ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ನೀಡಿದ್ದ ದೂರು ಆಧರಿಸಿ ಬೆಂಗಳೂರಿನ ಪ್ರದೀಪ್ ಈಶ್ವರ್ ಎಂಬುವರ ವಿರುದ್ಧ ಚಿಕ್ಕಬಳ್ಳಾಪುರ ಪೊಲೀಸರು ದಾಖಲಿಸಿದ್ದ ದೂರು ಹಾಗೂ ಆ ಸಂಬಂಧ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ಮತ್ತು ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಪ್ರದೀಪ್ ಈಶ್ವರ್ ಸಲ್ಲಿಸಿದ್ದ ಅರ್ಜಿ ವಿಚಾರಣೆನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧೀನ ನ್ಯಾಯಾಲತದ ವಿಚಾರಣೆಗೆ ಎರಡು ವಾರ ಕಾಲಮಧ್ಯಂತರ ತಡೆ ನೀಡಿ, ಪ್ರತಿವಾದಿಗಳಾದ ಚಿಕ್ಕಬಳ್ಳಾಪುರ ಟೌನ್ ಠಾಣಾ ಪೊಲೀಸರು ಮತ್ತು ಸಚಿವ ಡಾ. ಕೆ.ಸುಧಾಕರ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ತೀರ್ಪು ಕಾಯ್ದಿರಿಸಿದ ಹೈ :
ಬೆಂಗಳೂರು: “ಐ ಮಾನಿಟರಿ ಅಡ್ವೆ„ಸರಿ’ (ಐಎಂಎ) ಬಹುಕೋಟಿ ವಂಚನೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಈ ಸಂಬಂಧ ಹೇಮಂತ್ ನಿಂಬಾಳ್ಕರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರ ಮತ್ತು ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸಿದ ನಂತರ ನ್ಯಾಯಪೀಠತೀರ್ಪು ಕಾಯ್ದಿರಿಸಿತು. ಜೊತೆಗೆ ಅರ್ಜಿದಾರರ ವಿರುದ್ಧದ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಸಿಬಿಐಗೆ ನಿರ್ದೇಶಿಸಿ ಈಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಪೀಠ ವಿಸ್ತರಿಸಿತು.