Advertisement

ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಚಿವ ಸುರೇಶ್ ಕುಮಾರ್

06:30 PM Jun 19, 2020 | keerthan |

ಚಾಮರಾಜನಗರ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2031ರವರೆಗಿನ ಹತ್ತು ವರ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದರು.

Advertisement

ನಗರಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ, ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2031ರವರೆಗೆ ಏರಿಕೆಯಾಗುವ ಜನಸಂಖ್ಯೆ, ಆಗಿನ ಅಗತ್ಯತೆಗಳನ್ನು ಗಮನದಲ್ಲಿರಿಸಿಕೊಂಡು, ಉದ್ದಿಮೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ, ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುವ ದೃಷ್ಟಿಯಿಂದ ಕರಡು ಮಾಸ್ಟರ್ ಪ್ಲಾನ್ ತಯಾರಿಸಲಾಗುತ್ತಿದೆ. ಇದನ್ನು ಇನ್ನಷ್ಟು ಸುಧಾರಿಸಲು ಸಲಹೆ ನೀಡಿದ್ದೇನೆ. ಇದನ್ನು ಇನ್ನು ಕೆಲವೇ ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ನಗರೋತ್ಥಾನ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ನಗರದ ಅಂಬೇಡ್ಕರ್ ಕ್ರೀಡಾಂಗಣ, ವಾಣಿಜ್ಯ ಸಂಕೀರ್ಣ, ಖಾಸಗಿ ಬಸ್ ನಿಲ್ದಾಣ ಕಾಮಗಾರಿಗಳನ್ನು ಪರಿಶೀಲಿಸಿದೆ. ಕಾಮಗಾರಿ ವಿಳಂಬವಾಗಿರುವುದನ್ನು ಗಮನಿಸಿ, ಇನ್ನು ಯಾವುದೇ ಕಾರಣ ನೀಡದೇ ಆ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಬೇಕು ಎಂದು ಸೂಚಿಸಿದ್ದೇನೆ. ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ನಡುವೆ ಸಮನ್ವಯದ ಕೊರತೆ ಇದೆ. ಅದಕ್ಕೆ ಇತಿಶ್ರೀ ಹಾಡಿ, ಕಾಮಗಾರಿ ಮುಗಿಸಿ ಉದ್ಘಾಟನೆ ಮಾಡಬೇಕು ಎಂದು ಆದೇಶಿಸಿದ್ದೇನೆ. ಖಾಸಗಿ ಬಸ್ ನಿಲ್ದಾಣದಲ್ಲಿ ಬಾಕಿಯಿದೆ. ಜುಲೈ 15ರೊಳಗೆ ಕಾಮಗಾರಿ ಮುಗಿಸಿ ಲೋಕಾರ್ಪಣೆಗೆ ದಿನಾಂಕ ನಿಗದಿಪಡಿಸಲಾಗುವುದು. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇನ್ನೊಂದು ಪ್ರವೇಶ ದ್ವಾರದ ಅಗತ್ಯವಿದೆ.  ಅದರ ಕಾಮಗಾರಿಯನ್ನೂ ತ್ವರಿತವಾಗಿ ಮುಗಿಸಲು ಸೂಚನೆ ನೀಡಲಾಗಿದೆ ಎಂದರು.

ವೀರಭದ್ರೇಶ್ವರ ದೇವಾಲಯದ ಬಳಿ ವಾಣಿಜ್ಯ ಸಂಕೀರ್ಣ ಪೂರ್ಣಗೊಂಡಿದೆ. ಅದನ್ನು ಸದ್ಯದಲ್ಲೇ ಉದ್ಘಾಟಿಸಲಾಗುವುದು. ಜಿಲ್ಲಾ ಕೇಂದ್ರದಲ್ಲಿ ಸುರಕ್ಷಿತ ಆಹಾರ ವಲಯವನ್ನು (ಫುಡ್‌ಸ್ಟ್ರೀಟ್) ಸ್ಥಾಪಿಸಲು ಸ್ಥಳ ಪರಿಶೀಲನೆ ಮಾಡಲಾಗಿದೆ. ಜುಲೈನಲ್ಲಿ ಉದ್ಘಾಟಿಸಲಾಗುವುದು. ಚಾಮರಾಜನಗರದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಬೇಕೆಂಬ ಬೇಡಿಕೆಯಿದೆ. ಇದಕ್ಕಾಗಿ ಜಾಗವೊಂದನ್ನು ಅಂತಿಮಗೊಳಿಸಿ ಅತ್ಯಂತ ತ್ವರಿತಗತಿಯಲ್ಲಿ ಪ್ರಾರಂಭಿಸಲು ಯೋಚಿಸಿದ್ದೇವೆ. ಜಿಲ್ಲಾಧಿಕಾರಿಯವರು ನಗರದ ಬಿ. ರಾಚಯ್ಯ ಜೋಡಿ ರಸ್ತೆ ಸಮಸ್ಯೆಯನ್ನು ಪರಿಹರಿಸಲು ನಾಗರಿಕರನ್ನು ಕರೆದು ಮಾತನಾಡಲಿದ್ದಾರೆ ಎಂದರು.

ಮುಂದಿನ ಶೈಕ್ಷಣಿಕ ವರ್ಷ ಯಾವಾಗ ಪ್ರಾರಂಭ ಎಂದು ನಾವಿನ್ನೂ ನಿರ್ಧಾರ ಕೈಗೊಳ್ಳಲಾಗಿಲ್ಲ. ಕೇಂದ್ರ ಸರ್ಕಾರದ ಸೂಚನೆಯಂತೆ ಪೋಷಕರ ಅಭಿಪ್ರಾಯ ಸಂಗ್ರಹಣೆ ಮಾಡುತ್ತಿದ್ದೇವೆ. ಪ್ರತಿ ಶಾಲೆಯ ಪೋಷಕರ ಅಭಿಪ್ರಾಯವನ್ನು ಜೂ. 20ರವರೆಗೆ ಸಂಗ್ರಹಿಸುತ್ತಿದ್ದು, ಅದನ್ನು ಕೊ್ರೀಢೀಕರಿಸಿ ನಂತರ ನಿರ್ಧಾರ ಕೈಗೊಳ್ಳುತ್ತೇವೆ. ಕೇಂದ್ರ ಸರ್ಕಾರ ಸಹ ಮಾರ್ಗಸೂಚಿ ಕೆಲವೇ ದಿನಗಳಲ್ಲಿ ತಲುಪಲಿದೆ ಎಂದು ತಿಳಿಸಿದರು.

Advertisement

ಎಲ್ಲ ಶಾಲೆಗಳಲ್ಲಿ ಕೋವಿಡ್ ಮತ್ತು ಇತರ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಕಿರು ಹೊತ್ತಿಗೆ ತರಲಾಗುತ್ತಿದೆ. ಕೋವಿಡ್ ತಡೆಗೆ ದೇಶದಲ್ಲಿ ಮಾಡಿದ ಪ್ರಯತ್ನ, ಬೇರೆ ದೇಶಗಳ ಪ್ರಯತ್ನಗಳನ್ನು ಇದರಲ್ಲಿ ವಿವರಿಸಲಾಗಿದೆ ಎಂದರು.

ಇದಕ್ಕೂ ಮೊದಲು ಸಚಿವರು ಜಿಲ್ಲಾಸ್ಪತ್ರೆಯಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಹೊರರೋಗಿಗಳ ವಿಭಾಗವನ್ನು ಆಸ್ಪತ್ರೆಗೆ ಬಂದಿದ್ದ ಮಹಿಳಾ ರೋಗಿಯಿಂದ  ಉದ್ಘಾಟನೆ ಮಾಡಿಸಿದರು. ಇದೇ ಸಂದರ್ಭದಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ತುರ್ತುಚಿಕಿತ್ಸಾ ಘಟಕವನ್ನು ಶಾಸಕ ಪುಟ್ಟರಂಗಶೆಟ್ಟಿ ಲೋಕಾರ್ಪಣೆ ಮಾಡಿದರು.

ರೋಗಿಗಳ ದಾಖಲೆಯನ್ನು ಸಮರ್ಪಕವಾಗಿ ಮಾಡಲು ಇ-ಆಸ್ಪತ್ರೆಯನ್ನು ಜಾರಿಗೊಳಿಸಲಾಗಿದೆ. ಈಗಾಗಲೇ 1.79 ಕೋಟಿ ರೂ. ವೆಚ್ಚದಲ್ಲಿ ಅತ್ಯುನ್ನತ ಗುಣಮಟ್ಟದ ಕೋವಿಡ್ ಲ್ಯಾಬೊರೇಟರಿಯನ್ನು ಸಿಮ್ಸ್ ನಲ್ಲಿ ನಿರ್ಮಿಸಲಾಗಿದೆ. ಚಾಮರಾಜನಗರ ಕೋವಿಡ್ ವಿರುದ್ಧದ ಸಮರದಲ್ಲಿ ಇಡೀ ರಾಜ್ಯದ ಗಮನ ಸೆಳೆದಿದೆ. ಅದೇ ರೀತಿ ನಿರ್ಮಾಣವಾಗಿರುವ ಕೋವಿಡ್ ಲ್ಯಾಬ್ ಕೂಡ ಉತ್ಕೃಷ್ಟತೆಯಿಂದ ಇಡೀ ರಾಜ್ಯದ ಗಮನ ಸೆಳೆದಿದೆ ಎಂದು ಸಚಿವ ಸುರೇಶ್‌ಕುಮಾರ್ ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next