಿನಲ್ಲಿ ಹಲವು ಮೈಲುಗಲ್ಲುಗಳಿರುತ್ತವೆ. ಒಬ್ಬೊಬ್ಬರು ಒಂದು ವಿಧದಲ್ಲಿ ಆಚರಣೆ ಮಾಡಿಕೊಳ್ಳುತ್ತಾರೆ. ಅದೇ ರೀತಿ ಸಿದ್ದರಾಮಯ್ಯನವರ ಇದುವರೆಗಿನ ಜೀವನವನ್ನು ಮೆಲುಕು ಹಾಕುವ ಸಲುವಾಗಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಸಮಾರಂಭವನ್ನು ಆಯೋಜನೆ ಮಾಡಲಾಗುತ್ತಿದೆ. ಆ ಕಾರ್ಯಕ್ರಮದಲ್ಲಿ ನಾನು ಹಾಗು ರಾಹುಲ್ ಗಾಂಧಿಯವರು ಭಾಗಿಯಾಗುತ್ತೇವೆ‌.  ನನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿಕೊಂಡೆ. ನಾನು ಪತ್ನಿ ಸಮೇತ ಕೇದಾರನಾಥಕ್ಕೆ ಹೋಗಿದ್ದೆ. ಆಚರಣೆ ವಿಚಾರದಲ್ಲಿ ಒಬ್ಬೊಬ್ಬರ ಆಯ್ಕೆ ಒಂದೊಂದು ರೀತಿಯಾಗಿರುತ್ತದೆ ಎಂದರು.

Advertisement

ಎಲ್ಲ ಪ್ರಕರಣದ ತನಿಖೆ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಭ್ರಷ್ಟಾತಿಭ್ರಷ್ಟ ಸರ್ಕಾರ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆಗೆ ಒಳಪಡಿಸಲಾಗುವುದು. ನಾವು ನಡೆಸಿರುವ ಆಂತರಿಕ‌ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಪ್ರತಿಪಕ್ಷ ಕಾಂಗ್ರೆಸ್ ದುರ್ಬಲವಾಗಿಲ್ಲ. ಸರ್ಕಾರದ ವೈಫಲ್ಯಗಳ ವಿರುದ್ದ ನಿರಂತರ ಹೋರಾಟ ಮಾಡುತ್ತಿದ್ದೇವೆ. ಹೋರಾಟದ ಫಲವಾಗಿಯೇ ಸಚಿವರು ರಾಜೀನಾಮೆ ನೀಡುವಂತಾಯಿತು. ಆದರೂ ಇದು ದಪ್ಪ ಚರ್ಮದ ಭ್ರಷ್ಟ ಸರ್ಕಾರವಾಗಿದೆ. ಹೋಟೆಲ್ ಗಳಲ್ಲಿ ತಿನ್ನುವ ಪದಾರ್ಥಗಳಿಗೆ ಇಷ್ಟು ತೆರಿಗೆ ಎಂದು ಬೋರ್ಡ್ ತಗುಲಿ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮುಂದೆ ಮುಖ್ಯಮಂತ್ರಿ ಸ್ಥಾನಕ್ಕಿಷ್ಟು, ಮಂತ್ರಿ ಸ್ಥಾನಕ್ಕಿಷ್ಟು ಎಂದು ಬೋರ್ಡ್ ಹಾಕುತ್ತಾರೆ. ಸರ್ಕಾರಿ ಕಾಮಗಾರಿಯಲ್ಲಿ ಶೇ 40 ಕಮಿಷನ್ ಪಡೆಲಾಗುತ್ತಿದೆ ಎಂಬ ಆರೋಪವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಅಕ್ರಮ ನೇಮಕಾತಿ ಹಗರಣವನ್ನು ಕೂಡ ಮುಚ್ಚಿ ಹಾಕುವ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿಯವರೇ ಆಗಿರುವ ಎಚ್ ವಿಶ್ವನಾಥ್ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಕೂಡ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿದ್ದಾರೆ. ಅವರಿಗೇಕೆ ನೋಟಿಸ್ ಕೊಟ್ಟು ಪ್ರಶ್ನೆ ಮಾಡಲಿಲ್ಲ. ಕೇವಲ ಶಾಸಕ ಪ್ರಿಯಾಂಕ್ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಏಕೆ ನೋಟಿಸ್ ನೀಡಿದ್ದೀರಾ ಎಂದು ಪ್ರಶ್ನಿಸಿದರು.

ಬಿಜೆಪಿ ಮತ್ತು ಜೆಡಿಎಸ್ ನ ಕೆಲ ನಾಯಕರು ಕಾಂಗ್ರೆಸ್ ಸೇರುವ ಸುಳಿವು ನೀಡಿದ ಡಿಕೆಶಿ, ಕೆಲವರು ಸೇರುತ್ತಾರೆ. ಆದರೆ ಇದರ ಗುಟ್ಟನ್ನು ಬಿಟ್ಟುಕೊಡುವುದಿಲ್ಲ. ಅದನ್ನು ರಹಸ್ಯವಾಗಿ ಇಡುತ್ತೇನೆ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next