Advertisement

ನಿಜಕ್ಕೂ KSRTC ಬಸ್ ಟಿಕೆಟ್ ದರ ಏರಿಕೆಯಾಗುತ್ತಾ? ಸಾರಿಗೆ ಸಚಿವರು ಹೇಳಿದ್ದೇನು?

01:56 PM Aug 24, 2024 | Team Udayavani |

ಬೆಂಗಳೂರು: ಕೆಲ ದಿನಗಳ ಹಿಂದೆಯಷ್ಟೇ ಉಪಮುಖ್ಯಮಂತ್ರಿ ನೀರಿನ ಬಿಲ್ ಹೆಚ್ಚಳ ಮಾಡುವ ಕುರಿತು ಹೇಳಿಕೆ ನೀಡಿ ಜನರಿಗೆ ಶಾಕ್ ನೀಡಿದ ಬೆನ್ನಲ್ಲೇ ಇದೀಗ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಿಸುವ ಕುರಿತು ಮಾಹಿತಿ ನೀಡಿದ್ದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

Advertisement

ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (KERC) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (KTRC) ರಚನೆಗೆ ಸರ್ಕಾರ ಮುಂದಾಗಿದೆ ಎಂಬ ಪತ್ರಿಕಾ ವರದಿಯನ್ನು ಉಲ್ಲೇಖಿಸಿ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಹಾಗೂ ಬಿ.ವೈ. ವಿಜಯೇಂದ್ರ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲೇ ತಿರುಗೇಟು ನೀಡಿದ ಸಾರಿಗೆ ಸಚಿವರು ‘ಅಶೋಕ್ ರವರೇ, ನೀವು ಸಾರಿಗೆ ಸಚಿವರಾಗಿದ್ದವರು, ಸಾರಿಗೆ ಸಂಸ್ಥೆಗಳ‌ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ 10.5% ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ ? 2020 ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ 12% ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ ? ಆಗ ಯಾಕೆ ವಿರೋಧ ವ್ಯಕ್ತ ಪಡಿಸಲಿಲ್ಲ
ಎಂದು ತಿರುಗೇಟು ನೀಡಿದರು.

ದಿನಾಂಕ: 15/11/2021 ರಲ್ಲಿ ಶ್ರೀ. ಎಂ.ಆರ್ ಶ್ರೀನಿವಾಸಮೂರ್ತಿ ಭಾಆಸೇ( ನಿವೃತ್ತ) ರವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಸಮಿತಿಯನ್ನು ತಮ್ಮದೇ ಬಿ.ಜೆ.ಪಿ ಸರ್ಕಾರ ರಚಿಸಿತ್ತು. ಅನೇಕ ಶಿಫಾರಸುಗಳೊಂದಿಗೆ ಪ್ರಮುಖವಾಗಿ, ಬಸ್ ಪ್ರಯಾಣ ದರವನ್ನು Institutional Arrangement for Revision of Bus Fares ಶೀರ್ಷಿಕೆಯಡಿಯಲ್ಲಿ KERC ಮಾದರಿಯಲ್ಲಿ ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು, ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ಸದರಿ ಸಮಿತಿಯು ವರದಿ ನೀಡಿದ್ದು, ನೀವು ಕ್ಯಾಬೆನೆಟ್ ಮಂತ್ರಿಯಾಗಿದ್ದಾಗ ಯಾಕೆ ಈ ವರದಿಯನ್ನು ತಿರಸ್ಕರಿಸಲಿಲ್ಲ. ತಮ್ಮದೇ ಸರ್ಕಾರ ಅಂಗೀಕಾರ ಮಾಡಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳಲು ಹೊರಟ್ಟಿದ್ದೀರಾ ?

ಕರ್ನಾಟಕ ಸರ್ಕಾರವು ದಿನಾಂಕ 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಮಾಹಿತಿಯೇ ತಮಗೆ ಇಲ್ಲವೇ?

ತಮ್ಮದೇ ಬಿಜೆಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ?

Advertisement

ನನಗೆ ರಾಜಕೀಯವೇ ಮುಖ್ಯ. ಸಾರಿಗೆ ಸಂಸ್ಥೆಗಳು ಉಳಿದರೇನು ? ಮುಳುಗಿದರೆ ನನಗೇನು? ಅನ್ನುವ ಮನಸ್ಥಿತಿಯೇ ತಿಳಿಯದಾಗಿದೆ. ಅಶೋಕ್ ರವರೇ ತಾವು ಕೂಡ ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲಾ‌‌ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next