Advertisement

DK Shivakumar ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು; ತುರ್ತು ಭೂ ಸ್ಪರ್ಶ

04:05 PM May 02, 2023 | Team Udayavani |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಮಧ್ಯಾಹ್ನ ಕೋಲಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಹೊಡೆದ ಪರಿಣಾಮ ತುರ್ತು ಭೂ ಸ್ಪರ್ಶ ಮಾಡಲಾಗಿದೆ.

Advertisement

ಹೆಲಿಕಾಪ್ಟರ್ ನಲ್ಲಿ ಇದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಪೈಲಟ್ ಜಾಗರೂಕತೆಯಿಂದ ಭಾರಿ ಅವಘಡ ತಪ್ಪಿದೆ.

ಶಿವಕುಮಾರ್ ಅವರು ಮುಳಬಾಗಿಲಿನಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮಕ್ಕೆ ಮಂಗಳವಾರ ಮಧ್ಯಾಹ್ನ 12.10 ಸುಮಾರಿಗೆ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಮಾಡಿದ್ದು, ಹೊಸಕೋಟೆ ಸಮೀಪ ಹದ್ದು ಹೊಡೆದ ಪರಿಣಾಮ ಹೆಲಿಕಾಪ್ಟರ್ ಗಾಜು ಒಡೆದಿದೆ. ಈ ಸಂದರ್ಭದಲ್ಲಿ ಪೈಲಟ್ ಸಮಯಪ್ರಜ್ಞೆ ಮೆರೆದಿದ್ದು, ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಭೂ ಸ್ಪರ್ಶ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್ ಅವರು ‘ನಾನು ನಂಬಿರುವ ಶಕ್ತಿ ಹಾಗೂ ದೇವರು ನನ್ನ ಜತೆಗಿದ್ದು, ನನ್ನನ್ನು ಕಾಪಾಡಿದ್ದಾರೆ. ನಮ್ಮ ಹೆಲಿಕಾಪ್ಟರ್ ಟೇಕಾಫ್ ಆಗಿ 7-8 ನಿಮಿಷ ಕಳೆದಿತ್ತು. ನಾವು ಹೊಸಕೋಟೆ ಹತ್ತಿರ ತಲುಪಿದಾಗ ದೊಡ್ಡ ಹದ್ದು ಬಂದು ಡಿಕ್ಕಿ ಹೊಡೆಯಿತು. ಮಾಧ್ಯಮದವರು ಪಕ್ಷದ ಪ್ರಣಾಳಿಕೆ ಕುರಿತು ಸಂದರ್ಶನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಸಂದರ್ಭದಲ್ಲಿ ಪೈಲಟ್ ಹೆಲಿಕಾಪ್ಟರ್ ಹಾರಾಟದ ಎತ್ತರವನ್ನು ಕಡಿಮೆ ಮಾಡಿ ನಮ್ಮನ್ನು ರಕ್ಷಿಸಿದ್ದಾರೆ. ಈಗ ಬೇರೆ ಹೆಲಿಕಾಪ್ಟರ್ ಸಿಗದ ಕಾರಣ, ರಸ್ತೆ ಮಾರ್ಗವಾಗಿ ಮುಳಬಾಗಿಲಿಗೆ ತೆರಳುತ್ತಿದ್ದೇವೆ. ಇದು ಆಕಸ್ಮಿಕವಾಗಿ ಆಗಿರುವ ಘಟನೆ, ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ಭೂಸ್ಪರ್ಶವಾಗಿದೆ. ಪ್ರಯಾಣದ ವೇಳೆ ಮೂರು ಹದ್ದುಗಳು ಎದುರಾಗಿದ್ದು, ಪೈಲಟ್ ಎರಡು ಹದ್ದುಗಳನ್ನು ದಾಟಿದ್ದರು. ಮೂರನೇ ಹದ್ದು ಕೆಳಗಡೆಯಿಂದ ಮೇಲೆ ಬಂದು ಡಿಕ್ಕಿ ಹೊಡೆಯಿತು. ಯಾರೂ ಇದರಿಂದ ಗಾಬರಿಯಾಗುವುದು ಬೇಡ, ಇದೊಂದು ಆಕಸ್ಮಿಕ, ಇದನ್ನು ಇಲ್ಲಿಗೆ ಬಿಟ್ಟು ಮುಂದೆ ಸಾಗೋಣ’ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next