Advertisement

ಬೀದರ್‌ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡಲು  ಈಶ್ವರ್‌ಖಂಡ್ರೆ ವಿರೋಧ

12:35 AM Jan 13, 2019 | Team Udayavani |

ಬೆಂಗಳೂರು :ಬೀದರ್‌ ಜಿಲ್ಲೆಯಲ್ಲಿ ಐದು ಮಂದಿ ಕಾಂಗ್ರೆಸ್‌ ಶಾಸಕರಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಲೋಕಸಭಾ ಸೀಟು ಹಂಚಿಕೆ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

Advertisement

ಬೀದರ್‌ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಮಾಜಿ ಪ್ರಧಾನಿ ದೇವೇಗೌಡರು ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬೀದರ್‌ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂದು ಪರೋಕ್ಷವಾಗಿ ಹೇಳಿದರು.

ಬೀದರ್‌ ಜಿಲ್ಲೆಯಲ್ಲಿ ಐದು ಜನ ಕಾಂಗ್ರೆಸ್‌ ಶಾಸಕರು ಇದ್ದಾರೆ. ಆ ದೃಷ್ಟಿಯಿಂದಲೇ ಬೀದರ್‌ ಲೋಕಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಕುಳಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇದರ ಬಗ್ಗೆ ಯಾರು ಗೊಂದಲ ಪಡುವ ಅಗತ್ಯವಿಲ್ಲ. ಎಲ್ಲವೂ ಸುಸೂತ್ರವಾಗಿ ಎಲ್ಲರೂ ಒಪ್ಪುವಂತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾವ ಪಕ್ಷದ ಪ್ರಭಾವ, ವರ್ಚಸ್ಸು ಹೆಚ್ಚಿರುತ್ತದೋ ಆ ಪಕ್ಷದ ಅಭ್ಯರ್ಥಿ ಸ್ವರ್ಧೆ ಮಾಡಬೇಕು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಉದ್ದೇಶವಾಗಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯನ್ನು ಯಾರು ಸೋಲಿಸುತ್ತಾರೋ ಅವರಿಗೆ ಟಿಕೆಟ್‌ ಕೊಡುವ ಬಗ್ಗೆ ತೀರ್ಮಾನ ಆಗಿದೆ  ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next