Advertisement

ನೂತನ ಶಿಕ್ಷಣ ನೀತಿಯಿಂದ ಜ್ಞಾನ ಆರ್ಥಿಕತೆಯಲ್ಲಿ ಭಾರತಕ್ಕೆ ಅಗ್ರಸ್ಥಾನ: ಪ್ರಧಾನಿ ನಿರೀಕ್ಷೆ

04:27 PM Sep 07, 2020 | keerthan |

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದ 21ನೇ ಶತಮಾನದಲ್ಲಿ ಭಾರತವು ʼಜ್ಞಾನ ಆರ್ಥಿಕತೆʼಯಲ್ಲಿ ಜಗತ್ತಿನಲ್ಲಿಯೇ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

Advertisement

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯಿಂದಲೇ ದೇಶದ ಎಲ್ಲ ರಾಜ್ಯಪಾಲರು ಮತ್ತು ಶಿಕ್ಷಣ ಸಚಿವರ ಎರಡು ದಿನಗಳ ಆನ್ಲೈನ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೊಂದಿಗೆ ಸಂವಾದ ನಡೆಸಿದ ಮೋದಿ, ಶಿಕ್ಷಣ ಕ್ಷೇತ್ರದಲ್ಲಿ ಭಾರತಕ್ಕೆ ಉಜ್ವಲ ಭವಿಷ್ಯವಿದೆ. ಆ ನಿಟ್ಟಿನಲ್ಲಿ ಶಿಕ್ಷಣ ನೀತಿ ಹೆಚ್ಚು ಸಹಕಾರಿಯಾಗಲಿದೆ ಎಂದರು.

ಈ ಮಹತ್ತ್ವದ ಸಮ್ಮೇಳನದಲ್ಲಿ ರಾಜ್ಯದ ವತಿಯಿಯಿಂದ ರಾಜ್ಯಪಾಲ ವಜೂಭಾಯಿ ವಾಲ, ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ, ಬೆಂಗಳೂರು ವಿವಿ ಉಪ ಕುಲಪತಿ ಕೆ. ವೇಣುಗೋಪಾಲ್ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರಲ್ಲದೆ, ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿಗಳ ಮಾತುಗಳನ್ನು ಆಲಿಸಿದರು.

ದೇಶದ ಶಿಕ್ಷಣ ನೀತಿ: ಶಿಕ್ಷಣ ನೀತಿಯಲ್ಲಿ ಸರಕಾರದ ಪ್ರಭಾವ ಕಡಿಮೆ ಇರಬೇಕು, ಏಕೆಂದರೆ ಇದು ಸರಕಾರದ ಶಿಕ್ಷಣ ನೀತಿಯಲ್ಲ, ದೇಶದ ಶಿಕ್ಷಣ ನೀತಿ. ವಿದೇಶ, ರಕ್ಷಣಾ ನೀತಿ ಹೇಗೆ ದೇಶದ್ದು ಆಗುತ್ತದೆಯೋ ಹಾಗೆಯೇ ಶಿಕ್ಷಣ ನೀತಿ ದೇಶದ್ದು ಎಂದು ಇದೇ ವೇಳೆ ಪ್ರಧಾನಿ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಯುವಕರಿಗೆ ಅಗತ್ಯ ಕೌಶಲ್ಯಗಳು ಬೇಕು. ಅದಕ್ಕೆ ಪ್ರಾಯೋಗಿಕ ಕಲಿಕೆಯ ಅಗತ್ಯವಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ಇದಕ್ಕೆ ಅವಕಾಶ ಕಲ್ಪಿಸಲಿದೆ ಎಂದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಭಾರತವನ್ನು ಸಮಾನ, ಸ್ಪರ್ಧಾತ್ಮಕ ಮತ್ತು ಕ್ರಿಯಾಶೀಲ ಜ್ಞಾನದ ಸಮಾಜವನ್ನಾಗಿ ರೂಪಿಸಲಿದೆ ಎಂವ ವಿಶ್ವಾಸವನ್ನು ವ್ಯಕ್ತಪಡಿಸಿದರು.

Advertisement

ಶಿಕ್ಷಣ ನೀತಿ ಓದು, ಬರೆಯುವುದರ ಮೇಲೆ ನಿಂತಿಲ್ಲ. ಇದು ದೇಶದ ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಯ ಮೇಲೆ ಪ್ರಭಾವ ಬೀರಲಿದೆ. ವಿದ್ಯಾರ್ಥಿಗಳ ಕಲಿಕೆ ಪುಸ್ತಕಕ್ಕೆ ಮಾತ್ರ ಸೀಮಿತವಾರಬಾರದು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯವಾಗಿದೆ ಎಂದರು.

ಉದ್ಯೋಗ ಮಾರುಕಟ್ಟೆಯ ಅಗತ್ಯಗಳಿಗೆ ತಕ್ಕಂತೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಬದಲಿಸಿಕೊಳ್ಳಬೇಕಾದ ಅಗತ್ಯವಿದೆ. ಅದಕ್ಕೆ ಪೂರಕವಾದ ಎಲ್ಲ ಅಂಶಗಳೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇವೆ ಹಾಗೂ ದೇಶದ ನಿರೀಕ್ಷೆಗಳನ್ನು ಈಡೇರಿಸುವ ಶಕ್ತಿಯನ್ನು ನೀತಿ ಹೊಂದಿದೆ ಎಂದು ಹೇಳಿದರು.

ಹೊಸ ದಿಕ್ಸೂಚಿ: ಶಿಕ್ಷಣ ನೀತಿಯೂ ಇಡೀ ದೇಶಕ್ಕೆ ಹೊಸ ದಿಕ್ಸೂಚಿ ನೀಡುವ ಶಕ್ತಿ ಹೊಂದಿದೆ ಎಂದ ಪ್ರಧಾನಿ, ವಿವಿಧ ಕ್ಷೇತ್ರಗಳೂ ಸೇರಿ ಜಾಗತಿಕವಾಗಿ ಆಗುತ್ತಿರುವ ಬದಲಾವಣೆಗಳ ಹಿನ್ನೆಲೆಯಲ್ಲಿ ಉದ್ಯೋಗ ಮಾರುಕಟ್ಟೆಯಲ್ಲಿ ಎದುರಾಗುತ್ತಿರುವ ಸವಾಲುಗಳಿಗೆ ದೇಶದ ಯುವಜನತೆಯನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ನೀತಿ ದಾರಿ ತೋರಿಸುತ್ತದೆ ಎಂದರು.

ದೇಶಾದ್ಯಂತ ಶಿಕ್ಷಣ ನೀತಿಗೆ ಉತ್ತಮ ಪ್ರತಿಕ್ರಿಯೆ ಹಾಗೂ ಸ್ವಾಗತ ವ್ಯಕ್ತವಾಗಿದೆ ಎಂಬುದನ್ನು ನಾನು ಬಲ್ಲೆ. ಹೀಗಾಗಿ ದೇಶದ ಎಲ್ಲ ನಿರೀಕ್ಷೆಗಳಿಗೆ ಶಿಕ್ಷಣ ನೀತಿಯಲ್ಲಿ ಉತ್ತರವಿದೆ. ಆದ್ದರಿಂದ ಈ ನೀತಿಯನ್ನು ಅತ್ಯಂತ ಪರಿಣಾಮಕಾರಿ ಹಾಗೂ ರಚನಾತ್ಮಕವಾಗಿ ಕಟಿಬದ್ಧವಾಗಿ ಎಲ್ಲ ರಾಜ್ಯಗಳು ಜಾರಿ ಮಾಡಬೇಕು ಎಂದು ಪ್ರಧಾನಮಂತ್ರಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next