Advertisement

7ನೇ ವೇತನ ಆಯೋಗಕ್ಕೆ ಆಗ್ರಹಿಸಿ ಮಾ.1 ರಿಂದ ಸರ್ಕಾರಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

11:17 AM Feb 23, 2023 | keerthan |

ವಿಜಯಪುರ: ರಾಜ್ಯ ಸರ್ಕಾರ ತನ್ನ ನೌಕರರಿಗೆ ವೇತನ-ಭತ್ಯೆಗಳ ಪರಿಷ್ಕರಣೆ, 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆಯಬೇಕು, ಪಿಂಚಣಿ ಹಳೆ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯ ಸರ್ಕಾರಿ ನೌಕರರು ಮಾ.1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ ತಿಳಿಸಿದರು.

Advertisement

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮುಷ್ಕರದ ನಡೆಸುವ ಹಾಗೂ ಉದ್ದೇಶದ ವಿವರ ನೀಡಿದ ಅವರು, ಈಗಾಗಲೇ ಸಂಘದ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ 8000 ಚುನಾಯಿತ ಪ್ರತಿ‌ನಿಧಿಗಳ ಸಮ್ಮುಖದಲ್ಲಿ ಮಾ.1ರಿಂದ ಅನಿರ್ಧಿಷ್ಟ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದರು.

ರಾಜ್ಯ ಸರ್ಕಾರ ಮಂಡಿಸಿದ 2023-24 ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದರಿಂದಾಗಿ ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿದ್ದು, ಆಕ್ರೋಶಕ್ಕೂ ಕಾರಣವಾಗಿದೆ ಎಂದರು.

ಕಳೆದ ವರ್ಷದ ಜುಲೈ 1 ರಿಂದ ರಾಜ್ಯ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ಸೌಲಭ್ಯ ಜಾರಿಗೆ ಬರಳಿಬೇಕಿತ್ತು. ರಾಜ್ಯ ಸರ್ಕಾರಿ ನೌಕರರ ವೇತನ- ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅಧ್ಯಕ್ಷತೆಯಲ್ಲಿ ರಚಿಸಿದ್ದ 7 ನೇ ವೇತನ ಆಯೋಗದ ಮುಂದೆ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ನಮ್ಮ ಸಂಘ ವಿಸ್ತೃತ ವರದಿ ಸಿದ್ದಪಡಿಸಿದ್ದರೂ ಸರ್ಕಾರ ಅನುಷ್ಠಾನಕ್ಕೆ ತಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆ ಪರಿಷ್ಕರಣೆಯೊಂದಿಗೆ ಪಡೆಯುವುದು ಮೂಲಭೂತ, ನ್ಯಾಯ ಸಮ್ಮತ ಹಕ್ಕು. ಬೆಲೆ ಏರಿಕೆಯ ಪ್ರಸ್ತುತ ದಿನಗಳಲ್ಲಿ ಸರ್ಕಾರಿ ನೌಕರರು, ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸ ಸರಿಪಡಿಸುವುದು ಸರ್ಕಾರದ ಜವಾಬ್ದಾರಿ ಎಂದು ವಿವರಿಸಿದರು.

Advertisement

ಆದರೆ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದೆ. ಹೀಗಾಗಿ ಸಂಘದ ಸಭೆಯಲ್ಲಿ ಸರ್ಕಾರದ ವರ್ತನೆ ವಿರೋಧಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಒಕ್ಕೋರಲಿನಿಂದ ಸಮ್ಮತಿಸಿದೆ ಎಂದರು.

ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನವೇ ಬೇಡಿಕೆ ಈಡೇರಿಸುವ ಕುರಿತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರು ಮಾ.1 ರಿಂದ ಅನಿರ್ಧಿಷ್ಟ ಅವಧಿ ವರೆಗೆ ಕರ್ತವ್ಯಕ್ಕೆ ಗೈರಾಗಲು ನಿರ್ಧರಿಸಲಾಗಿದೆ ಎಂದರು‌.

ಇದನ್ನೂ ಓದಿ:ಭಾರತ ವಿರುದ್ಧದ ಏಕದಿನ ಸರಣಿಗೆ ಆಸೀಸ್ ತಂಡ ಪ್ರಕಟ; ಮ್ಯಾಕ್ಸ್’ವೆಲ್, ಮಾರ್ಶ್ ಕಮ್’ಬ್ಯಾಕ್

ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ 2022 ಜುಲೈ 1 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹವಾಗಿದ್ದು, 6 ನೇ ವೇತನ ಆಯೋಗದ ಮಾದರಿಯಂತೆ 7 ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿ ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲೇ 2022 ಜುಲೈ 1 ರಿಂದ ಜಾರಿಗೆ ಬರುವಂತೆ ಶೇ. 40 ಫಿಟ್ ಮೆಂಟ್ ಸೌಲಭ್ಯ ಕಲ್ಪಿಸಿ ಸರ್ಕಾರಿ ಆದೇಶ ಹೊರಡಿಸಬೇಕು.

ರಾಜ್ಯದ ಪಿಂಷಣಿ ಹೊಸ ಯೋಜನಾ ವ್ಯಾಪ್ತಿಯ ನೌಕರರನ್ನು ಪಿಂಚಣಿ ಹೊಸ ಯೋಜನೆ ವ್ಯಾಪ್ತಿಗೆ ತರಬೇಕು. ಪಂಜಾಬ್, ರಾಜಸ್ಥಾನ, ಛತ್ತೀಸ್ ಘಡ, ಜಾರ್ಖಂಡ, ಹಿಮಾಚಲ ಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆ ಕರ್ನಾಟಕದಲ್ಲೂ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ರಾಜಶೇಖರ ಹ.ಧೈವಾಡಿ ಮಾತನಾಡಿ, ನೌಕರರ ಬೇಡಿಕೆ ನ್ಯಾಯಾಮ್ಮತವಾಗಿದ್ದು, ನಮ್ಮ ಸಂಘದ ಅಧೀನತೆ ಹೊಂದಿರುವ 40 ಸಂಘಟನೆಗಳು ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಲಿವೆ ಎಂದರು.

ಸಂಘಟನೆತ ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಸೈಯದ ಜುಬೇರ ಕೆರೂರ, ವಿಶ್ವನಾಥ ಬೆಳ್ಳೆನ್ನವರ, ಗಂಗಾಧರ ಜೇವೂರ, ಶಿವರಾಜ ಬಿರಾದಾರ, ಸುರೇಶ ಅಂಬಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next