Advertisement

ಕನ್ನಡ ಸಾಹಿತ್ಯಕ್ಕೆ ಸೀಮಿತ ಚೌಕಟ್ಟು ಸಲ್ಲ

02:00 PM May 21, 2019 | pallavi |

ಬೆಂಗಳೂರು: ಕನ್ನಡ ಸಾಹಿತ್ಯವನ್ನು ಸೀಮಿತ ಚರಿತ್ರೆಯ ಚೌಕಟ್ಟಿನೊಳಗಿಟ್ಟು ನೋಡುವುದು ಸರಿಯಲ್ಲ ಎಂದು ಹಿರಿಯ ವಿಮರ್ಶಕ ಡಾ.ಕೆ.ವೈ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

Advertisement

ಕನ್ನಡ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಸೋಮವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕನ್ನಡ ಸಾಹಿತ್ಯ: ಅನನ್ಯ ಪರಂಪರೆ’ ವಿಷಯದ ಕುರಿತು ಮಾತನಾಡಿದ ಅವರು, ಕನ್ನಡ ಸಾಹಿತ್ಯದ ಪರಂಪರೆ ಅಗಣಿತವಾಗಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯದಲ್ಲಿ ಸಂವಿಧಾನದಲ್ಲಿ ಹೇಳಲಾಗಿರುವ ಮೂಲಾಂಶಗಳನ್ನು ನೋಡಬಹುದಾಗಿದೆ. ವಚನ ಸಾಹಿತ್ಯದಲ್ಲಿ ಸಂವಿಧಾನದಲ್ಲಿ ಹೇಳಲಾಗಿರುವ ಮೂಲಭೂತ ಹಕ್ಕುಗಳ ಬಗೆಗಿನ ತಿಳಿವಳಿಕೆ ಇದೆ. ಹೀಗಾಗಿ, ಕನ್ನಡ ಸಾಹಿತ್ಯ ವಿಭಿನ್ನ ರೀತಿಯ ಸಾಹಿತ್ಯ ಎಂದು ಕರೆಯಿಸಿಕೊಳ್ಳುತ್ತದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯಕ್ಕೆ ಜಾತಿಯ ಪರಂಪರೆ ಇಲ್ಲ. ಆರಂಭದಿಂದಲೂ ಇದು ಜಾತಿ ವ್ಯವಸ್ಥೆಯನ್ನು ನಿರಾಕರಿಸುತ್ತಾ ಬಂದಿದೆ. ವಚನ ಸಾಹಿತ್ಯದಲ್ಲಿ ಕಾಣಿಸಿಕೊಂಡಿರುವ ಶೇ.90 ರಷ್ಟು ಮಂದಿ ಕೆಳ ಜಾತಿಯಿಂದ ಬಂದವರಾಗಿದ್ದು, ವಚನಗಳ ಮೂಲಕ ಸಾಮಾಜಿಕ ಕ್ರಾಂತಿಗೆ ಕಾರಣರಾಗಿದ್ದಾರೆ ಎಂದು ಹೇಳಿದರು.ಕಡಲ ತೀರದ ಭಾರ್ಗವ ಡಾ.ಶಿವರಾಮ ಕಾರಂತರ ‘ಬದುಕು-ಬರಹ’ದ ಬಗ್ಗೆ ಮಾತನಾಡಿದ ಹಿರಿಯ ಸಾಹಿತಿ ಡಾ.ಎಚ್.ದಂಡಪ್ಪ, ಕಾರಂತರು ನಡೆದಾಡುವ ವಿಶ್ವಕೋಶ ಎಂದು ಸ್ಮರಿಸಿದರು. ಇದ್ದ ಪರಂಪರೆಯ ನೆಲೆಯಲ್ಲೇ ಹೊಸ ರೀತಿಯ ಸಾಹಿತ್ಯ ಕಟ್ಟಿದ ಕೀರ್ತಿ, ಶಿವರಾಮ ಕಾರಂತರಿಗೆ ಸಲ್ಲುತ್ತದೆ. ಕುವೆಂಪು ಮತ್ತು ಕಾರಂತರ ಸಾಹಿತ್ಯದ ಚಿಂತನೆಯಲ್ಲಿ ಅಲ್ಪಮಟ್ಟಿನ ಸಾಮ್ಯತೆ ಇದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಪರಿಷತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅನುಪಮ ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next