ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ಬಳಿಕ ಆ ಹುದ್ದೆಗೆ ಯಾರು ಎಂಬ ಚರ್ಚೆ ನಡೆಯುತ್ತಲೇ ಇದೆ. ಈ ವಾರಾಂತ್ಯಕ್ಕೆ ಮಧ್ಯಂತರ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ. ಅದಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೆಸರು ಕೇಳಿಬರುತ್ತದೆ. ಪಕ್ಷದ ಇತರ ನಾಯಕರಾದ ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್, ಜ್ಯೋತಿರಾದಿತ್ಯ ಸಿಂಧಿಯಾ, ಸುಶೀಲ್ ಕುಮಾರ್ ಶಿಂಧೆ ಅವರ ಹೆಸರುಗಳೂ ಚಾಲ್ತಿಯಲ್ಲಿವೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೇರಿ ಅಧ್ಯಕ್ಷ ಸ್ಥಾನಕ್ಕೆ ನಿಗದಿತ ವ್ಯಕ್ತಿಯನ್ನು ಆಯ್ಕೆ ಮಾಡುವ ವರೆಗೆ ಈ ವ್ಯವಸ್ಥೆ ಮುಂದುವರಿಯಲಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ‘ನ್ಯೂಸ್ 18’ಗೆ ತಿಳಿಸಿದ್ದಾರೆ. ಮುಂದಿನ ಅಧ್ಯಕ್ಷರು ಯಾರು ಎನ್ನುವುದು ನಿರ್ಧಾರವಾಗದೆ, ಹಿರಿಯ ನಾಯಕರು ಪಕ್ಷ ತ್ಯಜಿಸಲಾರಂಭಿಸಿದ್ದಾರೆ. ಮಂಗಳವಾರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಶಾಸಕ ಮತ್ತು ರಾಜ್ಯಸಭೆ ಸದಸ್ಯ ಸಂಜಯ ಸಿಂಗ್ ಪಕ್ಷ ತ್ಯಜಿಸುವ ಘೋಷಣೆ ಮಾಡಿದ್ದರು.