ಉಪ್ಪಿನಂಗಡಿ : ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ – ಉದ್ದಮಜಲು ರಸ್ತೆಗೆ ಅಡ್ಡಲಾಗಿ ಗುಡ್ಡದ ಮಣ್ಣು ಜರಿದು ಬಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. ನೂರಕ್ಕೂ ಮಿಕ್ಕಿದ ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಪಕ್ಕದ ಗುಡ್ಡದಲ್ಲಿಯೇ ನೀರಿನ ಟ್ಯಾಂಕ್ ಹಾಗೂ ವಿದ್ಯುತ್ ಕಂಬಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಭಾರೀ ಮಳೆಯಿಂದಾಗಿ ಗುಡ್ಡದ ಒಂದು ಭಾಗದ ಮಣ್ಣು ಜರಿದು ರಸ್ತೆಗೆ ಬಿದ್ದಿದೆ. ಜನ ಹಾಗೂ ವಾಹನ ಸಂಚಾರ ಅಸಾಧ್ಯ ಎನ್ನುವಂತಾಗಿದೆ.
ಗ್ರಾ.ಪಂ. ವಿರುದ್ಧ ಅಸಮಾಧಾನ
ಈ ರಸ್ತೆಯನ್ನು ಅವಲಂಬಿಸಿದ ಮಕ್ಕಳು, ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಗದ್ದೆ, ತೋಟಗಳನ್ನು ಕ್ರಮಿಸಿ, ರಸ್ತೆಗೆ ಬರುವಂತಾಗಿದೆ. ಗುಡ್ಡ ಜರಿದು ಒಂದು ವಾರ ಕಳೆದಿದೆ, ಗ್ರಾ.ಪಂ. ಆಡಳಿತದ ಗಮನಕ್ಕೆ ತಂದಿದ್ದರೂ ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವುಗೊಳಿಸದಿರುವ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.