ಬೆಂಗಳೂರು: ನಿಗಮ-ಮಂಡಳಿಗಳು, ಪ್ರಾಧಿಕಾರ, ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸ್ವಾಯತ್ತ ಸಂಸ್ಥೆಗಳಲ್ಲಿ ಹುದ್ದೆಗಳ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಆ ಬಗ್ಗೆ ಆಯಾ ಸಂಸ್ಥೆಗಳು ತೀರ್ಮಾನಿಸಬೇಕು ಎಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಕುರಿತ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರ ಮನವಿಯಂತೆ ಸರ್ಕಾರದ ಎಲ್ಲಾ ಇಲಾಖೆಗಳ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆಗೊಳಿಸಿ 2021ರ ಜುಲೈ 6ರಂದು ಅಂತಿಮ ಅಧಿಸೂಚನೆ ಹೊರಡಿಸಿದೆ. ಜತೆಗೆ, ಅಧಿಸೂಚನೆಯನ್ನು ಎಲ್ಲಾ ಪ್ರಾಧಿಕಾರ ಮತ್ತು ನಿಗಮ-ಮಂಡಳಿಗೆ ಕಳುಹಿಸಿ, ಸರ್ಕಾರದ ನಿಯಮ ಅಳವಡಿಸಿಕೊಳ್ಳುವಂತೆ ಕೋರಿದೆ. ಆದರೆ, ನಿಯಮ ಜಾರಿಗೆ ತರುವಂತೆ ನಿರ್ದೇಶಿಸಲು ಸಾಧ್ಯವಿಲ್ಲ. ಈ ಬಗ್ಗೆ ಆಯಾ ಸಂಸ್ಥೆಗಳು ತೀರ್ಮಾನಿಸಬೇಕು ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿದಾರರ ಮನವಿಯಂತೆ ಸರ್ಕಾರ ಕ್ರಮ ಕೈಗೊಂಡಿದೆ. ಒಂದು ವೇಳೆ ನಿಗಮ-ಮಂಡಳಿ, ಪ್ರಾಧಿಕಾರ, ಸ್ವಾಯತ್ತ ಸಂಸ್ಥೆಗಳಿಗೂ ಈ ಮೀಸಲಾತಿ ವಿಸ್ತರಿಸಬೇಕು ಎಂದಾದರೆ ಅರ್ಜಿದಾರರು ಪ್ರತ್ಯೇಕ ಅರ್ಜಿ ಸಲ್ಲಿಸಬಹುದು ಎಂದು ಅರ್ಜಿಯನ್ನು ಇತ್ಯರ್ಥಪಡಿಸಿದರು.