Advertisement

Karnataka ಬರಗಾಲ ಘೋಷಣೆ; ಸೆ.4 ರಂದು ತೀರ್ಮಾನ: ಸಿಎಂ ಸಿದ್ದರಾಮಯ್ಯ

05:14 PM Sep 02, 2023 | Team Udayavani |

ಬಾಗಲಕೋಟೆ : ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಇಂದು ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

Advertisement

ಮಾಧ್ಯಮಗಳೊಂದಿಗೆ ಮಾತನಾಡಿ, ಆಲಮಟ್ಟಿಯ ಸಂಗ್ರಹಣೆ ಮಟ್ಟ 519.6 ಮೀಟರ್ ಅಡಿ ಇದೆ. ಅದರ ಒಟ್ಟು ಸಂಗ್ರಹಣೆ 123.08 ಟಿ.ಎಂಸಿ. ಒಂದು ಟಿಎಂಸಿ ನೀರು ಎಂದರೆ 11 ಸಾವಿರ ಕ್ಯೂಸೆಕ್ಸ್ ನೀರು. ಇಡೀ ಕರ್ನಾಟಕದ ಜಲಾಶಯಗಳಲ್ಲಿ ಕೃಷ್ಣಾ ಮೇಲ್ದಂಡೆ ಪೂರ್ಣ ಭರ್ತಿಯಾಗಿದೆ. ನಾರಾಯಣಪುರ ಜಲಾಶಯ ತುಂಬಿದೆ. ಭರ್ತಿಯಾಗಿರುವುದರಿಂದ ನಾಲೆಗಳಿಗೆ, ಕುಡಿಯುವ ನೀರು, ವಿದ್ಯುಚ್ಛಕ್ತಿ ಉತ್ಪಾದನೆಗೆ ನೀರು ಹರಿಸಲಾಗುತ್ತಿದೆ. ಕುಡಿಯುವ ನೀರು ಬಿಟ್ಟಿರುವುದರಿಂದ ಒಂದು ಟಿಎಂಸಿ ನೀರು ಕಡಿಮೆ ಇದೆ. ನಾರಾಯಣಪುರದಲ್ಲಿಯೂ ಕೂಡ 492 ಮೀ. ನೀರು ಇದೆ. 105.46 ಟಿಎಂಸಿ ನೀರು ಲೈವ್ ಸ್ಟೋರೇಜೆ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ 11 ಟಿಎಂಸಿ ನೀರಿನ ಸಂಗ್ರಹ ಕಡಿಮೆ ಇದೆ. ಕಳೆದ ವರ್ಷ ಒಳಹರಿವು ಹೆಚ್ಚಿತ್ತು.25450 ಕ್ಯೂಸೆಕ್ಸ್ ನೀರಿತ್ತು , ಆದರೆ ಈಗ 3730 ಕ್ಯೂಸೆಕ್ಸ್ ನೀರಿನ ಸಂಗ್ರಹ ಇದೆ ಎಂದರು.

ಬರಗಾಲ ಘೋಷಣೆ: ಸೆ.4 ರಂದು ತೀರ್ಮಾನ

ಒಟ್ಟಾರೆಯಾಗಿ ಈ ವರ್ಷ ಕೃಷ್ಣಾ ಮೇಲ್ದಂಡೆ ಪ್ರದೇಶದ ಅಚ್ಚುಕಟ್ಟಿನಲ್ಲಿ ಮಳೆ ಕಡಿಮೆಯಾಗಿದೆ. ಈ ವರ್ಷ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದೆ. ಶೇ. 56% ಕೊರತೆಯಾಗಿದೆ. ಆಗಸ್ಟ್ ನಲ್ಲಿಯೂ ಕೊರತೆ ಕಂಡು ಬಂದಿದ್ದು, ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಈಗಾಗಲೇ ಮೂರು ಸಭೆಗಳನ್ನು ನಡೆಸಿದೆ. ಪುನ: ಸೆ.04 ರಂದು ಮತ್ತೊಂದು ಸಭೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿ ಬರಗಾಲ ಇದೆ ಎಂದು ಜಂಟಿ ಸಮೀಕ್ಷೆ ನಡೆಸಿದ್ದಾರೆ. ಇದಲ್ಲದೆ 73 ತಾಲ್ಲೂಕುಗಳಲ್ಲಿ ಬರಗಾಲ ಉಂಟಾಗಿದೆ ಎಂದು ಹೇಳಿದ್ದಾರೆ. ಅದಕ್ಕೂ ಜಂಟಿ ಸಮೀಕ್ಷೆ ನಡೆಸಿ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗಿದೆ. ಸೆ.4 ರಂದು ಒಂದು ತೀರ್ಮಾನಕ್ಕೆ ಬರಲಾಗುವುದು ಎಂದರು.

ಎನ್ ಡಿ ಆರ್ ಎಫ್ ಮಾರ್ಗಸೂಚಿಗಳ ಪರಿಷ್ಕರಣೆಗೆ ಮನವಿ

Advertisement

ಬರ ಘೋಷಣೆಯ ನಂತರ ಕೇಂದ್ರಸರ್ಕಾರಕ್ಕೆ ಬರಪೀಡಿತ ತಾಲ್ಲೂಕುಗಳಿಗೆ ನೆರವು ಕೋರಿ ಮನವಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಸಮಿತಿಯು ಸಮೀಕ್ಷೆ ನಡೆಸಿದ ನಂತರ , ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಹಣ ಬಿಡುಗಡೆ ಮಾಡುತ್ತದೆ. ರಾಜ್ಯಸರ್ಕಾರ ಈ ಅನುದಾನದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ . ಅದಲ್ಲದೇ ರಾಜ್ಯ ಸರ್ಕಾರವೂ ಪರಿಹಾರ ಕಾರ್ಯಗಳಿಗೆ ಹಣ ವಿನಿಯೋಗಿಸಲಿದೆ. 2020 ರಿಂದ ಇಲ್ಲಿಯವರೆಗೆ ಪರಿಷ್ಕರಣೆ ಆಗಿಲ್ಲ. ಎನ್ ಡಿ ಆರ್ ಎಫ್ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಹಾಗೂ ರಾಜ್ಯಗಳಿಗೆ ಹೆಚ್ಚು ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

ಅಖಂಡ ಕರ್ನಾಟಕ

ಕೃಷ್ಣಾ ಕಾವೇರಿ ಜೀವನದಿಗಳು. ಕಾವೇರಿ, ಕೃಷ್ಣಾ ನದಿ ಪಾತ್ರದಲ್ಲಿರುವವರೆಲ್ಲರೂ ನಮ್ಮ ರೈತರೇ. ತಾರತಮ್ಮ ಮಾಡುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕದಲ್ಲಿ ದಕ್ಷಿಣ, ಉತ್ತರ ಎಂಬ ಪ್ರಶ್ನೇ ಇಲ್ಲ ಎಂದರು.

ದೆಹಲಿಗೆ ಶೀಘ್ರ ಸರ್ವ ಪಕ್ಷ ನಿಯೋಗ

ಕಾವೇರಿ ನೀರಿಗೆ ಸಂಬಂಧಿಸಿದಂತೆ ಸರ್ವ ಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರ ಸಮಯವನ್ನು ಕೋರಿದ್ದೇವೆ. ಈಗಾಗಲೇ ನಮ್ಮ ಜಲಸಂಪನ್ಮೂಲ ಸಚಿವರು ನಮ್ಮ ರಾಜ್ಯದ ಪರವಾಗಿ ವಾದ ಮಂಡಿಸುವ ವಕೀಲರನ್ನು ಭೇಟಿ ಮಾಡಿ ಅವರಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಬುಧವಾರ ಪ್ರಕರಣ ವಿಚಾರಣೆಗೆ ಬರಲಿದ್ದು ನಮ್ಮ ವಾದ ಏನಿರಬೇಕು ಎಂದು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆಗೆ ಆಗ್ರಹ

ಕೇಂದ್ರ ಸಚಿವರು ಭೇಟಿಗೆ ಅವಕಾಶ ನೀಡಿದ್ದಲ್ಲಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು. ಮಹಾದಾಯಿ ಯೋಜನೆಗೆ ಅಧಿಸೂಚನೆ ಹೊರಡಿಸಲಾಗಿದ್ದರೂ, ಅರಣ್ಯ ಹಾಗೂ ಪರಿಸರ ತೀರುವಳಿ ದೊರೆತಿರುವುದಿಲ್ಲ.ಈ ಯೋಜನೆಗೆ ತೀರುವಳಿ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಇಂದು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಿಲ್ಲದ ಕಾರಣ ಹಾಗೂ ಕುಡಿಯುವ ನೀರಿನ ಕೊರತೆಯಿಂದಾಗಿ ಸಂಕಷ್ಟದ ಸಮಯವನ್ನು ಎದುರಿಸುವಂತಾಗಿದೆ. ಜಲನೀತಿಯ ಪ್ರಕಾರ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾಗುತ್ತದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು 1 ಲಕ್ಷ ಕೋಟಿ ರೂ. ಅಗತ್ಯ

ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು 1 ಲಕ್ಷ ಕೋಟಿ ರೂ.ಗಳ ಅಗತ್ಯವಿದೆ. 2023 ರ ಅಂದಾಜಿನ ಪ್ರಕಾರ 83700 ಕೋಟಿ ರೂ. ಇದ್ದು, ಯೋಜನೆ ಪೂರ್ಣಗೊಳ್ಳುವವರೆಗೆ 1 ಲಕ್ಷ ಕೋಟಿ ವೆಚ್ಚವಾಗುವ ಸಾಧ್ಯತೆ ಇದೆ. ರಾಜ್ಯಸರ್ಕಾರ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲು ಸಿದ್ಧವಿದ್ದು, ಕೇಂದ್ರಸರ್ಕಾರ ತ್ವರಿತಗತಿಯಲ್ಲಿ ಅಧಿಸೂಚನೆ ಹೊರಡಿಸಬೇಕಾಗಿದೆ. ಆದಾಗ್ಯೂ ಯೋಜನೆಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚಿನ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ
ಇಸ್ರೋ ಸಂಸ್ಥೆಯು ಆದಿತ್ಯ -ಎಲ್1 ಉಪಗ್ರಹವನ್ನು ಯಶಸ್ಸಿಯಾಗಿ ಉಡಾವಣೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಸ್ರೋ ವಿಜ್ಞಾನಿಗಳಿಗೆ ಶುಭ ಕೋರಲಾಗಿದೆ. ಚಂದ್ರಯಾನ -3 ರ ಯಶಸ್ಸಿಗೆ ದ್ಯೋತಕವಾಗಿ ಇಸ್ರೋ ವಿಜ್ಞಾನಿಗಳಿಗೆ ಸರ್ಕಾರದ ವತಿಯಿಂದ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗುವುದು ಎಂದರು.

ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ .ಎಂ.ಬಿ ಪಾಟೀಲ್ , ಸಚಿವರಾದ ಕೃಷ್ಣಬೈರೇಗೌಡ, ಶಾಸಕರಾದ ಎಚ್.ವೈ. ಮೇಟಿ, ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠಲ ಕಟಕದೋಂಡ, ಸಂಸದ ರಮೇಶ್ ಜಿಗಜಿಣಗಿ, ಪಿ.ಸಿ ಗದ್ದಿಗೌಡ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next