Advertisement

ಸಿದ್ದು ಕ್ಷಮೆ ಕೇಳದಿದ್ದರೆ ಹಕ್ಕುಚ್ಯುತಿ ಮಂಡನೆ

11:21 PM Oct 25, 2019 | Team Udayavani |

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್‌ ಬಗ್ಗೆ ಹಗುರವಾಗಿ ಮಾತನಾಡಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇದೀಗ ಸ್ಪೀಕರ್‌ ಬಗ್ಗೆ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ನಿಲುವಳಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಎಚ್ಚರಿಕೆ ನೀಡಿದರು.

Advertisement

ನಗರದ ಡಾಲರ್ ಕಾಲೋನಿ ನಿವಾಸದ ಬಳಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ವಿಧಾನಸಭಾಧ್ಯಕ್ಷರ ಬಗ್ಗೆ ಏಕವಚನದಲ್ಲಿ ಮಾತನಾಡಿ ಅಪಮಾನ ಮಾಡಿದ್ದಾರೆ. ಈ ಹಿಂದೆ ಯಾವುದೇ ಪ್ರತಿಪಕ್ಷ ನಾಯಕರಾಗಲಿ, ಶಾಸಕರಾಗಲಿ ವಿಧಾನಸಭಾಧ್ಯಕ್ಷರ ಬಗ್ಗೆ ಈ ರೀತಿ ಮಾತನಾಡಿರುವ ಉದಾಹರಣೆ ಇಲ್ಲ. ಅವರು ಅಧಿಕಾರದ ಮದದಿಂದ ಈ ರೀತಿ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ನೆಲಸಮವಾದರೂ ಅವರು ಪಾಠ ಕಲಿತಿಲ್ಲ. ಚುನಾವಣೆಯಲ್ಲಿ ಜನ ಸೋಲಿಸಿದರೂ ಅವರಿಗೆ ಬುದ್ಧಿ ಬಂದಿಲ್ಲ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಅವರನ್ನು ಸೋಲಿಸಿ ಜನ ಪಾಠ ಕಲಿಸಲಿದ್ದಾರೆ ಎಂದರು. ಕಳಸಾ ಬಂಡೂರಿ ಯೋಜನೆ ವಿಚಾರದಲ್ಲೂ ಕೇಂದ್ರ ಸರ್ಕಾರವನ್ನು ನಾವು ಮನವೊಲಿಸಿದ್ದೇವೆ. ಆದರೆ ಗೋವಾ ತಗಾದೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next