Advertisement

ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಕೃಷ್ಣಾರೆಡ್ಡಿ ರಾಜೀನಾಮೆ

10:03 AM Mar 18, 2020 | sudhir |

ವಿಧಾನಸಭೆ: ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ಜೆ.ಕೆ. ಕೃಷ್ಣಾರೆಡ್ಡಿ ರಾಜೀನಾಮೆ ನೀಡಿದ್ದಾರೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಸದನಕ್ಕೆ ತಿಳಿಸಿದರು.

Advertisement

ವಿಧಾನಸಭೆಯಲ್ಲಿ ನಿಯಮ 169ರ ಮೇರೆಗೆ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಬಿಜೆಪಿ ಸಜ್ಜಾಗಿತ್ತು. ಆ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷರನ್ನು ಭೇಟಿಯಾದ ಕೃಷ್ಣಾರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹಿಂದಿನ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಕೃಷ್ಣಾರೆಡ್ಡಿ ಅವರನ್ನು ಉಪಸಭಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.

ಮಂಗಳವಾರ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿದ ವಿಧಾನಸಭಾಧ್ಯಕ್ಷರು, ಉಪ ಸಭಾಧ್ಯಕ್ಷ ಸ್ಥಾನಕ್ಕೆ ಕೃಷ್ಣಾರೆಡ್ಡಿ ಅವರು ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯಿಂದಾಗಿ ಅವಿಶ್ವಾಸ ನಿರ್ಣಯ ಮಂಡನೆ ಪ್ರಸ್ತಾಪವನ್ನು ಕೈಬಿಡಲಾಗಿದೆ ಎಂದು ಹೇಳಿದರು.

ಸದ್ಯದಲ್ಲೇ ಉಪ ಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಲಿದೆ. ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಅವರು ಉಪ ಸಭಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಈ ಸಂಬಂಧ ಕೆಲ ಶಾಸಕರೊಂದಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿಯಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next