ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್ ವಜಾ ಮಾಡಿದೆ.
“ಈ ಲೋಕಸಭೆ ಚುನಾವಣೆಯಲ್ಲಿ ನೀವು ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿದರೆ, ನಾನು ಮತ್ತೆ ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಬರುವುದಿಲ್ಲ’ ಎಂಬ ಕೇಜ್ರಿವಾಲ್ ಹೇಳಿಕೆಯು ಅವರ ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸುತ್ತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಪ್ರಚಾರದ ವೇಳೆ ಕೇಜ್ರಿವಾಲ್ ನೀಡಿರುವ ಈ ಹೇಳಿಕೆಯು ಜಾಮೀನಿನ ಷರತ್ತುಗಳ ಸ್ಪಷ್ಟ ಉಲ್ಲಂಘನೆ ಮಾತ್ರವಲ್ಲ, ಇದು ನ್ಯಾಯಾಂಗಕ್ಕೆ ಮಾಡಿದ ಕಪಾಳಮೋಕ್ಷವೂ ಹೌದು ಎಂದು ವಾದಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, “ಕೇಜ್ರಿ ಅವರ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯ. ಅದು ಅವರ ಭಾವನೆ. ಪ್ರಚಾರ ನಡೆಸಲೆಂದು ಜಾಮೀನು ನೀಡಿದ್ದೇವೆ. ಅದಕ್ಕೆ ಯಾವ ವಿನಾಯ್ತಿಯನ್ನೂ ನೀಡಿಲ್ಲ. ನಮ್ಮ ನಿರ್ಧಾರಗಳಿಗೆ ಟೀಕೆ ವ್ಯಕ್ತವಾದರೆ ಅದನ್ನು ಸ್ವಾಗತಿಸುತ್ತೇವೆ’ ಎಂದು ಹೇಳಿ ಇ.ಡಿ. ಅರ್ಜಿಯನ್ನು ವಜಾ ಮಾಡಿತು.
ಶೀಘ್ರದಲ್ಲೇ ಆರೋಪಪಟ್ಟಿ:
ಅಬಕಾರಿ ನೀತಿ ಹಗರಣದಲ್ಲಿನ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ವಿರುದ್ಧ ಶೀಘ್ರದಲ್ಲೇ ಆರೋಪಪಟ್ಟಿ ಸಲ್ಲಿಸುವುದಾಗಿ ಸುಪ್ರೀಂ ಕೋರ್ಟ್ಗೆ ಇ.ಡಿ. ಮಾಹಿತಿ ನೀಡಿದೆ.