Advertisement

ಮಕ್ಕಳ ಅನೈತಿಕ ಸಾಗಾಟ ತಡೆಗೆ ನಿಗಾ ವಹಿಸಿ

04:04 PM Dec 25, 2019 | |

ಕಲಬುರಗಿ: ಸಾಮಾಜಿಕ ಆರೋಗ್ಯ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತಿರುವ ಮಕ್ಕಳ ಅನೈತಿಕ ಸಾಗಾಟ ಮತ್ತು ಮಾರಾಟ ಮಾಡುವುದನ್ನು ತಡೆಗಟ್ಟಲು ಅಧಿಕಾರಿಗಳು ತೀವ್ರ ನಿಗಾವಹಿಸುವುದರ ಜತೆಗೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವೆ ಶಶಿಕಲಾ ಅ.ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ಅನೈತಿಕ ಸಾಗಾಟ ತಡೆಗೆ ಯಾವೆಲ್ಲ ಕ್ರಮ ಕೈಗೊಂಡಿದ್ದಿರಿ ಎಂದು ಸಚಿವರು ಕೇಳಿದರಲ್ಲದೇ, ಅಧಿಕಾರಿಗಳು ಇಲಾಖೆಯ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಕೆಲಸದಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿದರೆ ಶಿಸ್ತು ಕ್ರಮ ಅನಿವಾರ್ಯ. ಈಗಾಗಲೇ ನಾಲ್ಕೈದು ಅಧಿಕಾರಿಗಳನ್ನು ಅಮಾನತು ಮಾಡಿರುವುದು ನಿಮಗೂ ಗೊತ್ತಿರಬಹುದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಇದಕ್ಕೆ ಉತ್ತರ ನೀಡಿದ ಅಧಿಕಾರಿಗಳು, ಸ್ತ್ರೀ ಶಕ್ತಿ ಸಂಘ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಗ್ರಹ ಆಧಾರಿತ ತರಬೇತಿ ನೀಡಲಾಗುತ್ತಿದೆ ಎಂದರು. ಜಿಲ್ಲೆಯ ವಿಶೇಷವಾಗಿ ಚಿಂಚೋಳಿ, ಯಾದಗಿರಿ ಜಿಲ್ಲೆಗಳಿಂದ ಬಡತನದಿಂದ ಮಹಿಳೆಯರು ಬೇರೆಡೆ ಗುಳೆ ಹೋಗುತ್ತಿದ್ದು, ಇದನ್ನು ತಡೆಯಲು ಮುಂದಾಗಬೇಕು. ಈ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಮೂಲಕ ವಲಸೆ ಹೋಗುವುದನ್ನು ತಡೆಯಬೇಕು ಎಂದು ಸೂಚಿಸಿದರು.

ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಯಾವುದೇ ನೆಪ ಹೇಳಬಾರದು. ಸಿಬ್ಬಂದಿ ಕೊರತೆ ಬಹುತೇಕ ಇಲಾಖೆಗಳಲ್ಲಿದೆ. ಆದರೆ, ಅದೇ ದೊಡ್ಡ ಸಮಸ್ಯೆ ಆಗಬಾರದು. ಇಲಾಖೆಯಿಂದ ಬಿಡುಗಡೆ ಮಾಡಿದ ಹಣವನ್ನು ಫಲಾನುಭವಿಗಳಿಗೆ ತಲುಪಿಸಬೇಕು. ಇಲಾಖೆ ಯೋಜನೆಗಳ ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಶಾಸಕರ ಗಮನಕ್ಕೆ ತರಬೇಕು. ಅವರ ಅಭಿಪ್ರಾಯ ಪಡೆಯಬೇಕು ಎಂದು ತಾಕೀತು ಮಾಡಿದರು.

Advertisement

ಜಿಲ್ಲೆಯಲ್ಲಿರುವ ನಿರ್ಗತಿಕ ಮಕ್ಕಳ ಕುಟೀರಕ್ಕೆ ಇಲಾಖೆ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡುತ್ತಿರಬೇಕು. ಎಲ್ಲಿ ಮಕ್ಕಳು ಇರುವುದಿಲ್ಲವೋ ಅಂತಹ ಸಂಸ್ಥೆಗಳ ಬಗ್ಗೆ ವರದಿ ಸಲ್ಲಿಸಬೇಕು. ಅವುಗಳಿಗೆ ಅನುದಾನ ಸ್ಥಗಿತಗೊಳಿಸಲಾಗುವುದು. ಕೆಲವು ಸಂಸ್ಥೆಗಳು ಅಧಿ ಕಾರಿಗಳ ಭೇಟಿಯ ಸಂದರ್ಭಗಳಲ್ಲಿ ಮಾತ್ರ ಎಲ್ಲೆಲ್ಲಿಂದಲೋ ಮಕ್ಕಳನ್ನು ಕರೆತರುತ್ತಾರೆ. ಇಂತಹ ಹಾದಿ ತಪ್ಪಿಸುವ ಹಾಗೂ ಅನುದಾನ ದುರ್ಬಳಕೆ ಮಾಡಿಕೊಳ್ಳುವ ಸಂಸ್ಥೆಗಳ ಬಗ್ಗೆ ನಿಗಾ ವಹಿಸಬೇಕು. ನಿಜವಾಗಿಯೂ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡ ಸಂಸ್ಥೆಗಳು ಇವೆ. ಎಲ್ಲವನ್ನೂ ಒಂದೇ ರೀತಿ ಎಂದು ಪರಿಗಣಿಸಬಾರದು ಎಂದು ಹೇಳಿದರು.

ಕಲಬುರಗಿಯ ಲಾಲಗೇರಿಯಲ್ಲಿರುವ ಮೆಹಬೂಬ್‌ ಸುಭಾನಿ ನಿರ್ಗತಿಕ ಮಕ್ಕಳ ಕುಟೀರಕ್ಕೆ ಭೇಟಿ ನೀಡಿದಾಗ ಅಲ್ಲಿ ಯಾವ ಮಕ್ಕಳೂ ಇರಲಿಲ್ಲ. ಈ ಬಗ್ಗೆ ಸಂಸ್ಥೆಗೆ ನೋಟಿಸ್‌ ಕೊಟ್ಟಿದ್ದೇನೆ ಎಂದು ಶಹರ ವಲಯದ ಸಿಡಿಪಿಒ ಸಚಿವರ ಗಮನಕ್ಕೆ ತಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ರಾಜಾ ಪಿ. ಮಾತನಾಡಿ, ವಿವಿಧ ಮಕ್ಕಳ ಕುಟೀರಗಳು, ಸಾಂತ್ವನ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೇನೆ. ಅಗತ್ಯ ಸೂಚನೆಯನ್ನು ಅಧಿಕಾರಿಗಳಿಗೆ ನೀಡುತ್ತಿದ್ದೇನೆ ಎಂದು ತಿಳಿಸಿದರು. ಅಮಾನತು ಎಚ್ಚರಿಕೆ: ಆಳಂದ ಶಾಸಕ ಸುಭಾಷ ಗುತ್ತೇದಾರ ಹಾಗೂ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಹೇಳಿದರೂ ಸಕಾಲಕ್ಕೆ ವಿವಿಧ ಗ್ರಾಮಗಳಿಗೆ ಪಡಿತರ ವಿತರಿಸಲು ಕ್ರಮ ಕೈಗೊಳ್ಳಲು ವಿಫಲವಾದ ಆಹಾರ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ ಅವರನ್ನು ಅಮಾನತು ಮಾಡುವುದಾಗಿ ಸಚಿವೆ ಶಶಿಕಲಾ ಜೊಲ್ಲೆ ಸಭೆಯಲ್ಲಿ ಎಚ್ಚರಿಕೆ ನೀಡಿದರು.

ಅಲ್ಲದೇ ಶಾಸಕರು ಹೇಳಿದರೂ ಕೆಲಸ ಮಾಡುವುದಿಲ್ಲ ಎಂದರೆ ಏನು ಮಾಡೋದು? ಕೂಡಲೇ ಶಾಸಕರ ದೂರನ್ನು ಗಂಭೀರವಾಗಿ ಪರಿಗಣಿಸಿ ಸಕಾಲಕ್ಕೆ ಪಡಿತರ ವಿತರಣೆ ಆಗುವಂತೆ ನೋಡಿಕೊಳ್ಳಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲೆಯ ಪ್ರಗತಿ ಪರಿಶೀಲನೆ ಮಾಡುತ್ತೇನೆ. ಆಗಲೂ ಸಮಸ್ಯೆ ಬಗೆಹರಿಯದಿದ್ದರೆ ಶಿಸ್ತು ಕ್ರಮ ಖಚಿತ ಎಂದು ಎಚ್ಚರಿಸಿದರು. ವಿಧಾನಪರಿಷತ್‌ ಸದಸ್ಯ ಬಿ.ಜಿ. ಪಾಟೀಲ, ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಸುವರ್ಣಾ ಮಲಾಜಿ ಹಾಗೂ ಇತರರು ವೇದಿಕೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next