ಮಂಗಳೂರು: ಸ್ತ್ರೀಗೆ ಪೂಜನೀಯ ಸ್ಥಾನ ನೀಡಿರುವ ನಮ್ಮ ಸಂಸ್ಕೃತಿಯಲ್ಲಿ ಆಕೆಗೆ ಸಮಾನ ಅವಕಾಶವನ್ನೂ ಒದಗಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿ. ಸ್ತ್ರೀ ಇಂದು ಸೈನ್ಯ, ಬಾಹ್ಯಾಕಾಶ ಸಹಿತ ಹಲವಾರು ಕ್ಷೇತ್ರಗಳಲ್ಲಿ ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ಆದರೂ ಸ್ತ್ರೀ ಪುರುಷ ಅನುಪಾತ ಇಂದು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದು ಆತಂಕಕಾರಿ. ಹೆಣ್ಣಿರಲಿ ಗಂಡಿರಲಿ ಎಲ್ಲ ಮಕ್ಕಳೂ ಸಮಾನ ಎನ್ನುವ ಮನಸ್ಥಿತಿಯನ್ನು ನಾವು ಬೆಳೆಸಿಕೊಳ್ಳದೇ ಇದ್ದರೆ ಮುಂದೆ ನಾವೇ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪುತ್ತೂರು, ಗ್ರಾ. ಪಂ. ನೆಲ್ಯಾಡಿ, ಉನ್ನತ ಹಿರಿಯ ಪ್ರಾಥಮಿಕ ಶಾಲೆ ನೆಲ್ಯಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ನೆಲ್ಯಾಡಿ ಉನ್ನತ ಹಿ. ಪ್ರಾ. ಶಾಲೆ ಆವರಣದಲ್ಲಿ ನಡೆದ ಹೆಣ್ಣು ಮಗು ರಕ್ಷಿಸಿ ಹೆಣ್ಣು ಮಗುವಿಗೆ ಶಿಕ್ಷಣ ಕೊಡಿಸಿ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೇಂದ್ರ ಸರಕಾರ ಹೆಣ್ಣು ಮಕ್ಕಳ ಸಶಕ್ತೀಕರಣಕ್ಕಾಗಿ ಸಾಕಷ್ಟು ಯೋಜನೆ ಜಾರಿಗೆ ತಂದಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮಾತನಾಡಿ, ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನ್ಯಾಯವಾದಿ ಇಸ್ಮಾಯಿಲ್ ಮಾತನಾಡಿ, ಭ್ರೂಣಲಿಂಗ ಪತ್ತೆ ಕಾನೂನಿನ ಪ್ರಕಾರ ಅಪರಾಧವಾಗಿದ್ದು , ಭ್ರೂಣಲಿಂಗ ಪತ್ತೆ ಮಾಡುವವರು, ಮಾಡಿಸಿದವರು ಶಿûಾರ್ಹರು. ಒಂದಷ್ಟು ಜನರಿಗೆ ಈ ಕಾನೂನಿನಡಿ ಶಿಕ್ಷೆ ಆದಾಗ ಮಾತ್ರ ಈ ಪಿಡುಗನ್ನು ತಡೆಗಟ್ಟಬಹುದು ಎಂದರು.ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಂಗಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪಂ. ಸದಸ್ಯ ಸರ್ವೋತ್ತಮ ಗೌಡ, ತಾ. ಪಂ. ಸದಸ್ಯೆ ಉಷಾ ಅಂಚನ್, ಕೌಕ್ರಾಡಿ ಗ್ರಾ. ಪಂ. ಅಧ್ಯಕ್ಷ ಸಿ.ಕೆ. ಇಬ್ರಾಹಿಂ, ಶಾಲಾ ಮುಖ್ಯ ಶಿಕ್ಷಕ ಆನಂದ ಅಜಿಲ ಉಪಸ್ಥಿತರಿದ್ದರು.
ಕ್ಷೇತ್ರ ಪ್ರಚಾರಾಧಿಕಾರಿ ಜಿ. ತುಕಾರಾಮ ಗೌಡ ಪ್ರಸ್ತಾವಣೆಗೈದರು. ಪುತ್ತೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಹೆಗಡೆ ಸ್ವಾಗತಿಸಿದರು. ಅಂಗನವಾಡಿ ಮೇಲ್ವಿಚಾರಕಿ ಉಮಾವತಿ ವಂದಿಸಿದರು. ಕ್ಷೇತ್ರ ಪ್ರಚಾರ ಸಹಾಯಕ ರೋಹಿತ್ ಜಿ. ಎಸ್. ನಿರೂಪಿಸಿದರು.