Advertisement

ಕಾವೇರಿ ತುಲಾ ಸಂಕ್ರಮಣ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

01:55 AM Oct 03, 2018 | Team Udayavani |

ಮಡಿಕೇರಿ: ಈ ತಿಂಗಳ 17 ರಂದು ಜರಗುವ ತುಲಾ ಸಂಕ್ರಮಣ ಜಾತ್ರೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾವೇರಿ ತುಲಾ ಸಂಕ್ರಮಣ ಜಾತ್ರಾ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಅಕ್ಟೋಬರ್‌ 17ರಂದು ಸಂಜೆ 6.43 ಗಂಟೆಗೆ ತೀರ್ಥೋದ್ಭವ ಪುಣ್ಯಕಾಲ ಜರಗುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಬಸ್‌ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ಮಡಿಕೇರಿಯಿಂದ ತಲಕಾವೇರಿವರೆಗೆ ರಸ್ತೆ ಗುಂಡಿ ಮುಚ್ಚುವುದು, ರಸ್ತೆ ಬದಿ ಕಾಡು ಕಡಿಯುವುದು, ಸುಣ್ಣ ಬಣ್ಣ ಬಳಿಯುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರಿಗೆ ಪಿ.ಐ. ಶ್ರೀವಿದ್ಯಾ ಅವರು ನಿರ್ದೇಶ ನೀಡಿದರು.

ಭಾಗಮಂಡಲದಿಂದ ತಲಕಾವೇರಿ ವರೆಗೆ ಬೀದಿ ದೀಪ ಅಳವಡಿಸುವುದು, ಹಾಗೆಯೇ ನಿರಂತರ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಸೆಸ್ಕ್ ಇಲಾಖೆ ಎಂಜಿನಿಯರ್‌ಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ತಲಕಾವೇರಿ ಕುಂಡಿಕೆ ಹಾಗೂ ಕೊಳದ ಬಳಿ ನೂಕುನುಗ್ಗಲು ಉಂಟಾಗದಂತೆ ಅಗತ್ಯ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು. ಗಣ್ಯ ವ್ಯಕ್ತಿಗಳು, ಅತಿಥಿಗಳು, ಒಬಿ ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದು. ತುರ್ತು ಸಂದರ್ಭದಲ್ಲಿ ನಿರ್ವಹಿಸಲು ಅಗ್ನಿ ಶಾಮಕ ದಳ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸೂಚನೆ ನೀಡಿದರು. ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯುವುದು. ಆ್ಯಂಬುಲೆನ್ಸ್‌ ಕಲ್ಪಿಸುವುದು, ನುರಿತ ವೈದ್ಯರು ಹಾಗೂ ಸಿಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಈಗಾಗಲೇ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಲಾಗಿದೆ. ಆ ನಿಟ್ಟಿನಲ್ಲಿ ಜಾತ್ರೆ ಸಂದರ್ಭದಲ್ಲಿಯೂ ಪ್ಲಾಸ್ಟಿಕ್‌ನ್ನು ಬಳಸಬಾರದು. ಈ ಬಗ್ಗೆ ಮಾಹಿತಿ ನೀಡಬೇಕು. ಅಗತ್ಯವಿರುವ ಕಡೆ ಡಸ್ಟ್‌ ಬಿನ್‌ಗಳನ್ನು ಇಡುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ಅಧ್ಯಕ್ಷತೆಯಲ್ಲಿ ಮತ್ತೂಂದು ಸಭೆ ಆಹ್ವಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿ.ಪಂ.ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರ ಅವರು ಮಾತನಾಡಿ ತಲಕಾವೇರಿ, ಭಾಗಮಂಡಲಕ್ಕೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ಕಲ್ಪಿಸುವುದು, ಸ್ವತ್ಛತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಭಾಗಮಂಡಲ ಗ್ರಾಮ ಪಂಚಾಯತ್‌ ಪಿಡಿಓಗೆ ಸೂಚಿಸಿದರು. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪೌರ ಕಾರ್ಮಿಕರನ್ನು ನಿಯೋಜಿಸಲು ನಗರಸಭೆ ಪೌರಾಯುಕ್ತರಿಗೆ ಪತ್ರ ಬರೆಯುವಂತೆ ತಾಲೂಕು ಪಂಚಾಯತ್‌  ಇಒಗೆ ಅವರು ಸಲಹೆ ಮಾಡಿದರು.

Advertisement

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ.ಪೆನ್ನೇಕರ್‌ ಅವರು ತುಲಾ ಸಂಕ್ರಮಣ ಜಾತ್ರೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ವಾಹನ ಸುಗಮ ಸಂಚಾರಕ್ಕೆ ಅಗತ್ಯ ಬ್ಯಾರಿಕೇಡ್‌ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ಉಪ ಪೊಲೀಸ್‌ ವರಿಷ್ಠಾಧಿಕಾರಿ ಸುಂದರರಾಜ್‌ ಅವರು ಮಾತನಾಡಿ ಸುಗಮ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಗಮನ ಹರಿಸಲಾಗುವುದು ಎಂದು ಅವರು ಹೇಳಿದರು.

ಸಣ್ಣುವಂಡ ಕಾವೇರಪ್ಪ ಅವರು ಮಾತನಾಡಿ ತುಲಾ ಸಂಕ್ರಮಣ ಜಾತ್ರೆ ಅನಂತರ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಆಂದೋಲನ ಆಯೋಜಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಕೆ.ಟಿ. ದರ್ಶನ್‌ ಅವರು ಮಾಹಿತಿ ನೀಡಿದರು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಅನುಕೂಲಕ್ಕಾಗಿ ವಸ್ತುಪ್ರದರ್ಶನ ಏರ್ಪಡಿಸಲಾಗುವುದು ಎಂದು ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಗಿರೀಶ್‌ ಅವರು ಸಭೆಗೆ ಮಾಹಿತಿ ನೀಡಿದರು.

ಪೊಲೀಸ್‌ ಇನ್‌ಸ್ಪೆಕ್ಟರ್‌ ಮೇದಪ್ಪ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಇಬ್ರಾಹಿಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ರವಿಕುಮಾರ್‌, ಸೆಸ್ಕ್ ಎಇಇ ದೇವಯ್ಯ, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಗೀತಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ನಳವಾರ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್‌, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಾಲ್ಟರ್‌ ಡಿ’ಮೆಲ್ಲೋ, ಭಾಗಮಂಡಲ ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಇಒ ಜಗದೀಶ್‌ ಕುಮಾರ್‌ ಇತರರು ಹಲವು ಮಾಹಿತಿ ನೀಡಿದರು.

ಅ.17ರ ಸಂಜೆ 6.43ಕ್ಕೆ ತೀರ್ಥೋದ್ಭವ
ಅ. 5ರಂದು ಬೆಳಗ್ಗೆ 10.15 ಗಂಟೆಗೆ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ. 15ರಂದು ಬೆಳಗ್ಗೆ 10.25 ಗಂಟೆಗೆ ವೃಶ್ಚಿಕ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಅ. 15ರಂದ ಮಧ್ಯಾಹ್ನ 3 ಗಂಟೆ 37 ನಿಮಿಷಕ್ಕೆ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇಡುವುದು. ಅ. 17ರ ಸಂಜೆ 6.43 ಗಂಟೆಗೆ  ಮೇಷ ಲಗ್ನದಲ್ಲಿ  ಮೂಲ ಕಾವೇರಿ ತೀಥೋìದ್ಭವ ಜರಗಲಿದೆ. ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀಥೋìದ್ಭವಕ್ಕೆ ಆಗಮಿಸಿ ಕಾವೇರಿ ಮಾತೆಯ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯ ವ್ಯವಸ್ಥಾಪನಾ ಸಮಿತಿ ಕೋರಿದೆ.

ನೇರ ವೀಕ್ಷಣೆಗೆ ಎಲ್‌.ಸಿ.ಡಿ. ವ್ಯವಸ್ಥೆ
ಭಾಗಮಂಡಲ-ಭಗಂಡೇಶ್ವರ-ತಲಕಾವೇರಿ ದೇವಾಲಯ ವ್ಯವ ಸ್ಥಾಪನಾ ಸಮಿತಿ ಅಧ್ಯಕ್ಷ‌ ಬಿ.ಎಸ್‌.ತಮ್ಮಯ್ಯ ಅವರು ಮಾತನಾಡಿ ಅರ್ಚಕರು ಮತ್ತು ತಕ್ಕ ಮುಖ್ಯಸ್ಥರು ಕುಂಡಿಕೆ ಬಳಿ ಇರುತ್ತಾರೆ. ಉಳಿದಂತೆ ಗಣ್ಯರು, ಪತ್ರಕರ್ತರು ಒಂದು ಕಡೆ ಇರುತ್ತಾರೆ. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ತುಲಾ ಸಂಕ್ರಮಣ ಒಂದು ತಿಂಗಳವರೆಗೆ ಅಗತ್ಯ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಅವರು ಕೋರಿದರು. ಜಾತ್ರೆ ಸಂದರ್ಭದಲ್ಲಿ ಶಾಮಿಯಾನ, ಧ್ವನಿವರ್ಧಕ ವ್ಯವಸ್ಥೆ, ತೀಥೋìದ್ಭವ ದಿನದಂದು ಭಕ್ತರಿಗೆ ನೇರ ವೀಕ್ಷಣೆಗೆ ಎಲ್‌.ಸಿ.ಡಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next