Advertisement

ನಾನೇ ಖುದ್ದು ಹೋಗಬೇಕಾಗುತ್ತೆ- ಸುಪ್ರೀಂ CJI; ಕಾಶ್ಮೀರದಲ್ಲಿ ನಿಜಕ್ಕೂ ಪರಿಸ್ಥಿತಿ ಹೇಗಿದೆ?

09:48 AM Sep 17, 2019 | Team Udayavani |

ನವದೆಹಲಿ:ಜಮ್ಮು-ಕಾಶ್ಮೀರದಲ್ಲಿ ಜನರಿಗೆ ಹೈಕೋರ್ಟ್ ಮೆಟ್ಟಿಲೇರಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಕ್ಕೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಸೋಮವಾರ ಕಳವಳ ವ್ಯಕ್ತಪಡಿಸಿದ್ದು, ಇದೊಂದು ಗಂಭೀರವಾದ ವಿಚಾರವಾಗಿದ್ದು, ನಾನೇ ಖುದ್ದಾಗಿ ಜಮ್ಮು-ಕಾಶ್ಮೀರ ಹೈಕೋರ್ಟ್ ಚೀಫ್ ಜಸ್ಟೀಸ್ ಜತೆ ಮಾತನಾಡುವುದಾಗಿ ತಿಳಿಸಿದ್ದಾರೆ.

Advertisement

ಜಮ್ಮು-ಕಾಶ್ಮೀರದಲ್ಲಿ ಕೋರ್ಟ್ ನಲ್ಲಿ ದೂರು ಅಥವಾ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಜಮ್ಮು-ಕಾಶ್ಮೀರ ಹೈಕೋರ್ಟ್ ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ನಿರ್ದೇಶನ ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಅಪ್ರಾಪ್ತರನ್ನು ಜೈಲಿನಲ್ಲಿ ಇರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸಿಜೆಐ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಎನಾಕ್ಷಿ ಗಂಗೂಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್, ಹೈಕೋರ್ಟ್ ನಲ್ಲಿ ಪ್ರಶ್ನಿಸುವಂತೆ ಸೂಚಿಸಿತ್ತು. ಆಗ ಹಿರಿಯ ವಕೀಲ ಹುಝೇಫಾ ಅಹ್ಮದಿ, ಸದ್ಯದ ಪರಿಸ್ಥಿತಿಯಲ್ಲಿ ಜಮ್ಮು-ಕಾಶ್ಮೀರದ ಹೈಕೋರ್ಟ್ ಗೆ ಹೋಗಲು ಅಲ್ಲಿನ ಜನರಿಗೆ ಸಾಧ್ಯವಾಗುತ್ತಿಲ್ಲ ಎಂಬುದಾಗಿ ಮಾಹಿತಿ ನೀಡಿದ್ದರು.

ಈ ಮಾಹಿತಿ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸಿಜೆಐ ತೀವ್ರ ಕಳವಳ ವ್ಯಕ್ತಪಡಿಸಿ, ಈ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್ ಗೆ ನಿರ್ದೇಶನ ನೀಡಿದ್ದಾರೆ. ಒಂದು ವೇಳೆ ಇದು ಸುಳ್ಳು ಎಂದಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಿಜೆಐ ಎಚ್ಚರಕೆಯನ್ನೂ ನೀಡಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next