Advertisement

ಜೆಡಿಎಸ್‌,ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು

02:05 AM Jul 17, 2017 | Harsha Rao |

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 9.30ಕ್ಕೆ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ
ಕರೆಯಲಾಗಿದ್ದು, ಈ ಸಭೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್‌ ಅವರನ್ನು ಬೆಂಬಲಿಸುವ ಬಗ್ಗೆ ಅಧಿಕೃತ ನಿರ್ಣಯ ಕೈಗೊಳ್ಳಲಾಗುತ್ತದೆ.

Advertisement

ಈಗಾಗಲೇ ಮೀರಾ ಕುಮಾರ್‌ ಅವರಿಗೆ ಜೆಡಿಎಸ್‌ ಬೆಂಬಲ ಘೋಷಿಸಿದೆ. ಅದರಂತೆ ಬೆಳಗ್ಗೆ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಕುರಿತು ಅಧಿಕೃತ ನಿರ್ಣಯ ಕೈಗೊಳ್ಳಲಾಗುತ್ತದೆ. ಬಳಿಕ ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಮೀರಾ ಕುಮಾರ್‌ ಅವರಿಗೆ ಮತ ಹಾಕುವಂತೆ ಶಾಸಕರಿಗೆ ಸೂಚನೆ ನೀಡಲಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಸೋಮವಾರ ಬೆಳಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯೂ ನಡೆಯಲಿದ್ದು,
ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆ ಕುರಿತಂತೆ ಸಮಾಲೋಚನೆ ನಡೆಸಲಾಗುವುದು. ಬಳಿಕ ಎಲ್ಲಾ ಶಾಸಕರು ಒಟ್ಟಾಗಿ ಮತದಾನ ಕೇಂದ್ರಕ್ಕೆ ತೆರಳಿ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ರಾಮ್‌ನಾಥ್‌ ಕೋವಿಂದ್‌ ಪರ ಮತ ಹಾಕಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಚಲುವರಾಯಸ್ವಾಮಿ ಗೈರು: ಜೆಡಿಎಸ್‌ನಿಂದ ಅಮಾನತುಗೊಂಡ ಶಾಸಕ ಎನ್‌.ಚಲುವರಾಯಸ್ವಾಮಿ ಮತದಾನದಿಂದ ದೂರ ಉಳಿಯಲಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿರುವ ಅವರು ಸೋಮವಾರ ವಾಪಸ್ಸಾಗುವ ಸಾಧ್ಯತೆ ಇಲ್ಲ. ಹೀಗಾಗಿ ಅವರು ಮತದಾನದಲ್ಲಿ ಪಾಲ್ಗೊಳ್ಳುವುದಿಲ್ಲ ಎನ್ನಲಾಗಿದೆ. ಉಳಿದಂತೆ ಅಮಾನತುಗೊಂಡ ಇತರ ಆರು ಶಾಸಕರು ಮೀರಾಕುಮಾರ್‌ ಪರ ಮತ ಹಾಕಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next