Advertisement

ಗೌಡರನ್ನು ಭೇಟಿ ಮಾಡಿದ ಇಬ್ರಾಹಿಂ

06:15 AM Jan 16, 2018 | Team Udayavani |

ಬೆಂಗಳೂರು: ಕೇಂದ್ರ ಮಾಜಿ ಸಚಿವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಸಿ.ಎಂ.ಇಬ್ರಾಹಿಂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Advertisement

ಕಾಂಗ್ರೆಸ್‌ ಹಾಗೂ ಬಿಜೆಪಿಯ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ ಅರ್ಧ ಗಂಟೆಯಲ್ಲೇ,ಸಿ.ಎಂ.ಇಬ್ರಾಹಿಂ ಪದ್ಮಾನಾಭನಗರದ ದೇವೇಗೌಡರ ನಿವಾಸದಲ್ಲಿ ಹಾಜರಾಗಿದ್ದರು.

ಎಚ್‌.ಡಿ.ದೇವೇಗೌಡ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಜತೆ ಸಿ.ಎಂ.ಇಬ್ರಾಹಿಂ ಸುಮಾರು 1 ಗಂಟೆ ಸಮಾಲೋಚನೆ ನಡೆಸಿದರು. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಜತೆಗೆ ಮುಂದಿನ ವಿಧಾನಸಭೆ ಚುನಾವಣೆ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಲಾಯಿತು ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ ಕೆಲವು ನಾಯಕರೊಂದಿಗೆ ಇಬ್ರಾಹಿಂ ಜೆಡಿಎಸ್‌ ಸೇರುವ ಸಾಧ್ಯತೆಯಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಕಳೆದೊಂದು ವರ್ಷದಿಂದಲೂ ಸಿ.ಎಂ.ಇಬ್ರಾಹಿಂ ಜೆಡಿಎಸ್‌ ಸೇರ್ಪಡೆಯಾಗಲಿದ್ದಾರೆಂಬ ಮಾತು ಕೇಳಿಬರುತ್ತಿತ್ತು. ಈ
ಹಿಂದೆಯೂ 2-3 ಬಾರಿ ಇಬ್ರಾಹಿಂ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿದ್ದ ಅವರು ಇತ್ತೀಚೆಗಷ್ಟೇ ವಿಧಾನಪರಿಷತ್‌ ಸದಸ್ಯರಾಗಿದ್ದರು. ಜೂನ್‌ಗೆ ಇಬ್ರಾಹಿಂ ಪರಿಷತ್‌ ಸದಸ್ಯತ್ವ ಅವಧಿ ಮುಗಿಯಲಿದ್ದು ಚುನಾವಣೆ ವೇಳೆಗೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

ಜೆಡಿಎಸ್‌ ಸೇರ್ಪಡೆ ಚರ್ಚಿಸಿಲ್ಲ: ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ದೇವೇಗೌಡರು ಹಿರಿಯ ನಾಯಕರು, ಅವರಿಗೆ ಸಂಕ್ರಾಂತಿ ಶುಭಾಶಯ ಕೋರಲು ಬಂದಿದ್ದೆ. ಜೆಡಿಎಸ್‌ ಸೇರ್ಪಡೆ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದರು.

Advertisement

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬುದು ದೇವೇಗೌಡರ ಅಭಿಪ್ರಾಯ.ನಮ್ಮದೂ ಅದೇ ಅಭಿಪ್ರಾಯ. ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಬಗ್ಗೆ ಮಾತನಾಡುವಷ್ಟು ದೊಡ್ಡವರು ನಾವಲ್ಲ, ಅದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next