Advertisement

ಅಧಿಕಾರ ಉಳಿಸಿಕೊಳ್ಳೋದು ಅನಿವಾರ್ಯ

06:00 AM Jun 29, 2018 | Team Udayavani |

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ಅನಿವಾರ್ಯ ಎಂದು ಕೆಪಿಸಿಸಿ
ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸಚಿವರಿಗೆ ಕಿವಿ ಮಾತು ಹೇಳಿದ್ದಾರೆ.

Advertisement

ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಗುರುವಾರ ದಿಢೀರ್‌ ಸಭೆ ಕರೆದ ಅವರು, ಸಚಿವರು ಅನಗತ್ಯ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಂಡು ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡದೆ, ತಮಗೆ ವಹಿಸಿರುವ ಇಲಾಖೆಗಳ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು.

ರಾಜ್ಯದ ಎಲ್ಲ ಬೆಳವಣಿಗೆಗಳನ್ನು ಹೈಕಮಾಂಡ್‌ ಗಮನಿಸುತ್ತಿದ್ದು, ಸಚಿವರು ಯಾರೂ ಸಿದ್ದರಾಮಯ್ಯನವರ ಹೇಳಿಕೆಗಳನ್ನು ಸಮರ್ಥಿಸದಂತೆ ಪರಮೇಶ್ವರ್‌ ತಾಕೀತು ಮಾಡಿದ್ದಾರೆಂದು ಹೇಳಲಾಗುತ್ತಿದೆ. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಸಚಿವರು ತಮ್ಮ ಜಿಲ್ಲೆಗಳಲ್ಲಿ ಕಾರ್ಯಕರ್ತರು ಮತ್ತು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು.

ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್‌ ರಾಷ್ಟ್ರದ ಹಿತದೃಷ್ಟಿಯಿಂದ ಜೆಡಿಎಸ್‌ ಜತೆಗೆ ಹೊಂದಾಣಿಕೆ ಮಾಡಿಕೊಂಡಿದ್ದು, ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳುವುದು ಅನಿವಾರ್ಯವಾಗಿದೆ. ಜೆಡಿಎಸ್‌ಗಿಂತ ಕಾಂಗ್ರೆಸ್‌ಗೆ ಈ ಮೈತ್ರಿ ಅನಿವಾರ್ಯ.

Advertisement

ಬಿಜೆಪಿಯವರು ಈ ಸರ್ಕಾರ ಪತನಗೊಳ್ಳುವುದಕ್ಕಾಗಿ ಕಾದು ಕೂತಿದ್ದಾರೆ. ಆದರೂ ನಮ್ಮ ನಾಯಕರು ಹೇಳಿ 
ಕೆಗಳನ್ನು ನೀಡುವುದನ್ನು ಬಿಡುತ್ತಿಲ್ಲ ಎಂದು ಪರಮೇಶ್ವರ್‌ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಮುಂದಿನವಾರ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲ ಸಚಿವರೂ ಒಗ್ಗಟ್ಟು ಪ್ರದರ್ಶಿಸುವ ಅವಶ್ಯಕತೆಯಿದೆ. ಹೀಗಾಗಿ ಎಲ್ಲರೂ ಒಟ್ಟಾಗಿ ಇರುವಂತೆ ಸೂಚಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪಕ್ಷದ ಹೈಕಮಾಂಡ್‌ ಒಂದು ದಿನವೂ ತೊಂದರೆ ಕೊಟ್ಟಿಲ್ಲ. ಈಗ
ಹೈಕಮಾಂಡ್‌ ಹಿನ್ನಡೆ ಅನುಭವಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಕಾರ್ಯತಂತ್ರ: ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್‌, ಲೋಕಸಭೆ ಚುನಾವಣೆ 
ಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ರಣತಂತ್ರ ರೂಪಿಸುವ ಕುರಿತು ಚರ್ಚಿಸಲು ಸಚಿವರ ಸಭೆ ಕರೆದಿದ್ದೆ. ಎಐಸಿಸಿ ನೀಡಿರುವ ಸೂಚನೆಗಳನ್ನು ಸಚಿವರಿಗೆ ನೀಡಲಾಗಿದೆ. ಮೈತ್ರಿ ಸರ್ಕಾರದಲ್ಲಿನ ಕೆಲವು ಗೊಂದಲಗಳ ಬಗ್ಗೆ ಸಚಿವರು ಹೇಳಿಕೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಗಮನಕ್ಕೆ ತಂದು, ಜಿಲ್ಲಾ ಉಸ್ತುವಾರಿ ಸಚಿವರನ್ನು ಶೀಘ್ರವೇ ನೇಮಕ ಮಾಡಲಾಗುವುದು.

ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅಲ್ಲದೆ, ಸಿದ್ದರಾಮಯ್ಯ
ಅವರ ಹೇಳಿಕೆ ಬಗ್ಗೆ ಸಚಿವರು ಯಾರೂ ಹೇಳಿಕೆಗಳನ್ನು ನೀಡದಂತೆ ಸೂಚಿಸಲಾಗಿದೆ ಎಂದರು.

ಖಾಲಿ ಇರುವ ಆರು ಸ್ಥಾನಗಳನ್ನು ಭರ್ತಿ ಮಾಡಲು ಹೈಕಮಾಂಡ್‌ ಸೂಚನೆ ನೀಡಿದೆ. ಯಾವಾಗ ಬೇಕಾದರೂ
ಸಂಪುಟ ವಿಸ್ತರಣೆಯಾಗ ಬಹುದು. ಶೀಘ್ರವೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಮಾಡುತ್ತೇವೆ ಎಂದರು.

1ರಂದು ಸಮನ್ವಯ ಸಮಿತಿ ಸಭೆ: ಸಮ್ಮಿಶ್ರ ಸರ್ಕಾರದಲ್ಲಿನ ಗೊಂದಲ, ಬಜೆಟ್‌ ಮಂಡನೆ ಬಗ್ಗೆ ಚರ್ಚಿಸಲು ಜುಲೈ 1 ರಂದು ಸಮನ್ವಯ ಸಮಿತಿ ಸಭೆ ನಡೆಸಲು ಆಲೋಚಿಸಲಾಗಿದೆ. ಸಮಯ ಇನ್ನೂ ನಿಗದಿಯಾಗಿಲ್ಲ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ದಿನೇಶ್‌ ಗುಂಡೂರಾವ್‌ ಬೇಸರಗೊಂಡು ವಿದೇಶಕ್ಕೆ ಹೋಗಿ ದ್ದಾರೆಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸಂಪುಟ ಮುಖ್ಯಮಂತ್ರಿಗೆ ಅಧಿಕಾರ ನೀಡಿದೆ. ಅವರು ಯಾವ ಕಾರಣಕ್ಕೆ ರತ್ನಪ್ರಭಾ ಅವರ ಅಧಿಕಾರ ವಿಸ್ತರಣೆ ಮಾಡಲಿಲ್ಲ ಎನ್ನುವುದು ಗೊತ್ತಿಲ್ಲ.
– ಡಾ.ಜಿ. ಪರಮೇಶ್ವರ್‌, ಉಪ ಮುಖ್ಯಮಂತ್ರಿ

ಸಿದ್ದರಾಮಯ್ಯ ನಮ್ಮ ನಾಯಕ. ಅವರನ್ನು ನೋಡಲು ಹತ್ತಲ್ಲ, ಹದಿನೈದು ಜನ ಧರ್ಮಸ್ಥಳಕ್ಕೆ ಹೋಗಿದ್ದೆವು. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಮ್ಮ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ?
– ರಮೇಶ್‌ ಜಾರಕಿಹೊಳಿ, ಪೌರಾಡಳಿತ ಸಚಿವ

ಮೈತ್ರಿ ಸರ್ಕಾರ ಸುಗಮವಾಗಿ ಸಾಗುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಪಕ್ಷ ಬಲಪಡಿಸುವ ಬಗ್ಗೆ ಮಾತ್ರ ಚರ್ಚೆಯಾಗಿದೆ. ಸಿದ್ದರಾಮಯ್ಯ ವಿಚಾರವಾಗಿ ಏನೂ ಮಾತನಾಡಿಲ್ಲ.
– ಯು.ಟಿ ಖಾದರ್ ನಗರಾಭಿವೃದ್ಧಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next