Advertisement

ಆಡಳಿತ ಯಂತ್ರಕ್ಕೆ ಮುಟ್ಟಿದ ಚುರುಕು: ಡಿ.ಸಿ., ಜಿ.ಪಂ. ಸಿಇಒಗಳಿಗೆ ಖಡಕ್‌ ಎಚ್ಚರಿಕೆ

11:38 PM May 23, 2023 | Team Udayavani |

ಬೆಂಗಳೂರು: ಹೊಸ ಸರಕಾರ ಅಸ್ತಿತ್ವಕ್ಕೆ ಬರು ತ್ತಿದ್ದಂತೆ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಂಗಳವಾರ ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಸಿಇಒಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಗಳು ಹಾಗೂ ಇತರ ಐಎಎಸ್‌, ಐಪಿಎಸ್‌ ಅಧಿಕಾರಿಗಳಿಗೆ ಸರಕಾರದ ಆಡಳಿತ ಆಶಯವನ್ನು ವಿವರಿಸಿದ್ದಾರೆ. ಕಾನೂನು ಸುವ್ಯವಸ್ಥೆ ಪಾಲನೆಯ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲೇಬೇಕು ಎಂಬ ಸ್ಪಷ್ಟ ಸೂಚನೆ ನೀಡಿದ್ದಾರೆ.

Advertisement

ನೈತಿಕ ಪೊಲೀಸ್‌ಗಿರಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿ ಸಾಮಾಜಿಕ ಸಾಮರಸ್ಯ ಹಾಳು ಮಾಡುವವರನ್ನು ಮಟ್ಟ ಹಾಕಬೇಕು ಎಂದು ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಂಗಾರು ಪ್ರಾರಂಭದ ಹಿನ್ನೆಲೆಯಲ್ಲಿ ಪ್ರವಾಹ ಸೇರಿ ಮಳೆ ಅನಾಹುತ, ಬೆಳೆ ನಷ್ಟ ತಡೆಗೆ ಮುನ್ನಚ್ಚರಿಕೆ ವಹಿಸಬೇಕು. ತುರ್ತು ಪರಿಹಾರ ಕಾಮಗಾರಿಗಳನ್ನು ತತ್‌ಕ್ಷಣ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳದ್ದು ಜವಾಬ್ದಾರಿಯುತ ಸ್ಥಾನ. ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆಯನ್ನು ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಸರಕಾರಕ್ಕೆ ಒಳ್ಳೆಯ ಹೆಸರು ಬರಬೇಕು. ಸೋಮಾರಿತನ ಸಹಿಸುವುದಿಲ್ಲ ಎಂದೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.

ಕಠಿನ ಕ್ರಮಕ್ಕೆ ಸಿದ್ಧರಾಗಿ
ಡಿ.ಸಿ.ಗಳು, ಜಿ.ಪಂ. ಸಿಇಒಗಳ ಜತೆಗಿನ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಮುಖ್ಯಮಂತ್ರಿ, ನಾನು ಕೇವಲ ಸೂಚನೆ ಕೊಡುವುದಿಲ್ಲ; ಎಚ್ಚರಿಕೆ ನೀಡುತ್ತಿದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿನ ಕ್ರಮಕ್ಕೆ ಸಿದ್ದರಾಗಿ. ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಜನರು ಪ್ರಾಣ ಕಳೆದುಕೊಂಡಿದ್ದಾರೆ, ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ತತ್‌ಕ್ಷಣ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದರು.

ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಿ. ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 540 ಕೋಟಿ ರೂ. ಇದೆ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿದ್ಯುತ್‌ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ಗಳು ಕೆಟ್ಟಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಕೂಡಲೇ ದುರಸ್ತಿ ಕೆಲಸ ಮಾಡಬೇಕು. ತಹಸೀಲ್ದಾರ್‌, ಜಿಲ್ಲಾಧಿಕಾರಿಗಳು ನಿರಂತರವಾಗಿ ಪ್ರವಾಸದಲ್ಲಿರಬೇಕು. ಹಲವು ವರ್ಷಗಳಿಂದ ಪ್ರವಾಹ ನೋಡುತ್ತಿದ್ದೀರಿ. ಹವಾಮಾನ ಇಲಾಖೆಯ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ ಎಂದು ತಿಳಿಸಿದರು.

Advertisement

ಡಿಸಿಎಂ ಬೇಸರ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತನಾಡಿ, ಹಿಂದಿನ ಸರಕಾರದ ಅವಧಿಯಲ್ಲಿ ರಾಜ್ಯದ ಜನ ಸಾಕಷ್ಟು ಕಷ್ಟ ಅನುಭವಿಸಿದರು. ಮಳೆ, ಪ್ರವಾಹದಿಂದ ಸಾಕಷ್ಟು ಬೆಳೆ ನಷ್ಟವಾಗಿ ಹಲವರು ಪ್ರಾಣ ಕಳೆದುಕೊಂಡರು. ಆದರೆ ಬಹುತೇಕ ಅಧಿಕಾರಿಗಳು ಆ ಸಂದರ್ಭದಲ್ಲಿ ಸರಿಯಾಗಿ ಸ್ಪಂದಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಚಾಮರಾಜನಗರ ಆಮ್ಲಜನಕ ದುರಂತ ಪ್ರಕರಣದಲ್ಲಿ ಮೃತಪಟ್ಟವರಿಗೆ ಪರಿಹಾರ ಕೊಡುವ, ಆ ಕುಟುಂಬಗಳಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ಅಧಿಕಾರಿಗಳು ತೋರಲಿಲ್ಲ, ಇದು ಅಕ್ಷಮ್ಯ. ನೀವು ಸರಿಯಾಗಿ ಕೆಲಸ ಮಾಡಿದರೆ ಸರಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದರು

ಅಧಿಕಾರಿಗಳೇ ಹೊಣೆ
ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಬೇಕು. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರ ಜತೆಗೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.

ನಯಾ ಪೈಸೆ ಬೇಡ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತನಾಡಿ, ಈ ಸರಕಾರದಿಂದ ಜನರಿಗೆ ಬದಲಾವಣೆಯ ಸಂದೇಶ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ ಎಂದರು.
ನಮ್ಮ ಸರಕಾರದಲ್ಲಿ ಎಲ್ಲವೂ ಪರಿಶುದ್ಧ ಆಗಿರಬೇಕು. ಜನರು ನಿರೀಕ್ಷಿಸಿದ ಬದಲಾವಣೆ ಪೊಲೀಸ್‌ ಇಲಾಖೆಯಿಂದಲೇ ಆರಂಭ ಆಗಬೇಕು. ಎಸ್‌ಐ ನೇಮಕಾತಿ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಉತ್ತರಪತ್ರಿಕೆ ತದ್ದಿದ್ದಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ. ಪತ್ರಿಕಾಗೊಷ್ಠಿ ನಡೆಸಿ ಹಗರಣ ಬಯಲಿಗೆ ತಂದವರಿಗೆ ಕಿರುಕುಳ ಕೊಟ್ಟಿದ್ದೀರಿ. ಪ್ರಿಯಾಂಕ್‌ ಖರ್ಗೆ ಅವರಿಗೆ ಕಾಟ ಕೊಡಲಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯ ಅವರ ಜತೆ ಹೇಗೆ ನಡೆದುಕೊಂಡಿದ್ದೀರಿ ಎಂಬುದು ಗೊತ್ತಿದೆ. ನಮ್ಮ ಮೇಲೆ ಕೇಸ್‌ ಹಾಕಿದಿರಿ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದಿರಿ. ಆಗ ಆಡಳಿತ ಪಕ್ಷದ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೆ ಅವರ ಜತೆ ಶಾಮೀಲಾದಿರಿ ಎಂದು ಏರುಧ್ವನಿಯಲ್ಲಿ ದೂರಿದರು.
ನೀವು ಬದಲಾಗಬೇಕು, ನಿಮ್ಮ ವರ್ತನೆ ಬದಲಾಗಬೇಕು. ಇಲ್ಲಿದ್ದರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ. ನಾವು ದ್ವೇಷ ಸಾಧಿಸುವುದಿಲ್ಲ. ಹೊಸದಾಗಿ ಕೆಲಸ ಆರಂಭಿಸಿ. ಜನರ ನೆಮ್ಮದಿ ಕಾಪಾಡಿ. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮ ಜತೆ ಇರುತ್ತೇವೆ ಎಂದು ಹೇಳಿದರು.
ಸಭೆಯಲ್ಲಿ ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಎಚ್‌. ಮುನಿಯಪ್ಪ, ಜಮೀರ್‌ ಅಹ್ಮದ್‌, ಎಂ.ಬಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ| ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

“ಫೀಲ್ಡ್‌ಗೆ ಹೋಗ್ರೀ’
ಅಧಿಕಾರಿಗಳು ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಕಾರ್ಯಕ್ಷೇತ್ರಕ್ಕೆ ಹೋಗಬೇಕು. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಲೋಪ ಆಗಬಾರದು. ಜನರು ಸರಕಾರದಿಂದ ಬದಲಾವಣೆ ಬಯಸಿದ್ದಾರೆ. ಸರಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರಕಾರ ಬಂದಿದೆ ಎಂಬ ಸಂದೇಶ ಹೋಗಬೇಕು.
– ಸಿದ್ದರಾಮಯ್ಯ, ಸಿಎಂ

ಕೇಸರೀಕರಣಕ್ಕೆ ಅವಕಾಶ ಇಲ್ಲ: ಡಿಸಿಎಂ
“ಪೊಲೀಸ್‌ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು, ವಿಜಯಪುರ, ಬಾಗಲಕೋಟೆಯಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕಿಕೊಂಡು ಇಲಾಖೆಗೆ ಅವಮಾನ ಮಾಡಿದ್ದೀರಿ ಎಂಬುದು ಗೊತ್ತಿದೆ. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಪೊಲೀಸ್‌ ಅಧಿಕಾರಿಗಳನ್ನು ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು.

“ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ಟಿಪ್ಪು ಸುಲ್ತಾನ್‌ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್‌ ಹಾಕಲಿಲ್ಲ ನೀವು? ಅದು ಕ್ರೆ„ಂ ಅಲ್ವಾ’ ಎಂದು ಪ್ರಶ್ನಿಸಿದರು.
ಕರ್ನಾಟಕ ಪೊಲೀಸ್‌ ಇಲಾಖೆಗೆ ಉತ್ತಮ ಹೆಸರಿತ್ತು. ಆದರೆ ಕೆಲವರು ಕಳೆದ ಸರಕಾರದ ಅವಧಿಯಲ್ಲಿ ಅದಕ್ಕೆ ಚ್ಯುತಿ ತಂದರು ಎಂದು ಸಿಡಿಮಿಡಿಗೊಂಡ ಡಿಕೆಶಿ, ಉರಿಗೌಡ-ನಂಜೇಗೌಡ ವಿವಾದ ಪ್ರಕರಣ ಪ್ರಸ್ತಾವಿಸಿ, “ಬಿಜೆಪಿ ಸರಕಾರದ ಅವಧಿಯಲ್ಲಿ ಪೊಲೀಸರು ಹೇಗೆಲ್ಲ ನಡೆದುಕೊಂಡಿದ್ದರು ಎಂದು ಗೊತ್ತಿದೆ. ಕಾನೂನು ಪ್ರಕಾರ ನೀವು ಕೆಲಸ ಮಾಡಿ. ರಾಜ್ಯದಲ್ಲಿ ಶಾಂತಿ ನೆಲೆಸಲು ನಿಮ್ಮ ಹೊಣೆಗಾರಿಕೆ ಹೆಚ್ಚಾಗಿದೆ’ ಎಂದರು.

ಡ್ರಗ್ಸ್‌ ವಿರುದ್ಧ ಸಮರಕ್ಕೆ ಸೂಚನೆ
ರಾಜ್ಯದಲ್ಲಿ ಡ್ರಗ್‌ ಮಾಫಿಯಾ ಬಗ್ಗೆ ವಿಶೇಷ ನಿಗಾ ವಹಿಸಿ ಎಂದು ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಲಾ-ಕಾಲೇಜುಗಳ ಬಳಿ ಗಸ್ತು ನಿಯೋಜಿಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸಿಗದಂತೆ ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.

ಡ್ರಗ್ಸ್‌ ವ್ಯಸನಕ್ಕೆ ಯುವ ಸಮೂಹ ತುತ್ತಾಗುತ್ತಿರುವುದು ಕಳವಳಕಾರಿ. ವಿದೇಶಗಳಿಂದ ಬರುವ ಮಾದಕ ವಸ್ತುಗಳ ಬಗ್ಗೆ ನಿಗಾ ವಹಿಸಬೇಕು. ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಬಿಗಿ ತಪಾಸಣೆ ನಡೆಸಬೇಕು. ಮಾದಕ ವಸ್ತು ಸಾಗಾಟ ಜಾಲದ ಬಗ್ಗೆ ಹದ್ದಿನ ಕಣ್ಣಿಡಬೇಕು ಎಂದು ಸೂಚಿಸಿದರು. ರಾಜಧಾನಿ ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಡ್ರಗ್ಸ್‌ ಮಾಫಿಯಾ ತಲೆ ಎತ್ತಿದೆ. ಡ್ರಗ್‌ ಮಾಫಿಯಾವನ್ನು ನಮ್ಮ ಸರಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಡ್ರಗ್ಸ್‌ , ಸೈಬರ್‌ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ದೊಡ್ಡ ಮಟ್ಟದ ಹಾನಿಯಾಗುತ್ತಿದೆ. ಹೀಗಾಗಿ ಈ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಟಾಸ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next