Advertisement

1,141 ಶ್ಮಶಾನ ಜಾಗ ಒತ್ತುವರಿ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ರಾಜ್ಯ ಸರಕಾರ

12:28 AM Sep 07, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,141 ಶ್ಮಶಾನ ಜಾಗಗಳು ಒತ್ತುವರಿಯಾಗಿವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

Advertisement

ರಾಜ್ಯದಲ್ಲಿ ಶ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸುವಂತೆ ಹೈಕೋರ್ಟ್‌ ನೀಡಿದ್ದ ಆದೇಶ ಪಾಲನೆ ಮಾಡುವಲ್ಲಿ ಸರ್ಕಾರ ವಿಫ‌ಲವಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಮಹಮ್ಮದ್‌ ಇಕ್ಬಾಲ್‌ ಅವರು ಸಲ್ಲಿಸಿರುವ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾ. ಕೆ.ಎಸ್‌. ಹೇಮಲೇಖ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್‌ ಮೋಹನ್‌ ಸಲ್ಲಿಸಿದ ಅನುಪಾಲನಾ ವರದಿಯನ್ನು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಮಂಡಿಸಿದರು. ರಾಜ್ಯದಲ್ಲಿ ಒತ್ತುವರಿಯಾಗಿರುವ ಶ್ಮಶಾನ ಜಾಗಗಳನ್ನು ತೆರವುಗೊಳಿಸಬೇಕು. ಶವಸಂಸ್ಕಾರ ಸ್ಥಳಾವಕಾಶ ಇಲ್ಲದ ಗ್ರಾಮಗಳಿಗೆ ಶ್ಮಶಾನ ಮಂಜೂರು ಮಾಡಲು 3 ವಾರದಲ್ಲಿ ಕ್ರಮ ಕೈಗೊಳ್ಳುವಂತೆ ಆಗಸ್ಟ್‌ 16ರಂದು ನಿರ್ದೇಶಿಸಿತ್ತು. ಅದರಂತೆ ಸರ್ಕಾರ ಸೆ.5ರಂದು ಅನುಪಾಲನಾ ವರದಿ ಸಲ್ಲಿಸಿದೆ.

ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಶೇ.92 ಶ್ಮಶಾನ ಜಾಗಗಳನ್ನು ಮಂಜೂರು ಮಾಡಲಾಗಿದ್ದು, ಕಾನೂನು ತೊಡಕುಗಳ ಕೆಲ ಕಾರಣಗಳಿಂದಾಗಿ ಒಂದಿಷ್ಟು ಕಡೆ ಶ್ಮಶಾನ ಜಾಗ ಮಂಜೂರು ಮಾಡಲು ವಿಳಂಬವಾಗಿದೆ. ಶ್ಮಶಾನ ಜಾಗಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು ಮತ್ತು ಶವಸಂಸ್ಕಾರ ಅಗತ್ಯ ಜಮೀನು ಇಲ್ಲದ ಗ್ರಾಮಗಳನ್ನು ಶ್ಮಶಾನಕ್ಕೆ ಜಾಗ ಮಂಜೂರು ಮಾಡಬೇಕು ಎಂಬ ನ್ಯಾಯಾಲಯದ ಆದೇಶ ಪಾಲನೆಗೆ ಮೂರು ವಾರ ಕಾಲಾವಕಾಶ ಬೇಕು ಎಂದು ಕೋರಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next