Advertisement

20 ಕ್ಷೇತ್ರದಲ್ಲಿ ಮೈತ್ರಿ ಗೆಲುವು: ಸಿದ್ದರಾಮಯ್ಯ

03:06 PM Apr 03, 2019 | Naveen |

ಹುಬ್ಬಳ್ಳಿ: ನನ್ನ ರಾಜಕೀಯ ಅನುಭವದ ವಿಶ್ಲೇಷಣೆ ಪ್ರಕಾರ ಈ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿಕೂಟವು 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಸೃಷ್ಟಿಯಾಗಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಐದು ವರ್ಷಗಳ ಆಡಳಿತದಿಂದ ಜನರು ಭ್ರಮನಿರಸನಗೊಂಡಿದ್ದಾರೆ. ರಾಹುಲ್‌ ಗಾಂಧಿ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದಿಂದ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದ್ದೆವು. ನಮ್ಮಂತೆಯೇ ಕೇರಳದ ನಾಯಕರೂ ಬೇಡಿಕೆ ಇಟ್ಟಿದ್ದರು. ರಾಜಕೀಯ ಲೆಕ್ಕಾಚಾರದ ಪ್ರಕಾರ ಕೇರಳದಿಂದ ಸ್ಪರ್ಧೆ ಮಾಡಿದರೆ ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತದೆ ಎನ್ನುವ ಕಾರಣಕ್ಕೆ ಅಮೇಠಿ ಜೊತೆಗೆ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಕೇರಳದಲ್ಲಿ ಇತರೆ ಪಕ್ಷಗಳೊಂದಿಗೆ ಹೊಂದಾಣಿಕೆಯಾಗಿಲ್ಲ. ಯಾವಾಗಲೂ ಕಮ್ಯುನಿಸ್ಟ್‌ ಹಾಗೂ ಕಾಂಗ್ರೆಸ್‌ ನಡುವೆ ರಾಜಕೀಯ ಹೋರಾಟ ಇರುತ್ತದೆ ಎಂದರು.

ಹೈಕಮಾಂಡ್‌ಗೆ ಬಿಟ್ಟಿದ್ದು: ಎಲ್ಲಾ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿ ಅಂತಿಮ ಮಾಡುವ ಕಾರಣಕ್ಕಾಗಿ ಧಾರವಾಡ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಳಂಬವಾಗುತ್ತಿದೆ. ರಾಹುಲ್‌ ಗಾಂಧಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದು, ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಅಭ್ಯರ್ಥಿ ಆಯ್ಕೆ ಅಂತಿಮವಾಗಲಿದೆ. ಸಾಮಾಜಿಕ ನ್ಯಾಯ ಸಿದ್ಧಾಂತದಡಿ ಮುಸ್ಲಿಂ ಸಮಾಜಕ್ಕೆ ಟಿಕೆಟ್‌ ಕೊಡಬೇಕಾಗಿರುವುದು ನಿಜ. ಈ ಎಲ್ಲಾ ವಿಷಯಗಳ ಕುರಿತು ಹೈಕಮಾಂಡ್‌ಗೆ ನಮ್ಮ ಅಭಿಪ್ರಾಯ ನೀಡಿದ್ದೇವೆ. ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು ಎಂದರು.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಎಂದಿಗೂ ಅದು ನಮ್ಮ ದೇಶದಲ್ಲಿ ಇರುತ್ತದೆ. ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎನ್ನುವುದರಲ್ಲಿ ಅರ್ಥವಿಲ್ಲ.
. ಸಿದ್ದರಾಮಯ್ಯ,
ಮಾಜಿ ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next