Advertisement

ಕಾಂತಾರ ಮತ್ತು ಧರ್ಮ : ಚೇತನ್ ಗೆ ನಟ ಕಿಶೋರ್ ತಿರುಗೇಟು

04:12 PM Oct 25, 2022 | Team Udayavani |

ಬೆಂಗಳೂರು : ಕಾಂತಾರ ಚಿತ್ರದ ಅದ್ಭುತ ಯಶಸ್ಸಿನ ಬಳಿಕ ನಟ ಚೇತನ್ ಅಹಿಂಸಾ ‘ಭೂತಾರಾಧನೆ ಹಿಂದೂ ಧರ್ಮದ ಸಂಸ್ಕೃತಿ ಅಲ್ಲ” ಎಂದು ಹೇಳಿಕೆ ನೀಡಿರುವುದಕ್ಕೆ ಚಿತ್ರದ ಮುಖ್ಯ ಪಾತ್ರಧಾರಿ ಕಿಶೋರ್ ಕುಮಾರ್ ಅವರು ಸಾಮಾಜಿಕ ತಾಣದಲ್ಲಿ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.

Advertisement

ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಕಿಶೋರ್ ” ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಲಿ ಕಳಕಳಿಯ ಮನವಿ . ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ?? ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿಹೋದೀತು” ಎಂದು ಬರೆದಿದ್ದಾರೆ.

”ಕೇವಲ ಓಟಿಗಾಗಿ ಪಟೇಲ್ ಗಾಂಧಿ ಬೋಸ್ ನೆಹರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ.. ರಾಷ್ಟ್ರ ಗೀತೆ, ಧ್ವಜ,ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ”ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next