Advertisement

Karnataka Budget 2023-24: ಐದು ಗ್ಯಾರಂಟಿ ಯೋಜನೆಗಳು ಬಿಟ್ಟಿ ಕೊಡುಗೆಗಳಲ್ಲ…

03:24 PM Jul 07, 2023 | Team Udayavani |

ನಾವು ಗ್ಯಾರಂಟಿ ಯೋಜನೆಗಳನ್ನು ಯಾಕೆ ಘೋಷಿಸಿದ್ದೇವೆ? ಹಾಗೂ ಯಾಕೆ ಜಾರಿಗೊಳಿಸುತ್ತಿದ್ದೇವೆ? ಅವು ಬಿಟ್ಟಿ ಕೊಡುಗೆಗಳಲ್ಲ. ಈ ಸಂದರ್ಭದಲ್ಲಿ ಬಾಬಾಸಾಹೇಬ್ ಡಾ. ಬಿ. ಆರ್.‌ ಅಂಬೇಡ್ಕರ್‌ ಅವರ ಚಿಂತನೆಯನ್ನು ಸ್ಮರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ (ಜು.07) ಮಂಡಿಸಿರುವ 14ನೇ ಬಜೆಟ್‌ ನಲ್ಲಿ ತಿಳಿಸಿದ್ದಾರೆ.

Advertisement

ʻಭದ್ರತೆಯ ಖಾತರಿ ಕೊಡದ ಆರ್ಥಿಕ ಯೋಜನೆಯಿಂದ ಯಾವ ಉಪಯೋಗವೂ ಇಲ್ಲ. ಯೋಜನೆ ಒಪ್ಪಿತವಾಗಬೇಕಾದರೆ, ಅದು ಮಿತವ್ಯಯದ್ದು ಮತ್ತು ಸುಭದ್ರವು ಆಗಿರಬೇಕು. ಅದು ಮಿತವ್ಯಯದ್ದು ಆಗಿರದಿದ್ದರೆ, ಬಹುಶ: ನಡೆದೀತು. ಆದರೆ, ಸುಭದ್ರವಾಗಿಲ್ಲದಿದ್ದರೆ, ಖಂಡಿತ ನಡೆಯುವುದಿಲ್ಲʼ.

ಮುಕ್ತ ಮಾರುಕಟ್ಟೆಯ ಈ ಯುಗದಲ್ಲಿ ಬಂಡವಾಳ ಹೂಡಿಕೆಯನ್ನು ವ್ಯಾಪಕವಾಗಿ ಆಕರ್ಷಿಸುವುದು, ಉದ್ಯೋಗಸಹಿತ ಬೆಳವಣಿಗೆಯನ್ನು ಸಾಕಾರಗೊಳಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದದ್ದು ಸಂಪತ್ತಿನ ವ್ಯಾಪಕ ಅಸಮಾನ ಹಂಚಿಕೆಯು ಸೃಷ್ಟಿಸುವ ಬೃಹತ್ ಕಂದರವು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಂತೆ ನೋಡಿಕೊಳ್ಳುವುದಾಗಿದೆ. ಅಭಿವೃದ್ಧಿಯ ಫಲವನ್ನು ಬಡವರು, ಶೋಷಿತರು ಹಾಗೂ ದುರ್ಬಲ ವರ್ಗದವರಿಗೆ ಹಂಚುವ ನಮ್ಮ ಪ್ರಯತ್ನವಾಗಿದೆ. ಅಭಿವೃದ್ಧಿಯ ಸಾಹಿತ್ಯದಲ್ಲಿ ಆರ್ಥಿಕ ಪ್ರಗತಿಯ ಫಲಗಳು ಬಡವರಿಗೆ ಸಹಜವಾಗಿ ಹರಿದುಬರುತ್ತದೆ (trickle down
theory) ಎಂಬ ನಂಬಿಕೆ ಹುಸಿಯಾದ ಸಂದರ್ಭದಲ್ಲಿ ಬಡವರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಬೇಷರತ್ತಾಗಿ ನಗದು ವರ್ಗಾವಣೆ ಮಾಡುವುದು ಮಹಿಳಾ ಸಬಲೀಕರಣ ಹಾಗೂ ಅವರ ಖರೀದಿಸುವ ಸಾಮರ್ಥ್ಯ ಹೆಚ್ಚಿಸುವ ಪರಿಣಾಮಕಾರಿ ಮಾರ್ಗವೆಂಬುದು ಸಾಬೀತಾಗಿದೆ.

ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳು ಕೇಂದ್ರ ಸರ್ಕಾರದ ವೈಫಲ್ಯದಿಂದ ಅನಿಯಂತ್ರಿತ ಬೆಲೆ ಏರಿಕೆಯಿಂದ ತತ್ತರಿಸುವ ಕುಟುಂಬಗಳಿಗೆ ತುಸು ನಿರಾಳತೆ ತಂದುಕೊಡುತ್ತವೆ. ಮಹಿಳೆಯರ ಓಡಾಟಕ್ಕೆ ಬೆಂಬಲ ನೀಡುವ ಶಕ್ತಿ ಯೋಜನೆಯು ಅವರಿಗೆ ಹಣ ಉಳಿತಾಯ ಮಾಡುವುದರೊಂದಿಗೆ ಮನೆಯಿಂದ ದೂರದ ಸ್ಥಳಗಳಲ್ಲಿಯೂ ಉದ್ಯೋಗ ಕಂಡುಕೊಳ್ಳಲು ನೆರವಾಗುತ್ತದೆ. ಅನ್ನಭಾಗ್ಯವು ಯಾರೂ ಹಸಿದುಕೊಂಡಿರಬಾರದೆಂಬುದನ್ನು ಖಾತರಿ ಪಡಿಸಿದರೆ, ಯುವನಿಧಿ, ಉದ್ಯೋಗಾಕಾಂಕ್ಷಿ ಯುವ ಜನರಿಗೆ ಮಾನಸಿಕ ಸ್ಥೈರ್ಯ ನೀಡುತ್ತದೆ.

ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವುದರಿಂದ ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ.

Advertisement

ಬಡವರ ಕೈಗೆ ಹೆಚ್ಚಿನ ಹಣ ನೀಡುವುದರ ಹಿಂದಿರುವ ಪ್ರಬಲ ಆರ್ಥಿಕ ತರ್ಕವನ್ನು ಸದನದ ಗೌರವಾನ್ವಿತ ಸದಸ್ಯರು ಗಮನಿಸಬಹುದಾಗಿದೆ. ಜಿ.ಎಸ್‌.ಟಿ. ಯ ಬಹುಪಾಲು ಮೊತ್ತವು ಸಮಾಜದ ತಳಹಂತದ ಶೇ.60 ರಷ್ಟು ಜನರಿಂದ ಸಂಗ್ರಹವಾಗುತ್ತಿದ್ದರೂ ಆರ್ಥಿಕ ವ್ಯವಸ್ಥೆಯ ಹೆಚ್ಚಿನ ಲಾಭವು ಸಮಾಜದ ಮೇಲ್ಮಟ್ಟದ ಶೇ.10 ರಷ್ಟು ಜನರಿಗೆ ತಲುಪುತ್ತಿದೆ. ಆದ್ದರಿಂದ ಬಡವರಿಗೆ ಸಂಪತ್ತನ್ನು ಮರುಹಂಚಿಕೆ ಮಾಡುವ ನೀತಿಗಳನ್ನು ಜನಪರ ಸರ್ಕಾರಗಳು ಅನುಸರಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಈ ಕೆಲಸವನ್ನು ಮಾಡುತ್ತವೆ.

ʻನಡೆಯ ಚೆನ್ನ ನುಡಿದು ತೋರಿ, ನುಡಿಯ ಚೆನ್ನ ನಡೆದು ತೋರಿʼ ಎಂಬ ಬಸವಣ್ಣನವರ ವಚನದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಚಾಲನೆ ನೀಡುವ ಮೂಲಕ ನುಡಿದಂತೆ ನಡೆಯುವ ನಮ್ಮ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದೇವೆ.

ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯದ ಜನತೆ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದೆ. ಕೋವಿಡ್‌ 19 ರಿಂದಾಗಿ ಹಾಗೂ ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಸಂವೇದನಾರಹಿತ ಕಾರ್ಯನಿರ್ವಹಣೆಯ ಪರಿಣಾಮ, ಒಪ್ಪತ್ತಿನ ಊಟಕ್ಕೂ ಸಂಚಕಾರ ಒದಗಿದ್ದು ಸುಳ್ಳಲ್ಲ. ದುಡಿಯುವ ಕೈಗಳಿಗೆ ಕೆಲಸ ತಪ್ಪಿದ್ದೂ ನೋಡಿದ್ದೇವೆ. ಉದ್ಯಮಗಳು ಮುಚ್ಚಿದ್ದರಿಂದ ಸಾವಿರಾರು ಕಾರ್ಮಿಕರು ನೌಕರಿ ಕಳೆದುಕೊಂಡು ಬೀದಿ ಪಾಲಾಗಬೇಕಾಯಿತು. ತಮ್ಮ ಅರ್ಹತೆಗಿಂತ ಕಡಿಮೆ ಮಟ್ಟದ ನೌಕರಿ ನೆಚ್ಚಿಕೊಂಡವರು ಅದೆಷ್ಟೋ? ಒಂದೆಡೆ ಸಾಂಕ್ರಾಮಿಕದ ಭೀತಿ; ಮತ್ತೊಂದೆಡೆ ಹೊಟ್ಟೆಪಾಡಿನ ಚಿಂತೆ. ಸಂಕಷ್ಟಗಳ ಸರಮಾಲೆಗೆ ಬೆಲೆ ಏರಿಕೆಯ ಸೇರ್ಪಡೆಯಿಂದ, ಬಡಜನರ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಸಾಮಾನ್ಯ ವರ್ಗದ ಜನರ ಬದುಕು ಮೂರಾಬಟ್ಟೆಯಾಗಿ ಸಂಕಟ ಅನುಭವಿಸಿದ್ದು ನಾವೆಲ್ಲರೂ ಕಂಡಿದ್ದೇವೆ.

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಸಂಪನ್ಮೂಲವನ್ನು ನಮ್ಮ ಸರ್ಕಾರವು ಜನರಿಗೆ ಹೆಚ್ಚಿನ ಹೊರೆಯಾಗದಂತೆ ಹೊಂದಿಸಲಿದೆ. ಈ ನಿಟ್ಟಿನಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟುವುದರ ಜೊತೆಗೆ ಸರ್ಕಾರದ ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಕ್ರಮ ವಹಿಸಲಾಗುವುದು. ವಿತ್ತೀಯ ಸಂಪನ್ಮೂಲಗಳು ಹಾಗೂ ಆಡಳಿತದ ದಕ್ಷ ನಿರ್ವಹಣೆ ಒಂದು ಕಲೆ ಮತ್ತು ವಿಜ್ಞಾನ; ಕೇವಲ ಸಾಮಾಜಿಕ ಜಾಲತಾಣಗಳ ಸಂದೇಶವಲ್ಲ ಎಂಬುದನ್ನು ಅರಿತರೆ ಒಳ್ಳೆಯದು. ಈ ಯೋಜನೆಗಳು ಅರ್ಹರಿಗೆ ನೇರವಾಗಿ ತಲುಪುವುದರಿಂದ ಹಾಗೂ ಬವಣೆಗಳ ಭಾರದಿಂದ ಏದುಸಿರು ಬಿಡುತ್ತಿರುವ ಬಡವರ ಬದುಕಿನಲ್ಲಿ ಪ್ರಾಣವಾಯುವಿನಂತೆ ಕೆಲಸ ಮಾಡುವುದೆಂಬ ಆಶಯದೊಂದಿಗೆ ಇವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next