Advertisement

ಅಲ್ಪಸಂಖ್ಯಾತರ ಆಯೋಗದ ವರದಿ ಸದನದಲ್ಲಿ ಮಂಡಿಸಿದ ವಿವರ ಕೇಳಿದ ಹೈಕೋರ್ಟ್‌

07:48 PM Jun 22, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಸಲ್ಲಿಸಿರುವ ವಿಶೇಷ ವರದಿಯ ಶಿಫಾರಸುಗಳನ್ನು ವಿಧಾನಮಂಡಳದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಆದೇಶಿಸಿದೆ.

Advertisement

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಸಿರುವ ವಿಶೇಷ ವರದಿ ಆಧರಿಸಿ ಬೀದರ್‌ ಸೇರಿದಂತೆ ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಾಜಿ ಸಚಿವ ಎಸ್‌.ಕೆ. ಕಾಂತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗ 2012ರಲ್ಲಿ ಸಲ್ಲಿಸಿರುವ ವಿಶೇಷ ವರದಿಯ ಶಿಫಾರಸುಗಳನ್ನು ರಾಜ್ಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆ-1994ರ ಸೆಕ್ಷನ್‌ 10 (2) ಪ್ರಕಾರ ವಿಧಾನಮಂಡಳದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ನೀಡಬೇಕು. ಅದೇ ರೀತಿ ಅಯೋಗದ ವರದಿ ಆಧರಿಸಿ ಲೋಕಾಯುಕ್ತ ಸಂಸ್ಥೆಯು 2016ರಲ್ಲಿ ನೀಡಿದ ವರದಿ ಮೇಲೆ ಕರ್ನಾಟಕ ಲೋಕಾಯುಕ್ತ ಕಾಯ್ದೆ-1984ರ ಸೆಕ್ಷನ್‌ 12 (2) ಪ್ರಕಾರ ಕೈಗೊಂಡ ಕ್ರಮಗಳ ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಆ.8ಕ್ಕೆ ಮುಂದೂಡಿತು.

ಇದನ್ನೂ ಓದಿ :ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಅಲ್ಪಸಂಖ್ಯಾತರ ಆಯೋಗದ ವಿಶೇಷ ವರದಿಯಲ್ಲಿ ಮಾಡಲಾದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ವಕ್ಫ್ ಮಂಡಳಿಗೆ ನಿರ್ದೇಶನ ನೀಡಬೇಕು. ವರದಿಯಲ್ಲಿನ ಅಂಶಗಳನ್ನು ಆಧರಿಸಿ ಅದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ತನಿಖೆಯ ಮೇಲ್ವಿಚಾರಣೆಯನ್ನು ಹೈಕೋರ್ಟ್‌ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Advertisement

ಅದೇ ರೀತಿ 2016ರಲ್ಲಿ ಲೋಕಾಯುಕ್ತ ಸಂಸ್ಥೆಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಸೇರಿದಂತೆ ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತ ಬಳಿ ಇರುವ ಎಲ್ಲಾ ದಾಖಲೆಗಳನ್ನು ನ್ಯಾಯಾಲಯ ತರಿಸಿಕೊಳ್ಳಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ. ಅರ್ಜಿದಾರರ ಪರ ವಕೀಲ ಶ್ರೀಧರ ಪ್ರಭು ವಾದ ಮಂಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next