Advertisement

ಕೆಪಿಟಿಸಿಎಲ್‌ ಎಇ ಭಡ್ತಿ: ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

08:32 PM May 16, 2022 | Team Udayavani |

ಬೆಂಗಳೂರು: ಸಹಾಯಕ ಎಂಜಿನಿಯರ್‌ ಹುದ್ದೆಗೆ ಭಡ್ತಿ ನೀಡಿ ಅಂತಿಮ ಪಟ್ಟಿ ಪ್ರಕಟಿಸುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್‌)ದ ಪ್ರಕ್ರಿಯೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ.

Advertisement

ಸಹಾಯಕ ಎಂಜಿನಿಯರ್‌ ಹುದ್ದೆಯ ಭಡ್ತಿಗೆ ಕೆಪಿಟಿಸಿಎಲ್‌ ಪ್ರಕಟಿಸಿದ ಸಂಭಾವ್ಯ ಜೇಷ್ಠತಾ ಪಟ್ಟಿಯನ್ನು ಪ್ರಶ್ನಿಸಿ ಕೆಪಿಟಿಸಿಎಲ್‌ನಲ್ಲಿ ಪ್ರಭಾರಿ ಸಹಾಯಕ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ ಮೂಲದ ಬಿ. ಸುಮಾ ಅವರು ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಸಂಭಾವ್ಯ ಜ್ಯೇಷ್ಠತಾ ಪಟ್ಟಿಗೆ ಅರ್ಜಿದಾರರು ಸಲ್ಲಿಸಿರುವ ಆಕ್ಷೇಪಣೆ ಪರಿಗಣಿಸಬೇಕು. ಅನಂತರ ಅರ್ಜಿದಾರರು ಹೈದರಾಬಾದ್‌ ಕರ್ನಾಟಕ ಪ್ರದೇಶದ ಮೀಸಲು ಕೋಟಾದಡಿ ಸಹಾಯಕ ಎಂಜಿನಿಯರ್‌ ಹುದ್ದೆ ಭಡ್ತಿ ಪಡೆಯಲು ಅರ್ಹರಾಗಿದ್ದಾರೋ ಅಥವಾ ಇಲ್ಲವೋ ಎನ್ನುವ ಬಗ್ಗೆ ಪರಿಶೀಲಿಸಿ ನಾಲ್ಕು ವಾರಗಳಲ್ಲಿ ಸೂಕ್ತ ಅದೇಶ ಹೊರಡಿಸಬೇಕು. ಅಲ್ಲಿಯವರಿಗೆ ಸಹಾಯಕ ಎಂಜಿನಿಯರ್‌ ಹುದ್ದೆಗೆ ಭಡ್ತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಬಾರದು ಎಂದು ಕೆಪಿಟಿಸಿಎಲ್‌ಗೆ ನಿರ್ದೇಶಿಸಿದ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಸೇವಾ ಹಿರಿತನದ ಮೇಲೆ ಸಹಾಯಕ ಎಂಜಿನಿಯರ್‌ ಹುದ್ದೆಗೆ ಭಡ್ತಿ ನೀಡುವ ಕಾರಣಕ್ಕಾಗಿ 2022ರ ಜ. 10ರಂದು ಕೆಪಿಟಿಸಿಎಲ್‌ ಸಂಭಾವ್ಯ ಜ್ಯೇಷ್ಠತಾ ಪಟ್ಟಿ ಪ್ರಕಟಿಸಿತ್ತು. ಈ ಪಟ್ಟಿಗೆ ಜ. 12 ಮತ್ತು ಮಾ. 17ರಂದು ಆಕ್ಷೇಪಣೆ ಸಲ್ಲಿಸಿದ್ದ ಬಿ. ಸುಮಾ, ಸಹಾಯಕ ಎಂಜಿನಿಯರ್‌ ಹುದ್ದೆ ಭಡ್ತಿ ಪಡೆಯಲು ಹೈದರಾಬಾದ್‌ ಕರ್ನಾಟಕ ಪ್ರದೇಶದ ಮೀಸಲು ಕೋಟಾದಡಿ ತಮಗೆ ಅರ್ಹತೆ ಇದೆ ಎಂದು ಹೇಳಿದ್ದರು. ಆದರೆ, ತಮ್ಮ ಆಕ್ಷೇಪಣೆ ಪರಿಗಣಿಸದೆ ಸಹಾಯಕ ಎಂಜಿನಿಯರ್‌ ಹುದ್ದೆಗೆ ಭಡ್ತಿ ಅಂತಿಮ ಪಟ್ಟಿ ಪ್ರಕಟಿಸುವ ಪ್ರಕ್ರಿಯೆಯನ್ನು ಕೆಪಿಟಿಸಿಎಲ್‌ ಮುಂದುವರಿಸಿದೆ ಎಂದು ದೂರಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next