Advertisement

ಮಹಿಳೆಯರಿಗೆ ಸಂಪುಟದಲ್ಲಿಯೂ ಪ್ರಾತಿನಿಧ್ಯ ಅಗತ್ಯ: ಡಾ.ಪುಷ್ಪಾ

06:55 AM Dec 08, 2018 | |

ಬೆಂಗಳೂರು:ರಾಜಕೀಯದಲ್ಲಿ ಮಹಿಳೆಯರು ಹೆಚ್ಚು ಸಕ್ರೀಯರಾಗಿ ಕಾರ್ಯ ನಿರ್ವಹಿಸಲು ಸಂಪುಟದಲ್ಲಿಯೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಹೇಳಿದ್ದಾರೆ.

Advertisement

ರಾಜ್ಯ ಮಹಿಳಾ ಕಾರ್ಯಕಾರಿಣಿ ಉದ್ದೇಶಿಸಿ ಮಾತನಾಡಿದ ಅವರು, ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡಲೇಬೇಕು. ಕೇಂದ್ರದ ಬಿಜೆಪಿ ಸರ್ಕಾರ ಸಾಕಷ್ಟು ಕೆಲಸ ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಮಹಿಳಾ ಸಬಲೀಕರಣಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ಎಲ್ಲ ಚುನಾವಣೆಗಳಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಸಂವಿಧಾನದ ಅಡಿಯಲ್ಲಿ ನಡೆಯುವ ಚುನಾವಣೆಯಲ್ಲಿ ಮಹಿಳೆಯರ ಮತಕ್ಕೆ ಹೆಚ್ಚಿನ ಮಾನ್ಯತೆ ಇದೆ ಎಂದು ತಿಳಿಸಿದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮಹಿಳಾ ಘಟಕಕ್ಕೆ ದೊಡ್ಡ ಸವಾಲಿದೆ.ನಮ್ಮ ನೋವಿಗೆ ಧ್ವನಿಯಾಗುವವರನ್ನು ಆಯ್ಕೆ ಮಾಡಬೇಕಿದೆ. ಅದಕ್ಕಾಗಿ ಮಹಿಳಾ ಘಟಕ ರಾಜ್ಯದ ಪ್ರತಿ ಮನೆಗೂ ತಲುಪಬೇಕು. ಮಹಿಳಾ ಮತದಾರರನ್ನು ಕಾಂಗ್ರೆಸ್‌ಗೆ ಸೆಳೆಯುವ ಕೆಲಸ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವತಿಯರನ್ನು ಸೆಳೆಯುವ ಪ್ರಯತ್ನ ಮಾಡಬೇಕು. ಮುಂದಿನ ಒಂದು ತಿಂಗಳು ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಮೀಸಲಿಟ್ಟು ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಬೇಕು. ಯುವತಿಯರನ್ನು ಸೆಳೆಯಲು ಇಂದಿರಾ ಪ್ರಿಯದರ್ಶಿನಿ ಯೋಜನೆ ಜಾರಿಗೆ ತರಲಾಗಿದೆ. ಶಕ್ತಿ ಯೋಜನೆ ನೇರವಾಗಿ ರಾಹುಲ್‌ ಗಾಂಧಿಯನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಲಾಗಿದೆ. ಎರಡೂ ಕಾರ್ಯಕ್ರಮಗಳನ್ನು ಸಮರ್ಥವಾಗಿ ನಿರ್ವಹಿಸಬೇಕು. ಪಕ್ಷಕ್ಕಾಗಿ ಕೆಲಸ ಮಾಡಿದವರನ್ನು ಪಕ್ಷ ಗುರುತಿಸುತ್ತದೆ. ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next