Advertisement

ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ

10:03 AM Feb 18, 2020 | Lakshmi GovindaRaj |

ಬೆಂಗಳೂರು: ಹೊಸ ವರ್ಷದ ಮೊದಲ ವಿಧಾನಮಂಡಲದ ಜಂಟಿ ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣ ಮುಗಿದ ನಂತರ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಡೆಯಲಿದೆ.

Advertisement

ವಿಧಾನಸಭೆಯಲ್ಲಿ ಸರಳ ಬಹುಮತ ಪಡೆದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶವನ್ನು ಆತ್ಮವಿಶ್ವಾಸದಿಂದ ಎದುರಿಸಲು ಆಡಳಿತಾರೂಢ ಬಿಜೆಪಿ ಸಜ್ಜಾಗಿದ್ದರೆ, ಪ್ರತಿಪಕ್ಷಗಳಾದ ಕಾಂಗ್ರೆಸ್‌, ಜೆಡಿಎಸ್‌ ಕಾರ್ಯತಂತ್ರ ಹೆಣೆದು ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಅಣಿಯಾಗಿವೆ. ಕಾಂಗ್ರೆಸ್‌, ಜೆಡಿಎಸ್‌ ಸೋಮವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ವಿಧಾನಮಂಡಲ ಅಧಿವೇಶನ ಎದುರಿಸುವ ವಿಧಾನದ ಬಗ್ಗೆ ಚರ್ಚೆ ನಡೆಸಲಿವೆ.

ನೂತನ ಸಚಿವರಿಗೆ ಬೆಂಬಲವಾಗಿರಲು ಹಿರಿಯ ಸಚಿವರಿಗೆ ಸೂಚನೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು, ಕೊಡುಗೆಗಳನ್ನು ಉಲ್ಲೇಖೀಸುವುದರ ಜತೆಗೆ ಇತ್ತೀಚಿನ ಕೆಲ ಬೆಳವಣಿಗೆ ಬಗ್ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದರೆ, ಅದನ್ನು ಸಮರ್ಥವಾಗಿ ಎದುರಿಸಿ ಪ್ರತ್ಯುತ್ತರ ನೀಡಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ನೂತನ ಸಚಿವರು ಚರ್ಚೆಯಲ್ಲಿ ಪಾಲ್ಗೊಂಡಾಗ ಹಿರಿಯ ಸಚಿವರು ಅವರಿಗೆ ಬೆಂಬಲವಾಗಿರಬೇಕು. ಯಾವುದೇ ರೀತಿಯ ಗೊಂದಲ ಇಲ್ಲವೇ ವ್ಯತ್ಯಯ ಕಂಡು ಬಂದರೆ ಹಿರಿಯ ಸಚಿವರು ನೆರವಿಗೆ ಧಾವಿಸಿ, ಸಮರ್ಥನೆಗೆ ನಿಲ್ಲಬೇಕು ಎಂದು ಹಿರಿಯ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರ ಭಾಷಣಕ್ಕೂ ಪ್ರತಿರೋಧ?: ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸಿಎಎ, ಎನ್‌ಆರ್‌ಸಿ ಇತರ ವಿವಾದಾತ್ಮಕ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರೆ ಅದಕ್ಕೆ ಪ್ರತಿರೋಧ ತೋರಲು ಕಾಂಗ್ರೆಸ್‌ ನಾಯಕರು ಸಜ್ಜಾಗಿದ್ದಾರೆ. ಒಂದೊಮ್ಮೆ, ರಾಜ್ಯಪಾಲರು ಯಾವುದೇ ವಿವಾದಾತ್ಮಕ ಅಂಶಗಳನ್ನು ಉಲ್ಲೇಖೀಸದಿದ್ದರೆ ಭಾಷಣಕ್ಕೆ ಯಾವುದೇ ರೀತಿಯಲ್ಲಿ ಅಡ್ಡಿಪಡಿಸದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಕಲಾಪ ಸಂದರ್ಭದಲ್ಲಿ ಸಿಎಎ ವಿರುದ್ಧದ ಹೋರಾಟ ಹತ್ತಿಕ್ಕುವ ಪ್ರಯತ್ನ, ಮಂಗಳೂರಿನ ಗೋಲಿಬಾರ್‌ ಪ್ರಕರಣ, ಬೀದರ್‌ನ ಶಾಹೀನ್‌ ಶಾಲೆ ಪ್ರಕರಣ, ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನ ವಿದ್ಯಾರ್ಥಿಗಳು ಪಾಕ್‌ ಪರ ಘೋಷಣೆ ಕೂಗಿದ ಪ್ರಕರಣ, ನೆರೆ ಪರಿಹಾರ ವಿತರಣೆಯಲ್ಲಿ ವ್ಯತ್ಯಯ, ಅರಣ್ಯ ನಿಯಮ ಉಲ್ಲಂಘನೆ ಆರೋಪ ಹೊತ್ತ ಆನಂದ್‌ ಸಿಂಗ್‌ ಅವರಿಗೆ ಅರಣ್ಯ ಖಾತೆ ನೀಡಿರುವುದು, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ಕಾಂಗ್ರೆಸ್‌, ಜೆಡಿಎಸ್‌ ಸಜ್ಜಾಗಿವೆ. ಒಟ್ಟಾರೆ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಮುಖಾಮುಖೀ ಚರ್ಚೆಗೆ ವಿಧಾನಮಂಡಲ ಸಜ್ಜಾಗಿದ್ದು, ಕುತೂಹಲ ಮೂಡಿದೆ.

Advertisement

ಸಿದ್ದು ಅವರದ್ದೇ ನೇತೃತ್ವ: ಪ್ರಸಕ್ತ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರೇ ಪ್ರತಿಪಕ್ಷ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿರಲಿದ್ದಾರೆ. ಅಧಿವೇಶನಕ್ಕೆ ಮುಂಚೆ ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿಬಂದಿದ್ದ ವಾದರೂ ಇದುವರೆಗೂ ಆ ಕುರಿತು ಹೈಕಮಾಂಡ್‌ನಿಂದ ಯಾವುದೇ ಸೂಚನೆ ಸಿಕ್ಕಿಲ್ಲ. ಹೀಗಾಗಿ, ಯಥಾಸ್ಥಿತಿ ಮುಂದುವರಿಯಬಹುದು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ವಿಧಾನಸಭೆಯಲ್ಲಿ ಮಂಡನೆಗೆ ಬಾಕಿಯಿರುವ ವಿಧೇಯಕಗಳು
-ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ, 2020

-ಕರ್ನಾಟಕ ನಾವೀನ್ಯತಾ ಪ್ರಾಧಿಕಾರ ವಿಧೇಯಕ, 2020

-ಭಾರತ ರಾಷ್ಟ್ರೀಯ ಕಾನೂನು ವಿದ್ಯಾಲಯ (ತಿದ್ದುಪಡಿ) ವಿಧೇಯಕ, 2020

-ಕರ್ನಾಟಕ ರಾಜಭಾಷಾ (ತಿದ್ದುಪಡಿ) ವಿಧೇಯಕ, 2020

-ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2020

-ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ, 2020, ಪರ್ಯಾಲೋಚನೆ, ಅಂಗೀಕಾರಕ್ಕೆ ಬಾಕಿ ಇರುವ ವಿಧೇಯಕ

-ಕರ್ನಾಟಕ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕ, 2018.

Advertisement

Udayavani is now on Telegram. Click here to join our channel and stay updated with the latest news.

Next