Advertisement

ಜೈನ್ ಗುತ್ತಿಗೆ ಕಂಪನಿ ಕಪ್ಪು ಪಟ್ಟಿ ಸೇರ್ಪಡೆಗೆ ನಿರ್ಧಾರ: ಸಚಿವ ಭೈರತಿ ಬಸವರಾಜ

02:36 PM Sep 07, 2020 | keerthan |

ಬಾಗಲಕೋಟೆ: ನಗರಕ್ಕೆ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವ ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಳಂಬ ನೀತಿ ಅನುಸರಿಸಿದ ಜೈನ್ ಇರಿಗೇಶನ್ ಸಿಸ್ಟಮ್ಸ್ ಲಿಮಿಟೆಡ್ ಗುತ್ತಿಗೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಕೈಗೊಂಡ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ 2016 ಮಾರ್ಚ ತಿಂಗಳಲ್ಲಿ ಅಂದಾಜು 72 ಕೋಟಿ ರೂ.ಗಳ ವೆಚ್ಚದ ಟೆಂಡರ್ ಜೈನ್ ಕಂಪನಿಗೆ ನೀಡಿದ್ದು, 2021ಕ್ಕೆ ಪೂರ್ಣಗೊಳ್ಳಬೇಕಾಗಿತ್ತು. ಆದರೆ ಪ್ರಗತಿ ಮಂದಗತಿಯಲ್ಲಿ ನಡೆದಿದ್ದು, ಕಾಮಗಾರಿ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ ಜೈನ್ ಕಂಪನಿಯನ್ನು ರಾಜ್ಯದಲ್ಲಿ ಕಪ್ಪು ಪಟ್ಟಿಗೆ ಸೇರ್ಪಡೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈಗಾಗಲೇ ಜೈನ್ ಕಂಪನಿಗೆ ನೀಡಿದ ಕಾಮಗಾರಿ ಕೈಬಿಡುವ ಕುರಿತು ಧಾರವಾಡದ ರಾಜ್ಯ ನಗರ ನೀರು ಸರರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಇಂಜಿನಿಯರ್ ಅವರಿಗೆ ಪ್ರಸ್ತಾವನೆ ನೀಡಲಾಗಿದೆ. ಅಲ್ಲದೇ ಕಾಮಗಾರಿ ವಿಳಂಬ ನೀತಿಯಿಂದ ಗುತ್ತಿಗೆದಾರರಿಗೆ ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಂದ ನೋಟಿಸ್ ನೀಡಿ ವಿವರಣೆ ನೀಡಲು ನಿರ್ದೇಶನ ನೀಡಿದ್ದು, ತಪ್ಪಿದಲ್ಲಿ ಗುತ್ತಿಗೆ ರದ್ದುಪಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿನ ಕುಡಿಯುವ ನೀರು ಮತ್ತು ಒಳಚರಂಡಿಗಾಗಿ ಕೈಗೊಂಡ ಕಾಮಗಾರಿಗಳನ್ನು ಮುಂದಿನ 2-3 ತಿಂಗಳಲ್ಲಿ ಪೂರ್ಣಗೊಳಿಸಲು ಸೂಚಿಸಿದರು. ಸರಕಾರ ಸಾರ್ವಜನಿಕರಿಂದ ಬಂದ ಕರದ ಹಣವನ್ನು ಮೂಲಭೂತ ಸೌಲಭ್ಯಗಳಿಗಾಗಿ ಖರ್ಚು ಮಾಡಲಾಗುತ್ತಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸೌಲಭ್ಯ ಒದಗಿಸುವ ಕೆಲಸವಾಗಬೇಕು ಎಂದರು. ಜಿಲ್ಲೆಯ ಜನರಿಗೆ ಸಮರ್ಪಕ ನೀರು ಪೂರೈಕೆಯಾಗುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಬಾದಾಮಿ, ಕೆರೂರ ಹಾಗೂ ಗುಳೇದಗುಡ್ಡ ನಗರ ಹಾಗೂ 18 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಆಲಮಟ್ಟಿಯಿಂದ ನೀರು ತರಲು 220 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದ ಸಮಪರ್ಕವಾದ ನೀರು ಪೂರೈಕೆಯಾಗಲಿದೆ ಎಂದರು. ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮುಂದಿನ ಎರಡು ತಿಂಗಳು ಬಿಟ್ಟು ಪುನಃ ಜಿಲ್ಲೆಗೆ ಆಗಮಿಸಿ ಕಾಮಗಾರಿ ಪ್ರರಿಶೀಲಿಸಲಾಗುವುದೆಂದು ಸಚಿವರು ತಿಳಿಸಿದರು.

Advertisement

ಇದನ್ನೂ ಓದಿ: ಈ ಆಟಗಾರ ಐಪಿಎಲ್ ನಲ್ಲಿ ದ್ವಿಶತಕ ಬಾರಿಸಬಲ್ಲ: ಕೆಕೆಆರ್ ಆಟಗಾರನ ಕೊಂಡಾಡಿದ ಡೇವಿಡ್ ಹಸ್ಸಿ

ಮುಧೋಳ ಮತ್ತು ಮಹಾಲಿಂಗಪೂರ ನಗರಕ್ಕೆ ಘಟಪ್ರಭಾ ನದಿಯಿಂದ ಸಮರ್ಪಕವಾರಿ ನೀರು ಪೂರೈಸಲು ಸಾದ್ಯವಾಗದ ಕಾರಣ ಶಾಶ್ವತವಾಗಿ ನೀರು ಪೂರೈಸುವ ನಿಟ್ಟಿನಲ್ಲಿ ಕೃಷ್ಣಾ ನದಿಯಿಂದ ನೀರು ತರಲು ಅಂದಾಜು 80 ಕೋಟಿ ರೂ.ಗಳ ವೆಚ್ಚವಾಗಲಿದ್ದು, ಅನುದಾನ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು. ಕಮತಗಿ ಮತ್ತು ಅಮೀನಗಡ ಪಟ್ಟಣಕ್ಕೆ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಡಿಪಿಆರ್ ತಯಾರಿಸಿ ಕಳುಹಿಸಲು ತಿಳಿಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ವೀರಣ್ಣ ಚರಂತಿಮಠ, ಸಿದ್ದು ಸವದಿ ಅವರು ವಿವಿಧ ಬೇಡಿಕೆಗಳನ್ನು ಸಚಿವರ ಮುಂದೆ ಪ್ರಸ್ತಾಪಿಸಿದರು.

ಜಿಲ್ಲಾ ನಗರಾಭಿವೃದ್ದಿ ಕೋಶದ ಕಾರ್ಯಪಾಲಕ ಅಭಿಯಂತರ ಎಸ್.ಸಿ.ಓಣಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಂಡ ಕಾಮಗಾರಿಗಳ ಪ್ರಗತಿ ವರದಿಯನ್ನು ವಿವರವಾಗಿ ಸಭೆಯ ಮುಂದಿಟ್ಟರು. ಸಭೆಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಕಾರ್ಯನಿರ್ವಾಹಕ ಅಭಿಯಂತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next